ಬೆಂಗಳೂರು: ಕೋವಿಡ್-19 ಸಂದಿಗ್ಧ ಪರಿಸ್ಥಿತಿಯ ನಡುವೆ ಎಲ್ಲ ಇಲಾಖೆಯ ಸಮನ್ವಯದೊಂದಿಗೆ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ನೀಡಲಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಎಸ್ಎಸ್ಎಲ್ ಸಿ ಪರೀಕ್ಷೆಯ ನಂತರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿದರು.
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಜೇಷನ್ ಮಾಡಿಕೊಂಡು ಪರೀಕ್ಷೆ ಬರೆದಿರುವುದು ದೇಶಕ್ಕೆ ಮಾದರಿಯಾಗಿದೆ. ಸಮಾಜವು ಮಕ್ಕಳನ್ನು ನೋಡಿ ಈ ಅಂಶಗಳನ್ನು ಅಳವಡಿಸಿಕೊಳ್ಳುವಂತಾಗಲಿ ಎಂದರು.
ಎಸ್ಎಸ್ಎಲ್ ಸಿ ಫಲಿತಾಂಶ ಆಗಸ್ಟ್ ಮೊದಲ ವಾರದ ಆಸುಪಾಸಿನಲ್ಲಿ ಫಲಿತಾಂಶ ನೀಡಲಿದ್ದೇವೆ. ದ್ವಿತೀಯ ಪಿಯುಸಿ ಫಲಿತಾಂಶ ಜುಲೈ ಮೂರನೇ ವಾರದಲ್ಲಿ ನೀಡಲಿದ್ದೇವೆ ಎಂದರು.
ಸಕಾರಣದಿಂದ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳು ಯಾವುದೇ ಭಯಪಡುವ ಅಗತ್ಯವಿಲ್ಲ. ಪೂರಕ ಪರೀಕ್ಷೆಯಲ್ಲಿ ರೆಗ್ಯುಲರ್ ಅಭ್ಯರ್ಥಿಗಳಾಗಿಯೇ ಪರೀಕ್ಷೆ ಬರೆಯಲು ಅವಕಾಶ ನೀಡುತ್ತೇವೆ ಎಂದರು.
ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸದಸ್ಯರ ಸಹಕಾರ, ಸ್ಥಳೀಯ ಜನ ಪ್ರತಿನಿಧಿಗಳ ಕಾಳಜಿ, ವಿರೋಧ ಪಕ್ಷದ ನಾಯಕರ ಸಕಾರಾತ್ಮಕ ಸ್ಪಂದನೆ ಮತ್ತು ಎಲ್ಲ ಇಲಾಖೆಯ ಅಧಿಕಾರಿಗಳ ಸಮನ್ವಯದಿಂದ ಪರೀಕ್ಷೆ ಯಶಸ್ವಿಯಾಗಿದೆ ಎಂದು ಹೇಳಿದರು.