Advertisement

21ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ರಾಮಚಂದ್ರನ್‌

03:43 PM Jun 18, 2019 | Team Udayavani |

ಬಾಗಲಕೋಟೆ: ಜಿಲ್ಲೆಯಲ್ಲಿ ಜೂ.21ರಿಂದ 28ರ ವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಇರುವುದರಿಂದ ಯಾವುದೇ ರೀತಿಯಲ್ಲಿ ನಕಲಿಗೆ ಅವಕಾಶ ನೀಡಬಾರದು. ನಕಲು ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಸೂಸುತ್ರ ಮತ್ತು ಕಾನೂನಾತ್ಮಕವಾಗಿ ಪರೀಕ್ಷೆ ನಡೆಸಲು ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 7,197 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾದಾಮಿ-3, ಬಾಗಲಕೋಟೆ-4, ಬೀಳಗಿ-3, ಹುನಗುಂದ-2, ಜಮಖಂಡಿ-6 ಹಾಗೂ ಮುಧೋಳದಲ್ಲಿ-4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಪರೀಕ್ಷೆಗಳು ಬೆಳಗ್ಗೆ 9:30ರಿಂದ ಪ್ರಾರಂಭವಾಗುತ್ತಿದ್ದು, 9.45ರ ನಂತರ ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಪ್ರವೇಶವಿರುವುದಿಲ್ಲ. ಪ್ರತಿಯೊಂದು ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ತಿಳಿಸಿದರು.

ಒಟ್ಟು 22 ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ಕೇಂದ್ರದ ಮುಖ್ಯ ಅಧೀಕ್ಷಕರಾಗಿದ್ದು, ತಮಗೆ ನೀಡಿರುವ ಕರ್ತವ್ಯಗಳನ್ನು ಪಾಲಿಸಿ ಯಾವುದೇ ತರಹದ ಲೋಪ ಕಂಡು ಬರದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸೂಚಿಸಿದರು. ನಕಲು ರಹಿತ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ಜಾಗೃತ ದಳ ಹಾಗೂ ಜಿಲ್ಲಾಮಟ್ಟದ ಜಾಗೃತ ದಳವನ್ನು ನೇಮಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರಗಳ ವರಾಂಡ ಮತ್ತು ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನು ಹೊರತುಪಡಿಸಿ ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಸಿಬ್ಬಂದಿಗಳು ಪರೀಕ್ಷಾ ಅವಧಿಯಲ್ಲಿ ಮೊಬೈಲ್ ಬಳಸುವಂತಿಲ್ಲ. ಮಾರ್ಗಾಧಿಕಾರಿಗಳು ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆ ತಲುಪಿಸುವ ವ್ಯವಸ್ಥೆಯಾಗಬೇಕು. ಪಾರದರ್ಶಕವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್‌ ಸುತ್ತ ಸಾರ್ವಜನಿಕರ ನಿಷೇಧ, ಝರಾಕ್ಸ್‌ ಸೆಂಟರ್‌ ಮುಚ್ಚಲು 144 ಕಲಂ ಜಾರಿ ಹಾಗೂ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದರು.

Advertisement

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್. ಗೋನಾಳ ಪರೀಕ್ಷಾ ಸಿದ್ಧತೆ ಕುರಿತು ಸಭೆಗೆ ವಿವರವಾಗಿ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ, ಉಪವಿಭಾಗಾಧಿಕಾರಿ ಎಚ್. ಜಯಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಶಿಧರ ಪೂಜಾರಿ, ಜಿಲ್ಲಾ ಖಜಾನೆ ಇಲಾಖೆಯ ಅಧಿಕಾರಿ ಬನ್ನಿದಿನ್ನಿ, ಪರೀಕ್ಷಾ ನೋಡಲ್ ಅಧಿಕಾರಿ ಪೋಲೇಶ ಮುಂತಾದವರು ಉಪಸ್ಥಿತರಿದ್ದರು.

ಪರೀಕ್ಷಾ ವೇಳಾಪಟ್ಟಿ:

ಜೂ.21ರಂದು ಗಣಿತ, 24ರಂದು ವಿಜ್ಞಾನ, 25ರಂದು ಕನ್ನಡ, 26ರಂದು ಸಮಾಜ ವಿಜ್ಞಾನ, 27 ರಂದು ಇಂಗ್ಲಿಷ್‌ ಹಾಗೂ 28ರಂದು ಹಿಂದಿ ವಿಷಯ ಪರೀಕ್ಷೆಗಳು ನಡೆಯಲಿವೆ. ಕೋರ್‌ ಸಬ್ಜೆಕ್ಟ್ ಮತ್ತು ಪ್ರಥಮ ಭಾಷೆ ಕನ್ನಡ ವಿಷಯ ಪರೀಕ್ಷೆಗಳು ಬೆಳಗ್ಗೆ 9:30ರಿಂದ ಮಧ್ಯಾಹ್ನ 12:30ರ ವರೆಗೆ ನಡೆದರೆ, ದ್ವಿತೀಯ ಭಾಷೆ ಇಂಗ್ಲಿಷ್‌ ಮತ್ತು ತೃತೀಯ ಭಾಷೆ ಹಿಂದಿ ಪರೀಕ್ಷೆಗಳು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 12 ಗಂಟೆವರೆಗೆ ನಡೆಯಲಿವೆ.
Advertisement

Udayavani is now on Telegram. Click here to join our channel and stay updated with the latest news.

Next