Advertisement

ಚುಚ್ಚು ಮದ್ದು ನೀಡಲಿರುವ ಶಾ: ಏಪ್ರಿಲ್ 11 ರಿಂದ ಬಿಜೆಪಿ ನಾಯಕರ ರಾಜ್ಯ ಪ್ರವಾಸ

11:21 AM Mar 30, 2022 | Team Udayavani |

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ಸಂಘಟನಾತ್ಮಕವಾಗಿ ರಾಜ್ಯ ಬಿಜೆಪಿ ಘಟಕಕ್ಕೆ ಚುಚ್ಚು ಮದ್ದು ನೀಡಲಿದ್ದಾರೆ‌.‌ಚುನಾವಣಾ ಸಿದ್ಧತೆಯ ಭಾಗವಾಗಿ ಏಪ್ರೀಲ್ 11 ರಿಂದ ರಾಜ್ಯ ಬಿಜೆಪಿ ನಾಯಕರ ರಾಜ್ಯ ಪ್ರವಾಸಕ್ಕೆ ಅವರು ರೂಪು-ರೇಷೆ ಹಾಕಿಕೊಡಲಿದ್ದಾರೆ.

Advertisement

ಬಿಜೆಪಿ ಉನ್ನತ ಮೂಲಗಳ ಪ್ರಕಾರ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಮೂರು ತಂಡಗಳಾಗಿ ರಾಜ್ಯ ಪ್ರವಾಸ ನಡೆಸುವುದಕ್ಕೆ ಯೋಜನೆ ರೂಪಿಸಲಾಗಿದೆ. ಈ ಪೈಕಿ ಒಂದು ತಂಡವನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮುನ್ನಡೆಸಲಿದ್ದು, ಈ ಸಂಬಂಧ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಯಡಿಯೂರಪ್ಪ ಜತೆಗೆ ಮಂಗಳವಾರ ಚರ್ಚೆ ನಡೆಸಿದ್ದಾರೆ.

ಅಮಿತ್ ಶಾ ಅವರು ಬುಧವಾರ ರಾತ್ರಿ 10 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದು, ಗುರುವಾರ ಬೆಳಗ್ಗೆ ಅರಮನೆ ಮೈದಾನದಲ್ಲಿ ನಡೆಯುವ ಸಹಕಾರ‌‌‌ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಗುರುವಾರ ರಾತ್ರಿ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಕರೆಯಲಾಗಿದ್ದು ಅಲ್ಲಿ ಸಂಘಟನೆ ಹಾಗೂ ಸಂಪುಟಕ್ಕೆ ಸಂಬಂಧಪಟ್ಟಂತೆ ಮಹತ್ವದ ವಿಚಾರ ಚರ್ಚೆಗೆ ಬರಲಿದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಹಲವು ತಿಂಗಳ ಬಳಿಕ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯದ ಚುನಾವಣಾ ಉಸ್ತುವಾರಿಯನ್ನು ಅವರೇ ನಿರ್ವಹಿಸಲಿದ್ದಾರೆ ಎಂದು ಬಿಜೆಪಿ‌ ಮೂಲಗಳು ಹೇಳುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next