ಮೈಸೂರು: ದೇಶದಲ್ಲಿ ಕೋಮುವಾದ ಪ್ರಬಲವಾಗುತ್ತಿರುವ ಸಂದರ್ಭದಲ್ಲಿ ಜಾತ್ಯತೀತ ಪಕ್ಷವನ್ನು ಬೆಂಬಲಿಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ನಿಟ್ಟಿನಲ್ಲಿ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲಾಗುವುದು ಎಂದು ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದೇಶದೆಲ್ಲೆಡೆ ಕೋಮುವಾದ ಮತ್ತು ಜಾತೀವಾದ ಹೆಚ್ಚಾಗುತ್ತಿದ್ದು, ಇದರ ಪರಿಣಾಮ ಸಂವಿಧಾನದ ಆಶಯಗಳಾದ ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಟ್ಟವರೆಲ್ಲರೂ ಒಂದಾಗಬೇಕಿದೆ. ಈ ನಡುವೆ ಪ್ರಸ್ತುತ ನಡೆಯುತ್ತಿರುವ ಉಪ ಚುನಾವಣೆಯು ಕೋಮುವಾದಿ ಮತ್ತು ಜಾತ್ಯತೀತವಾದಿಗಳ ನಡುವಿನ ಸಂಘರ್ಷವೆಂದು ಭಾವಿಸಲಾಗಿದ್ದು, ಹೀಗಾಗಿ ಜಾತ್ಯತೀತ ಚಿಂತನೆ ಹೊಂದಿರುವ ಕಾಂಗ್ರೆಸ್ ಪಕ್ಷದೊಂದಿಗೆ ನಿಲ್ಲಬೇಕಿದೆ ಎಂದರು.
ಮತ್ತೂಂದೆಡೆ ರಾಜ್ಯದಲ್ಲಿ ಕಳೆದ 4 ವರ್ಷದಿಂದ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಅಲ್ಲದೆ ರಾಜಕೀಯ ಭದ್ರತೆಯೊಂದಿಗೆ ಆಡಳಿತ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ಗೆ ನೈತಿಕ ಬೆಂಬಲ ನೀಡಬೇಕಿದೆ ಎಂದು ತಿಳಿಸಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದಲಿತರು ಹಾಗೂ ಅಲ್ಪ ಸಂಖ್ಯಾತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿ ನಡೆದಿದೆ. ಅಲ್ಲದೆ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಈ ಬಗ್ಗೆ ಹುಸಿ ಚರ್ಚೆ ಆರಂಭಿಸಿ, ದೇಶದ ಜನರ ದಾರಿತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಸಾಮಾಜಿಕ ನ್ಯಾಯ ಮಾತ್ರವಲ್ಲದೆ ಆರ್ಥಿಕ ನೀತಿ, ಬಡವರ ವಿರೋಧಿ ಮನಸ್ಥಿತಿ ಹೊಂದಿರುವ ಬಿಜೆಪಿ, ಮೀಸಲಾತಿ ಒಪ್ಪದೆ, ಖಾಸಗೀಕರಣದ ನೆಪದಲ್ಲಿ ಬಂಡವಾಳಶಾಹಿಗಳನ್ನು ಬೆಂಬಲಿಸುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಬೆಂಬಲಿಸಲಾಗುತ್ತಿದೆ ಎಂದರು.
ಸಾಹಿತಿ ಪೊ›.ಎಸ್.ಜಿ. ಸಿದ್ದರಾಮಯ್ಯ ಮಾತನಾಡಿ, ದೇಶದಲ್ಲಿ ಹಲವು ವರ್ಷಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬಾರದಂತೆ ಆಡಳಿತ ನಡೆಸಿದ್ದು, ಒಡೆದು ಆಳುವ ನೀತಿ ಕಾಂಗ್ರೆಸ್ನಲ್ಲಿಲ್ಲ. ರಾಜ್ಯದಲ್ಲಿ ಯಶಸ್ವಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಡವರ ಮತ್ತು ಮಧ್ಯಮ ವರ್ಗದವರಿಗೆ ಸಾಕಷ್ಟು ಅನುಕೂಲಗಳನ್ನು ಕಲ್ಪಿಸಿದೆ ಎಂದು ತಿಳಿಸಿದರು.ಈ ಕಾರಣದಿಂದ ಪ್ರಸ್ತುತ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಿದೆ ಎಂದು ಮನವಿ ಮಾಡಿದರು.
ನಟಿ ಜಯಮಾಲ, ಚಿತ್ರ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು, ಪಿಚ್ಚಳ್ಳಿ ಶ್ರೀನಿವಾಸ್, ರುದ್ರಪ್ಪ ಹನಗವಾಡಿ, ಪೊ›.ಕೆ.ರಘುನಾಥ್ ಇನ್ನಿತರರು ಇದ್ದರು.