Advertisement

ಲಸಿಕಾ ಆಂದೋಲನದಲ್ಲಿ ಕೈ ಜೋಡಿಸಿ : ಉದ್ದಿಮೆದಾರರಲ್ಲಿ ಸಚಿವ ಸುಧಾಕರ್‌ ಮನವಿ

07:44 PM Aug 17, 2021 | Team Udayavani |

ಬೆಂಗಳೂರು : ಔಷಧ ವಲಯದ ಉದ್ದಿಮೆಗಳು ತಮ್ಮ ಸಾಂಸ್ಥಿಕ ಹೊಣೆಗಾರಿಕೆ ನಿಧಿಯನ್ನು ಲಸಿಕಾ ಆಂದೋಲನಕ್ಕೆ ದೇಣಿಗೆ ನೀಡುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಮನವಿ ಮಾಡಿದ್ದಾರೆ.

Advertisement

ಕೇಂದ್ರ ಸರ್ಕಾರ ಶೇಕಡಾ ಎಪ್ಪತ್ತೈದರಷ್ಟು ಲಸಿಕೆಯನ್ನು ರಾಜ್ಯಕ್ಕೆ ಉಚಿತವಾಗಿ ನೀಡುತ್ತಿದೆ. ಉಳಿದ ಇಪ್ಪತ್ತೈದರಷ್ಟನ್ನು ಖಾಸಗಿ ವಲಯಕ್ಕೆ ಹಂಚಿಕೆ ಮಾಡಿದೆ. ಖಾಸಗಿ ವಲಯಕ್ಕೆ ನೀಡಿರುವ ಲಸಿಕೆಯನ್ನು ಸಿಎಸ್‌ಆರ್‌ ನಿಧಿಯಡಿ ಖರೀದಿಸಿ ದೇಣಿಗೆ ರೂಪದಲ್ಲಿ ನೀಡುವಂತೆ ರಾಜ್ಯದ ಪ್ರಮುಖ ಔಷಧ ಉದ್ದಿಮೆದಾರರ ಸಭೆಯಲ್ಲಿ ಮಂಗಳವಾರ ಕರೆ ನೀಡಿದರು.

ತಜ್ಞರ ಅಭಿಪ್ರಾಯದ ಪ್ರಕಾರ ಮೂರನೇ ಅಲೆ ಅಷ್ಟೇನು ಪರಿಣಾಮಕಾರಿ ಅಲ್ಲ ಎನ್ನಲಾಗುತ್ತಿದೆ. ಆದರೂ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ. ಎರಡು ಡೋಸ್‌ ಲಸಿಕೆ ಪಡೆದವರಿಗೆ ಸೋಂಕು ತೀವ್ರ ಪರಿಣಾಮ ಬೀರುವುದಿಲ್ಲ ಮತ್ತು ಸಾವು ಸಂಭವಿಸುವುದಿಲ್ಲ ಎಂಬುದು ರುಜುವಾತಾಗಿದೆ. ಹೀಗಾಗಿ ತ್ವರಿತವಾಗಿ ಲಸಿಕೆ ನೀಡುವುದರಿಂದ ಸಂಭವನೀಯ ಮೂರನೇ ಅಲೆಯಿಂದ ಸಂರಕ್ಷಣೆ ಸಾಧ್ಯ. ಹೀಗಾಗಿ ಸರ್ಕಾರದ ಜತೆ ಉದ್ದಿಮೆಗಳು ಕೈ ಜೋಡಿಸಿದರೆ ಗುರಿ ಸಾಧ್ಯ ಎಂದರು.

ಔಷಧ ವಲಯ ಮಾತ್ರವಲ್ಲದೆ, ಪೌಷ್ಟಿಕ ಆಹಾರ ಮತ್ತು ಸೌಂದರ್ಯ ವರ್ದಕ ಉದ್ದಿಮೆದಾರರ ಜತೆಗೂ ಮುಂದಿನ ದಿನಗಳಲ್ಲಿ ಸಭೆ ನಡೆಸಿ ಸಿಎಸ್‌ಆರ್‌ ನಿಧಿಯ ನೆರವನ್ನು ಲಸಿಕಾ ಆಂದೋನಕ್ಕೂ ವಿಸ್ತರಿಸಲು ಮನವಿ ಮಾಡಲಾಗುವುದು. ಇದು ಸರ್ಕಾರ ಮಾತ್ರವಲ್ಲದೆ, ಸಮಾಜದ ಎಲ್ಲರ ಹೊಣೆಗಾರಿಕೆ ಆಗಿರುವುದರಿಂದ ಉದ್ದಿಮೆಗಳು ನೆರವಿನ ಹಸ್ತ ಚಾಚಬೇಕು ಎಂದು ಸಚಿವರು ಮನವಿ ಮಾಡಿದರು.

ಇದನ್ನೂ ಓದಿ :ಜಿಲ್ಲೆಯಲ್ಲಿ ನಿತ್ಯ ಕನಿಷ್ಠ 10,000 ಕೋವಿಡ್‌ ಟೆಸ್ಟ್‌ ನಡೆಸಿ :ಉಡುಪಿ ಜಿಲ್ಲಾಧಿಕಾರಿ ಸೂಚನೆ

Advertisement

ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉದ್ದಿಮೆ ಪ್ರತಿನಿಧಿಗಳು, ಔಷಧ ವಲಯದ ಸಂಘಟನೆ ಮೂಲಕ ಮತ್ತು ತಮ್ಮ ಉದ್ದಿಮೆಗಳ ಮೂಲಕ ಸರ್ಕಾರದ ಲಸಿಕಾ ಆಂದೋಲನಕ್ಕೆ ನೆರವಾಗುವುದಾಗಿ ಭರವಸೆ ನೀಡಿದರು. ಸರ್ಕಾರದ ಸಂದೇಶವನ್ನು ತಮ್ಮ ಕಂಪನಿಗಳ ಆಡಳಿತ ಮಂಡಳಿಗೆ ತಿಳಿಸಿ ಆದಷ್ಟು ಬೇಗ ಪ್ರತಿಕ್ರಿಯೆ ನೀಡುವುದಾಗಿ ಸಭೆಯಲ್ಲಿ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಉದ್ದಿಮೆ ಹೊಂದಿರುವ ಮುವತ್ತಕ್ಕೂ ಹೆಚ್ಚು ಕಂಪನಿಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಆಕ್ಸಿಜನ್‌ ಕೊರತೆ ನಿವಾರಣೆಗೆ ಕ್ರಮ

ಸಂಭವನೀಯ ಮೂರನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್‌ ಕೊರತೆ ಎದುರಾಗದಂತೆ ಉದ್ಯಮಗಳ ಜತೆ ಸರ್ಕಾರ ಸಮನ್ವಯದಿಂದ ಕಾರ್ಯ ನಿರ್ವಹಿಸಲಿದೆ ಎಂದು ಇದಕ್ಕೂ ಮೊದಲು ಆಕ್ಸಿಜನ್‌ ಉತ್ಪಾದಕ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಸಚಿವ ಸುಧಾಕರ್‌ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಆಕ್ಸಿಜನ್‌ ಸರಬರಾಜು ಕುರಿತಂತೆ ಉದ್ಯಮದ ಪ್ರತಿನಿಧಿಗಳ ಸಭೆ ನಡೆಸಿದ ಸಚಿವರು, ಉದ್ಯಮಗಳ ಸಹಕಾರದೊಂದಿಗೆ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಲಾಗಿದೆ. ಸಂಭವನೀಯ ಮೂರನೇ ಅಲೆಯಲ್ಲೂ ಜನರ ಹಿತದೃಷ್ಟಿಯಿಂದ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದರು.

ಪ್ರಸ್ತುತ ಒಟ್ಟು ಏಳು ಕಂಪನಿಗಳು 812 ಟನ್‌ಗಳಷ್ಟನ್ನು ಪ್ರತಿದಿನ ಉತ್ಪಾದಿಸುತ್ತಿವೆ. ನಮ್ಮಲ್ಲಿ ಒಟ್ಟು 7900 ಟನ್‌ಗಳಷ್ಟಿದೆ. ಸದ್ಯ 5381 ಟನ್‌ ಪ್ರಮಾಣದ ದಾಸ್ತಾನು ಇದೆ. ಆಕ್ಸಿಜನ್‌ ರೀಫಿಲಿಂಗ್‌ ಘಟಕಗಳು 64 ಇವೆ. ಗದಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬೀದರ್‌, ಯಾದಗಿರಿ, ಚಾಮರಾಜನಗರ, ಕೊಡಗು ಮತ್ತು ಮಂಡ್ಯಗಳಲ್ಲಿ ಇಲ್ಲ. ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕು ಮತ್ತು ಜಿಲ್ಲೆಗಳಲ್ಲಿ ಆಕ್ಸಿಜನ್‌ ಘಟಕಗಳನ್ನು ನಿರ್ಮಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಹಿಂದಿನ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಲಾಗುವುದು. ಹೊಸ ಘಟಕಗಳ ಸ್ಥಾಪನೆ, ಟೆಂಡರ್‌ ಕರೆಯುವುದು, ಜಂಬೋ ಸಿಲೆಂಡರ್‌ ಖರೀದಿ, ಹೆಚ್ಚುವರಿ ದಾಸ್ತಾನು ಕೇಂದ್ರ, ಸರಬರಾಜು ವ್ಯವಸ್ಥೆ ಸಹಿತ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಖಾಸಗಿ ಕಂಪನಿಗಳು ತಮ್ಮ ಉತ್ಪಾದನೆ, ದಾಸ್ತಾನು ವ್ಯವಸ್ಥೆಗಳನ್ನು ಬಲವರ್ದನೆಗೊಳಿಸಿಕೊಳ್ಳಬೇಕು. ಸರ್ಕಾರದಿಂದ ಅಗತ್ಯವಿರುವ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಹಿರಿಯ ಅಧಿಕಾರಿಗಳಾದ ಮನೀಷ್‌ ಮುದ್ಗಿಲ್‌, ಶಾಲಿನಿ ರಜನೀಶ್‌, ಉದ್ದಿಮೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next