Advertisement

ಸುಗ್ಗಿಕಟ್ಟೆ: ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜೆ

12:33 AM May 01, 2019 | Team Udayavani |

ಸೋಮವಾರಪೇಟೆ : ಇಲ್ಲಿಗೆ ಸಮೀಪದ ಶಾಂತಳ್ಳಿ ಹೋಬಳಿಯ ನಗರಳ್ಳಿ ಗ್ರಾಮದ ಐತಿಹಾಸಿಕ ಕೂತಿ ನಾಡು ಸುಗ್ಗಿ ಹಬ್ಬ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಸೋಮವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು.

Advertisement

ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮ ಸುಭಿರಕ್ಷೆಗೆ ಪೂಜೆ ಹಾಗೂ ಮಳೆ, ಬೆಳೆ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಭಕ್ತರ ಆಕರ್ಷಣೆಯ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್‌ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ನಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ವಿಧ್ಯುಕ್ತ ತೆರೆ ಬಿದ್ದಿತು.
ಬೆಳ್ಳಿಗ್ಗೆ ಸುಗ್ಗಿಬನದ ಸಮೀಪವಿರುವ ಬಿಲ್ಲ ರಂಗದಲ್ಲಿ ಪೂರ್ವಜರ ಜೀವನ ಪದ್ಧತಿಯನ್ನು ಬಿಂಬಿಸುವ ನೃತ್ಯ ಪ್ರಾಕಾರ, ಬಿಲ್ಲುಬಾಣಗಳನ್ನು ಹಿಡಿದು ಸಾಂಕೇತಿಕವಾಗಿ ಬೇಟೆಯಾಡುವ ಪ್ರಸಂಗ, ಕಡವೆಯ ಪಾತ್ರಧಾರಿಯನ್ನು ಅಟ್ಟಿಸಿಕೊಂಡು ಹೋಗುವ ಬೇಟೆಗಾರರ ತಂಡದ ಸದಸ್ಯರಿಗೆ ಕಡವೆ ಒದೆಯುವ ದೃಶ್ಯ ಮನಮೋಹಕವಾಗಿತ್ತು. ಕೊನೆಯಲ್ಲಿ ಕಡವೆ ಕಾಡು ಸೇರುವ ಮೂಲಕ, ಬೇಟೆಗಾರರಿಂದ ಬಚಾವಾಗುವ ದೃಶ್ಯ, ಸಾಂಪ್ರದಾಯಿಕ ಬಿಳಿ ಕುಪ್ಪಸ ದಟ್ಟಿಯನ್ನು ಧರಿಸಿದ್ದ ಗ್ರಾಮದ ಹಿರಿಯರು, ಬಿಲ್ಲರಂಗದಲ್ಲಿ ಪ್ರದರ್ಶನ ಹಾಕುತ್ತ, ಮಲೆನಾಡು ಸುಗ್ಗಿ ಇತಿಹಾಸವನ್ನು ನೆರೆದಿದ್ದವರಿಗೆ ತಿಳಿಸುತ್ತಿದ್ದರು.

ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ, ಓಡಳ್ಳಿ ಗ್ರಾಮಗಳ ಮುಖ್ಯಸ್ಥರು ಗ್ರಾಮ ದೇವತೆಗೆ ಪಟ್ಟ ಒಪ್ಪಿಸಿ, ಸಾಮೂಹಿಕ ಪೂಜೆ ನೆರವೇರಿಸಿದರು.

ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷ ಕೆ.ಟಿ.ಜೋಯಪ್ಪ, ಉಪಾಧ್ಯಕ್ಷ ಎನ್‌.ಕೆ.ಪ್ರಕಾಶ್‌, ಕಾರ್ಯ ದರ್ಶಿ ಎನ್‌.ಬಿ.ರಾಘವೇಂದ್ರ. ಖಜಾಂಚಿ ಎಲ್‌.ಪಿ.ಈರಪ್ಪ, ಸಹಕಾರ್ಯದರ್ಶಿ ಎಚ್‌.ಆರ್‌. ಗೋಪಾಲ ಸುಗ್ಗಿಯ ಉಸ್ತುವಾರಿ ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next