Advertisement
ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಕಾಲಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ ಎಂದರು. ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಹೀಗಾಗಿ ಸಮಾನಾಂತರವಾದ ಅಣೆಕಟ್ಟು ಕಟ್ಟಬೇಕು ಎಂದು ನಮ್ಮ ಅವಧಿಯಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಮಾಡಿ ಸಿದ್ಧತೆ ಮಾಡಲಾಗಿತ್ತು. ಡ್ಯಾಂ ಮ್ಯಾನೇಜ್ಮೆಂಟ್ ಕಮಿಟಿ ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟ್ಟಿರುತ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನಿಸುತ್ತದೆ. ಅವರ ಸಲಹೆ ಗಂಭೀರವಾಗಿ ಪರಿಗಣಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.
ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು. ಸರ್ಕಾರದ ನಿರ್ಲಕ್ಷ್ಯದಿಂದಲೇ ಹೀಗೆ ಆಗಿರಬಹುದು. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಹಣಕಾಸು ಅಥವಾ ತಾಂತ್ರಿಕ ಸಮಸ್ಯೆ ಆಗಿರಬಹುದು. ನೋಡೋಣ ಏನಾಗಿದೆ ಎಂದು ಗೊತ್ತಾಗುತ್ತದೆ ಎಂದರು. ಡ್ಯಾಂನಲ್ಲೇ ಇಂಜಿನಿಯರ್ಗಳು, ತಾಂತ್ರಿಕ ತಜ್ಞರು ಇದ್ದರು. ಅವರೆಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಈ ವರ್ಷ ಅತೀ ಹೆಚ್ಚು ಮಳೆ ಬರುತ್ತದೆ ಅಂತ ಮೊದಲೇ ಹವಾಮಾನ ತಜ್ಞರು ಹೇಳಿದ್ದರು. ಅದನ್ನು ಅರ್ಥ ಮಾಡಿಕೊಂಡು ಇವರು ಕೆಲಸ ಮಾಡಬೇಕಿತ್ತು. ಆದರೆ ಸರಿಯಾದ ನಿರ್ವಹಣೆ ಮಾಡದೇ ಈ ಸಮಸ್ಯೆ ಆಗಿದೆ. ಈ ಬಗ್ಗೆ ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ ಎಂದು ಹೇಳಿದರು.