Advertisement

ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ

07:23 AM May 21, 2019 | Suhan S |

ಬಾಗಲಕೋಟೆ: ಜಿಲ್ಲೆಯಲ್ಲಿ ಮೇ 25 ಮತ್ತು 26ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಹೇಳಿದರು.

Advertisement

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶಾಲಾ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ನಕಲು ರಹಿತವಾಗಿ ಪರೀಕ್ಷೆ ನಡೆಸಬೇಕು. ಕಷ್ಟಪಟ್ಟು ಅಭ್ಯಾಸ ಮಾಡಿದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ನಗರದಲ್ಲಿ ನವನಗರದ ಎಸ್‌.ಬಿ. ಪಾಟೀಲ ಪ್ರೌಢಶಾಲೆ, ವಿದ್ಯಾಗಿರಿಯ ಬಿವಿವಿ ಸಂಘದ ಇಂಗ್ಲಿಷ್‌ ಮಿಡಿಯಂ ಪ್ರೌಢಶಾಲೆ, ಬಿವಿವಿ ಸಂಘದ ಕಲಾ ಮತ್ತು ವಿಜ್ಞಾನ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾಗಿರಿಯ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜು ಸೇರಿ ಒಟ್ಟು 4 ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ಎರಡು ಅಧಿವೇಶನಗಳಲ್ಲಿ ನಡೆಯಲಿವೆ ಎಂದು ತಿಳಿಸಿದರು.

25ರಂದು ಪ್ರಥಮ ಅಧಿವೇಶನದಲ್ಲಿ ಒಟ್ಟು 1135 ಅಭ್ಯರ್ಥಿಗಳು ಪರೀಕ್ಷೆ ಬರೆದರೆ, ಎರಡನೇ ಅಧಿವೇಶನದಲ್ಲಿ 304 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 26ರಂದು ಪ್ರಥಮ ಹಾಗೂ ದ್ವಿತೀಯ ಅಧಿವೇಶನಕ್ಕೆ ಒಟ್ಟು 912 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀಟರ್‌ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತಿದೆ. ಅಲ್ಲದೇ ಪರೀಕ್ಷೆ ಸಮಯದಲ್ಲಿ ಝರಾಕ್ಸ್‌ ಅಂಗಡಿ ಮುಚ್ಚಿಸುವಂತೆ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

ಪರೀಕ್ಷಾ ಕೊಠಡಿಯಲ್ಲಿ ಬೆಳಕಿನ ವ್ಯವಸ್ಥೆ ಮಾಡಬೇಕು. ಪ್ರತಿ ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ನಾಮಿನಲ್ರೋಲ್ ಪ್ರಕಾರ ಆಸನಗಳ ವ್ಯವಸ್ಥೆ ಮಾಡಬೇಕು. ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ನೀಲಿ ಅಥವಾ ಕಪ್ಪು ಬಾಲ್ ಪಾಯಿಂಟ್ ಪೆನ್‌ ಮಾತ್ರ ತರಲು ಅವಕಾಶ ನೀಡಬೇಕು. ಅವ್ಯವಹಾರಕ್ಕೆ ಕಾರಣವಾಗುವಂತಹ ವಸ್ತುಗಳನ್ನು ಪರೀಕ್ಷಾ ಕೊಠಡಿಯ ಒಳಗೆ ತರುವುದನ್ನು ನಿರ್ಬಂದಿಸಲಾಗಿದೆ. ಅಲ್ಲದೇ ಆಸನ ವ್ಯವಸ್ಥೆಯ ಕೊಠಡಿವಾರು ವಿವರವನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪರೀಕ್ಷಾ ಕೇಂದ್ರಗಳ ಮುಂಬಾಗದಲ್ಲಿ ಪ್ರಕಟಿಸಲು ತಿಳಿಸಿದರು.

Advertisement

ಮಾರ್ಗಾಧಿಕಾರಿಗಳು ಸಮಯಕ್ಕೆ ಸರಿಯಾಗಿ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದರು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸ್ಥಾನಿಕ ಜಾಗೃತ ದಳದವರನ್ನು ಹಾಗೂ ಜಿಲ್ಲಾ ಮಟ್ಟದಲ್ಲಿ ಪರೀಕ್ಷಾ ವೀಕ್ಷಕರನ್ನು ಸಹ ನೇಮಿಸಲಾಗುತ್ತಿದೆ ಎಂದು ತಿಳಿಸಿದರು. ವೀಕ್ಷಕರು ಪ್ರತಿಯೊಂದು ಅಧಿವೇಶನದ ಪರೀಕ್ಷೆಗಳು ಸಮರ್ಪಕವಾಗಿ ನಡೆಯುತ್ತಿರುವ ಬಗ್ಗೆ ಗಮನಹರಿಸಲು ತಿಳಿಸಿದರು.

ಸ್ಪರ್ಧಾತ್ಮಕ ಪರೀಕ್ಷಾ ನೋಡಲ್ ಅಧಿಕಾರಿ ಎ.ಕೆ. ಬಸಣ್ಣವರ ಪರೀಕ್ಷಾ ಸಿದ್ದತೆ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಹಾಗೂ ಮಾರ್ಗಾಧಿಕಾರಿಗಳ ಕರ್ತವ್ಯಗಳು ಕುರಿತು ವಿವರಿಸಿದರು.

ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ದುರ್ಗೇಶ ರುದ್ರಾಕ್ಷಿ, ಉಪ ವಿಭಾಗಾಧಿಕಾರಿ ಎಚ್.ಜಯಾ, ಇಕ್ರಮ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಿ.ಎಚ್.ಗೋನಾಳ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next