Advertisement

ಗ್ರಾಮೀಣ ಭಾಗದಲ್ಲಿ ಜಾಗೃತಿಗೆ ಶಿಕ್ಷಕರ ಬಳಕೆ

11:31 PM Apr 05, 2020 | Sriram |

ಬೆಂಗಳೂರು: ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಜನ ಸಾಮಾನ್ಯರಿಗೆ ಮಾಹಿತಿ ನೀಡಲು ವಿವಿಧ ಇಲಾಖೆಗಳ ಅಧಿಕಾರಿಗಳ ಜತೆಗೆ ಶಿಕ್ಷಕರು ಫೀಲ್ಡಿಗೆ ಇಳಿಯಲಿದ್ದಾರೆ.

Advertisement

ಗ್ರಾಮೀಣ ಭಾಗದಲ್ಲೂ ಆರೋಗ್ಯ ಇಲಾಖೆ ಸಹಿತವಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಸೇರಿ ಶಿಕ್ಷಕರು ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಕೈಜೋಡಿಬೇಕು ಎಂಬ ಸಂದೇಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ತನ್ನೆಲ್ಲ ಜಿಲ್ಲಾ ಉಪನಿರ್ದೇಶಕರ ಮೂಲಕ ಶಿಕ್ಷಕರಿಗೆ ರವಾನಿಸಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2 ಲಕ್ಷಕ್ಕೂ ಅಧಿಕ ಶಿಕ್ಷಕರಿದ್ದಾರೆ. ಎಲ್ಲ ಶಾಲೆಗಳಿಗೂ ಸದ್ಯ ರಜೆ ನೀಡಲಾಗಿದೆ. ಕೆಲವೊಂದು ಶಾಲೆಗಳಲ್ಲಿ ಬಿಸಿಯೂಟದ ಆಹಾರ ಸಾಮಗ್ರಿಗಳನ್ನು ವಿದ್ಯಾರ್ಥಿಗಳ ಪಾಲಕರಿಗೆ ವಿತರಣೆ ಮಾಡುವ ಕಾರ್ಯ ಆರಂಭವಾಗಿದ್ದು ಶಾಲಾ ಮುಖ್ಯ ಶಿಕ್ಷಕರು ಮತ್ತು ಕೆಲವು ಸಹ ಶಿಕ್ಷಕರು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ಹೊರತಾಗಿಯೂ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ಇದ್ದಾರೆ. ಇವರಲ್ಲಿ 50 ವರ್ಷ ಮೇಲ್ಪಟ್ಟವರು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರು ಹಾಗೂ ಕೋವಿಡ್  19 ಸೋಂಕಿತರೊಂದಿಗೆ ಸಂಪರ್ಕ ಹೊಂದಿರುವವರನ್ನು ಹೊರತುಪಡಿಸಿ, ಉಳಿದ ಶಿಕ್ಷಕರನ್ನು ಕೋವಿಡ್ 19  ಜಾಗೃತಿಗೆ ಬಳಸಿಕೊಳ್ಳಲು ಉಪನಿರ್ದೇಶಕರ ಮೂಲಕ ಸೂಚಿಸಿದೆ.

ಶಿಕ್ಷಕರು ತಮಗೆ ಸೂಚಿಸಿದ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವುದು ಕಡ್ಡಾಯವಾಗಿದೆ. ಆ ಪ್ರದೇಶದ ಕುಡಿಯುವ ನೀರು, ಆಹಾರ ಸಾಮಗ್ರಿ, ದಿನಸಿ, ಸ್ವತ್ಛತೆ, ಆರೋಗ್ಯ ಸಮಸ್ಯೆ ಸಹಿತವಾಗಿ ವಿವಿಧ ಸಮಸ್ಯೆಗಳ ಕುರಿತು ಜನ ಸಾಮಾನ್ಯರ ಅಹವಾಲು ಸ್ವೀಕರಿಸುವುದು, ಈ ಅಹವಾಲುಗಳಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಅಧಿಕಾರಿ, ಎಂಜಿನಿಯರ್‌, ಗ್ರಾಮ ಲೆಕ್ಕಿಗರು, ಆಶಾ ಕಾರ್ಯಕರ್ತೆಯರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು. ಆ ಪ್ರದೇಶದ ಹಿರಿಯ ನಾಗರಿಕರಿಗೆ ಅಗತ್ಯವಿರುವ ವೈದ್ಯಕೀಯ ಸೇವೆ, ಅಗತ್ಯ ಔಷಧಿಗಳ ಪೂರೈಕೆ, ತುರ್ತು ಆರೋಗ್ಯ ಸಮಸ್ಯೆಗೆ ಸ್ಪಂದಿಸಬೇಕು. ಸರಕಾರ ಘೋಷಿಸಿರುವ ಹಲವಾರು ಯೋಜನೆಗಳನ್ನು ಜನರಿಗೆ ತಲುಪಿಸುವುದು ಸಹಿತ ಹಲವು ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಡೆಸಲು ನಿರ್ದೇಶ ನೀಡಲಾಗಿದೆ.

ಸ್ಥಳೀಯಾಡಳಿತದಿಂದ ಸೂಚನೆ
ಕೋವಿಡ್ 19 ವಿರುದ್ಧ ಹೋರಾಟದಲ್ಲಿ ಶಿಕ್ಷಕರು ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬಂದಿ ವರ್ಗದವರ ಜತೆ ಸೇರಿ ಸೇವೆ ಸಲ್ಲಿಸಲಿದ್ದಾರೆ. ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಸ್ಥಳೀಯಾಡಳಿತಗಳು ಸೂಚಿಸಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next