ಬೆಳ್ತಂಗಡಿ : ಆಧುನಿಕ ತಂತ್ರಜ್ಞಾನಗಳ ಹೆಚ್ಚಿನ ಬಳಕೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಮಾರಕವಾಗುತ್ತದೆ. ಇವು ವಿದ್ಯಾರ್ಥಿಗಳಲ್ಲಿ ಸಂಕುಚಿತತೆ ಬೆಳೆಯಲು ಕಾರಣವಾಗುತ್ತವೆ ಎಂದು ಮೂಡಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಗುಣಪ್ರಸಾದ್ ಕೆ. ಹೇಳಿದರು.
ಅವರು ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಂಘದ ಆಶ್ರಯದಲ್ಲಿ ಜರಗಿದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಹೆತ್ತವರ ಸಭೆಯಲ್ಲಿ ಮಾತನಾಡಿದರು.
ಪ್ರತಿಭೆ ಎನ್ನುವುದು ಎಲ್ಲ ಕಡೆ ಇರುತ್ತದೆ. ಅದಕ್ಕೆ ಪೂರಕವಾದ ಅವಕಾಶಗಳು ಸಿಗುವಂತಾಗಬೇಕು. ಸಾಧ್ಯತೆಗಳು ಬಹಳಷ್ಟಿವೆ, ಅದನ್ನು ನಮ್ಮದಾಗಿಸಿಕೊಳ್ಳಬೇಕು. ನೈತಿಕವಾದ ಮತ್ತು ಔಪಚಾರಿಕ ಶಿಕ್ಷಣ ದೊರೆತಾಗ ಶ್ರೇಷ್ಠ ವ್ಯಕ್ತಿತ್ವವನ್ನು ಗಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯಾಗಿ ಬೆಳೆಸಬೇಕು. ಸಿ.ಇ.ಟಿ.ಯಂತಹ ಪರೀûಾ ಪದ್ಧತಿಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಂಪೂರ್ಣವಾದ ನ್ಯಾಯವನ್ನು ದೊರಕಿಸಿಕೊಡುವಲ್ಲಿ ಸಹಕಾರಿಯಾಗಿವೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಿ. ಯದುಪತಿ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.ಗಣಿತ ಉಪನ್ಯಾಸಕಿ ಹೇಮಲತಾ ಎಂ. ಸ್ವಾಗತಿಸಿ, ಭೌತಶಾಸ್ತ್ರ ಉಪನ್ಯಾಸಕ ಚೇತನ್ ಕುಮಾರ್ ವಂದಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ಅಕ್ಷತಾ ಆರ್. ಕಾರ್ಯಕ್ರಮ ನಿರೂಪಿಸಿದರು.