Advertisement

ಗುಣಮಟ್ಟದ ಶಿಕ್ಷಣಕ್ಕೆ ಹತ್ತಾರು ಯೋಜನೆ: ಕೃಷಿ ಸಚಿವ ಬಿ.ಸಿ.ಪಾಟೀಲ

03:28 PM Jun 23, 2022 | Team Udayavani |

ಹಿರೇಕೆರೂರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿವೆ. ಮಕ್ಕಳು ಎಲ್ಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾವಂತರಾಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಕಿವಿಮಾತು ಹೇಳಿದರು.

Advertisement

ಲೋಕೋಪಯೋಗಿ ಇಲಾಖೆಯಿಂದ 2021-22ನೇ ಸಾಲಿನ ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಯೋಜನೆಯಡಿ 2 ಕೋಟಿ ರೂ. ವೆಚ್ಚದಲ್ಲಿ ತಾಲೂಕಿನ ನೂಲಗೇರಿ ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಗ್ರಾಮೀಣ ಭಾಗಗಳಲ್ಲಿ 1 ನೇ ತರಗತಿಯಿಂದ 12 ನೇ ತರಗತಿ ವರೆಗೆ ಒಂದೇ ಸೂರಿನಡಿ ಶಿಕ್ಷಣ ದೊರಕಿಸಲು ಸರ್ಕಾರ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಪ್ರಾರಂಭಿಸಿ, ಅಗತ್ಯ ಮೂಲಭೂತ ಸೌಲಭ್ಯಗಳ ಜತೆಗೆ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನೂಲಗೇರಿ ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ 11 ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಮಾತನಾಡಿ, ಶಿಕ್ಷಣವೇ ದೊಡ್ಡ ಆಸ್ತಿಯಾಗಿದ್ದು, ಪ್ರತಿಯೊಬ್ಬರು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಸರ್ಕಾರ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡಲು ಅಗತ್ಯ ಸೌಕರ್ಯಗಳನ್ನು ಕಲ್ಪಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ಶಿಕ್ಷಣವಂತರಾಗಬೇಕೆಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ಉಮಾ ಚಕ್ರಸಾಲಿ, ಸದಸ್ಯರಾದ ಮನೋಹರ ಕಮ್ಮಾರ, ವಿನಯ ದಳವಾಯಿ, ರೇಣುಕಾ ಮಾದೇವಪ್ಪ ವೀರಾಪುರ, ಎಸ್‌ ಡಿಎಂಸಿ ಉಪಾಧ್ಯಕ್ಷ ಕರಬಸಪ್ಪ ಕೋರಿ, ಬಿಇಒ ಎನ್‌.ಶ್ರೀಧರ, ಎಇಇ ಪ್ರಕಾಶಗೌಡ ಪಾಟೀಲ, ಎಂಜಿನಿಯರ್‌ ಅಭಿಲಾಷ್‌, ವಿ.ಎಸ್‌.ಪುರದ, ರುದ್ರಮುನಿ ಹುಲ್ಮನಿ, ಗಂಗಾಧರ ಕೋರಿ, ಮಹೇಶ ನಿಂಗಾಪುರ, ವಿರೂಪಾಕ್ಷಯ್ಯ ಮಠದ, ವೀರಭದ್ರಯ್ಯ ಕುಂಚೂರಮಠ, ರಾಜಶೇಖರ ಕೋರಿ, ಜಯಪ್ಪ ಕೋರಿ, ಶಿವಾಜಿ ಮರಿಗೌಡ್ರ, ವೀರನಗೌಡ ದಳವಾಯಿ ಸೇರಿದಂತೆ ಗ್ರಾಮಸ್ಥರು, ಅಧಿಕಾರಿಗಳು, ಶಾಲಾ ಸಿಬ್ಬಂದಿ ಹಾಜರಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next