Advertisement

ಸೋಲಿನ ಹೊಣೆ ಹೊತ್ತು ರಾಜೀನಾಮೆಗೆ ನಿರ್ಧಾರ

11:43 PM May 23, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಜೆಡಿಎಸ್‌ ಸೋಲಿಗೆ ನಾನೇ ನೈತಿಕ ಹೊಣೆ ಹೊರುತ್ತೇನೆ. ಹೀಗಾಗಿ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದೇನೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಮೊದಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಲೋಕಸಭೆ ಚುನಾವಣೆವರೆಗೂ ಮುಂದುವರಿಯಲು ಹೇಳಿದ್ದರು. ಹೀಗಾಗಿ, ಮುಂದುವರಿದಿದ್ದೆ. ಇದೀಗ ಅಧ್ಯಕ್ಷ ಸ್ಥಾನದಿಂದ ಮುಕ್ತಿ ಕೊಡಿಸುವಂತೆ ಕೋರಲಿದ್ದೇನೆ ಎಂದು ತಿಳಿಸಿದರು.

ಮಂಡ್ಯದಲ್ಲಿ ಮೂವರು ಸಚಿವರು, ಎಂಟು ಶಾಸಕರು, ಮೂವರು ಪರಿಷತ್‌ ಸದಸ್ಯರು ಇದ್ದರೂ ಮತ ಬಂದಿಲ್ಲವಲ್ಲ ಎಂಬ ಪ್ರಶ್ನೆಗೆ, ಮತ ಹಾಕುವವರು ಮತದಾರರಲ್ಲವೇ ಎಂದು ಉತ್ತರಿಸಿದರು. ದೇವೇಗೌಡರು ಸೋಲು ಅನುಭವಿಸಿರುವ ಕುರಿತು ಪ್ರತಿಕ್ರಿಯಿಸಿ, ಇಂದಿರಾಗಾಂಧಿ ಸಮೇತ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಇದೇನು ಕೊನೆಯ ಚುನಾವಣೆಯಲ್ಲ.

ಚುನಾವಣೆಯಲ್ಲಿ ಸೋಲು-ಗೆಲುವು ಇದ್ದದ್ದೇ. ಜನರ ತೀರ್ಪು ಒಪ್ಪಿಕೊಳ್ಳಬೇಕು ಎಂದು ಸಮರ್ಥಿಸಿಕೊಂಡರು. ಮೈಸೂರಿನಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿಜಯಶಂಕರ್‌ ಗೆಲುವಿಗೆ ನಾವು ಶ್ರಮ ಹಾಕಿದ್ದೆವು. ಆದರೆ, ಮತದಾರರು ನಮ್ಮ ಪರ ಒಲವು ತೋರಲಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next