Advertisement

ನೈಸರ್ಗಿಕ ಜಲ ಸಂರಕ್ಷಣೆ ಕಾಮಗಾರಿಗೆ ಮೊದಲ ಆದ್ಯತೆ

12:03 PM May 31, 2019 | Suhan S |

ಹಾವೇರಿ: ನೆಲೊಗಲ್ಲ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದಲ್ಲಿ ಕೈಗೊಂಡ ಕಚ್ಚಾ ಕಾಲುವೆ ಕಾಮಗಾರಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನ್ನಪೂರ್ಣ ಮುದುಕಮ್ಮನವರ ವೀಕ್ಷಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅನ್ನಪೂರ್ಣ ಮುದುಕಮ್ಮನವರ, ಗ್ರಾಮೀಣ ಪ್ರದೇಶದಲ್ಲಿ ಜನ ಉದ್ಯೊಗ ಅರಸಿ ವಲಸೆ ಹೋಗುವುದನ್ನು ತಪ್ಪಿಸುವ ಮೂಲಕ ತಾಲೂಕಿನಲ್ಲಿ ನೀರಿನ ಮೂಲಗಳನ್ನು ಉಳಿಸಿಕೊಳ್ಳಲು ಕೆರೆ-ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ನೀರು ನಿಲ್ಲುವಂತೆ ಮಾಡುವುದು ಅತೀ ಅವಶ್ಯಕವಾಗಿದೆ. ಹೀಗಾಗಿ ಈ ವರ್ಷ ತಾಲೂಕಿನಲ್ಲಿ ನೈಸರ್ಗಿಕ ಜಲ ಸಂರಕ್ಷಣೆ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದರಿಂದ ಜಲಮೂಲಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಹೆಚ್ಚು ಜನರಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದರು.

ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ದೊರೆಯುವಂತೆ ಮಾಡಲು ತಾಲೂಕು ಪಂಚಾಯಿತಿ ಬದ್ಧವಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸಾಮೂಹಿಕವಾಗಿ ಹೆಚ್ಚು ಕೂಲಿಕಾರರು ಪಾಲ್ಗೊಳ್ಳುವಂತಹ ಕಾಮಗಾರಿಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತುವುದು, ಗೋ ಕಟ್ಟೆಗಳ ಅಭಿವೃದ್ಧಿ, ಕೃಷಿ ಹೊಂಡ, ಬದು ನಿರ್ಮಾಣ, ಕಲ್ಯಾಣಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ ಈ ವರ್ಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಬಳಸಿಕೊಂಡು ನೈಸರ್ಗಿಕ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಕೆರೆ-ಕಟ್ಟೆಗಳ ಅಭಿವೃದ್ಧಿಗೆ ತಾಪಂ ಮುಂದಾಗಿದೆ. ತಾಲೂಕು ಪದೇ ಪದೆ ಬರ ಪರಿಸ್ಥಿತಿ ಎದುರಿಸುತ್ತಿದ್ದು ಜನ, ಜನಾವಾರುಗಳು ವರ್ಷದಿಂದ ವರ್ಷಕ್ಕೆ ಸಂಕಷ್ಟಕ್ಕೆ ಸಿಲುಕುತ್ತಿವೆ. ಜಲದ ಮೂಲಗಳು ಕಡಿಯಾಗುತ್ತಿದ್ದು ಕೆರೆ, ಕಟ್ಟೆಗಳಿಗೆ ಹರಿದು ಬರುವ ನೀರಿನ ಮಾರ್ಗಗಳು ಕಾಲುವೆಗಳ ಹೂಳು ಹಾಗೂ ಗಿಡ ಗಂಟೆಗಳಿಂದ ಮುಚ್ಚಿ ಹೋಗಿವೆ. ಇದರಿಂದಾಗಿ ಕೆರೆ-ಕಟ್ಟೆಗಳಲ್ಲಿ ನೀರು ಕಾಣದಾಗಿ ಅಂತರ್ಜಲಮಟ್ಟ ಪಾತಾಳಕ್ಕೆ ಕುಸಿಯುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ರೋಜಗಾರ ದಿನ ಆಚರಿಸಿ ಕೂಲಿಕಾರರಿಗೆ ಉದ್ಯೋಗಚೀಟಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಹಿತಿ ಶಿಕ್ಷಣ ಸಂವಹನ ಅಧಿಕಾರಿ ಗಿರೀಶ ಬೆನ್ನೂರ, ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಲಕ್ಷ ್ಮವ್ವ ಯರೇಶಿಮಿ ಹಾಗೂ ಸಿಬ್ಬಂದಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next