Advertisement

ನಿವೃತ್ತ ಆಯುಕ್ತರಿಗೆ ಪಿಂಚಣಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

06:15 AM Aug 24, 2018 | Team Udayavani |

ಬೆಂಗಳೂರು: ರಾಜ್ಯ ಮಾಹಿತಿ ಆಯೋಗದ ನಿವೃತ್ತ ಆಯುಕ್ತ ಡಾ.ಎಚ್‌.ಎನ್‌.ಕೃಷ್ಣ ಅವರಿಗೆ ನಿವೃತ್ತಿ ವೇತನ ನೀಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಆದೇಶಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ಹೈಕೋರ್ಟ್‌ ವಿಭಾಗೀಯ ಪೀಠ ಎತ್ತಿ ಹಿಡಿದಿದೆ.

Advertisement

ಈ ಕುರಿತು ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಗುರುವಾರ ವಜಾಗೊಳಿಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್‌.ಚೌಹಾಣ್‌ ಹಾಗೂ ನ್ಯಾಯಮೂರ್ತಿ ಎಚ್‌.ಟಿ ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ಪೀಠ,ನಿಯಮಗಳಂತೆ ನಿವೃತ್ತಿ ವೇತನ ಪಡೆಯಲು ಡಾ.ಎಚ್‌ ಕೃಷ್ಣ ಅರ್ಹರು ಎಂದು ಅಭಿಪ್ರಾಯಪಟ್ಟು, ಅವರ ಮನವಿ ಪುನರ್‌ ಪರಿಶೀಲಿಸುವಂತೆ ಆದೇಶಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ಎತ್ತಿಹಿಡಿದಿದೆ. 2007ರ ಜೂನ್‌ 29ರಂದು ರಾಜ್ಯ ಮಾಹಿತಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದ ಡಾ. ಎಚ್‌.ಎನ್‌ ಕೃಷ್ಣ 5 ವರ್ಷಗಳ ಅವಧಿ ಪೂರ್ಣಗೊಳ್ಳುವ ಮುನ್ನವೇ 2011ರ ಸೆ.28ರಂದು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

3 ವರ್ಷ ಅವಧಿ ಪೂರ್ಣಗೊಳಿಸಿದ್ದರೂ ಮಾಹಿತಿ ಆಯುಕ್ತರು ನಿವೃತ್ತಿ ವೇತನ ಹಾಗೂ ಮತ್ತಿತರ ಸೌಲಭ್ಯ ಪಡೆಯಲು ಅರ್ಹರು ಎಂದು 2013 ಜ.1ರಂದು ರಾಜ್ಯಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಹೀಗಾಗಿ, ಅಧಿಸೂಚನೆ ಅನ್ವಯ ನಿವೃತ್ತಿ ವೇತನ ನೀಡುವಂತೆ ರಾಜ್ಯ ಮಾಹಿತಿ ಆಯುಕ್ತರು ಸಲ್ಲಿಸಿದ್ದ ಮನವಿ ಪತ್ರವನ್ನು ವಜಾಗೊಳಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಕೃಷ್ಣ
ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಏಕಸದಸ್ಯ ಪೀಠ ಮಾನ್ಯ ಮಾಡಿತ್ತು. ಅಲ್ಲದೆ ಅರ್ಜಿದಾರರ ಮನವಿ ಪುನರ್‌ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿ ಕಳೆದ ವರ್ಷ ನವೆಂಬರ್‌ 21ರಂದು ತೀರ್ಪು ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next