Advertisement

ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಇಳಿಮುಖ

05:23 PM Oct 16, 2020 | Suhan S |

ರಾಯಚೂರು: ಇತ್ತೀಚಿಗೆ ಜಿಲ್ಲೆಯಲ್ಲಿ ಕೋವಿಡ್‌ -19 ಸೋಂಕಿನ ಪ್ರಕರಣಗಳು ಹಾಗೂ ಅದರಿಂದ ಸಂಭವಿಸುತ್ತಿರುವ ಸಾವಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಸೋಂಕನ್ನು ಸಂಪೂರ್ಣ ತಡೆಗಟ್ಟಲು ಅಧಿಕಾರಿಗಳು, ಸಿಬ್ಬಂದಿ ಮತ್ತಷ್ಟು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ ಕುಮಾರ್‌ ಕರೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌-19 ಸೋಂಕಿಗೆ ಸಂಬಂ ಧಿಸಿದಂತೆ ಗುರುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ 142 ಜನ ಮೃತಪಟ್ಟಿದ್ದಾರೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ತೀರ ಕಡಿಮೆಯಿದೆ. ಕೋವಿಡ್‌ ನಿಂದ ಮೃತಪಟ್ಟವರ ವರದಿಯನ್ನು ಡಿಸಿ ಕಚೇರಿಗೆ ಸಲ್ಲಿಸಬೇಕು. ರಿಮ್ಸ್‌ ಮತ್ತು ಒಪೆಕ್‌ ಆಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿಗಳಿಗೆ ಗುಣಮಟ್ಟದ ಚಿಕಿತ್ಸೆ ಜೊತೆಗೆ ವೆಂಟಿಲೇಟರ್‌ಗಳ ಮೂಲಕ ಸಮರ್ಪಕ ಆಮ್ಲಜನಕ ಸರಬರಾಜು ಮಾಡಬೇಕು. ಆಕ್ಸಿಜಿನ್‌ ಖಾಲಿಯಾದಂತೆ ದಾಸ್ತಾನು ಮಾಡಿಕೊಳ್ಳಬೇಕು. ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಿ ಎಂದು ತಿಳಿಸಿದರು.

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್‌-19 ಪಾಸಿಟಿವ್‌ ಪ್ರಕರಣಗಳು ಕಡಿಮೆಯಾಗಿವೆ ಎಂದು ನಿರ್ಲಕ್ಷ್ಯ ತೋರದೆ ಕಡ್ಡಾಯ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಪದೇಪದೆ ಸ್ಯಾನಿಟೈಸರ್‌ ಬಳಸಬೇಕು. ಮುಂಬರುವ ದಿನಗಳಲ್ಲಿ ಸಾಲು ಸಾಲು ಹಬ್ಬದ ರಜೆ ದಿನಗಳು ಇರುವುದರಿಂದ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಹೆಚ್ಚುವ ಸಾಧ್ಯತೆ ಇದೆ. ಈನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ಕೇರಳದಲ್ಲಿ ಆರಂಭದಲ್ಲಿ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ತರಲಾಗಿತ್ತು. ಆದರೆ ಇತ್ತೀಚಿನ ಅಂಕಿ ಅಂಶ ಪರಿಗಣಿಸಿದಾಗ ಕೇರಳದಲ್ಲಿ ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ದಸರಾ ಹಬ್ಬದಂದು ಪ್ರತಿಯೊಬ್ಬರು ಕೋವಿಡ್‌ ನಿಯಮಪಾಲಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸೋಂಕಿಗೆ ಒಳಗಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ, ರಿಮ್ಸ್‌ ನಿರ್ದೇಶಕ ಡಾ| ಬಸವರಾಜ ಪೀರಾಪುರ, ಡಾ| ಸುರೇಂದ್ರ ಬಾಬು, ಡಾ| ವಿಜಯಶಂಕರ, ಐಎಂಎ ಅಧ್ಯಕ್ಷ ಡಾ| ಮಹಾಲಿಂಗಪ್ಪ, ಡಾ| ಭಾಸ್ಕರ್‌, ಡಾ| ಅರುಣ ಮಸ್ಕಿ, ಡಾ| ಮಹೇಂದ್ರಕರ್‌, ಡಾ| ಕೆ.ನಾಗರಾಜ ಇತರರು ಉಪಸ್ಥಿತರಿದ್ದರು.

Advertisement

ಜಾಗೃತಿ ವಾಹನಕ್ಕೆ ಡಿಸಿ ಚಾಲನೆ : ರಾಷ್ಟ್ರೀಯ ತಂಬಾಕು ನಿಯಂತ್ರಣ ಹಾಗೂ ಕೋವಿಡ್‌-19 ಸಾಂಕ್ರಾಮಿಕ ರೋಗ ಹರಡುವುದನ್ನು ನಿಯಂತ್ರಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ರಚಾರವಾಹನಕ್ಕೆ ಡಿಸಿ ಆರ್‌.ವೆಂಕಟೇಶ ಕುಮಾರ್‌ ಗುರುವಾರ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಡಿಸಿ ಕಚೇರಿ ಆವರಣದಲ್ಲಿ ಚಾಲನೆ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next