Advertisement

ಪ್ರಮುಖ ರಾಜಕೀಯ ಪಕ್ಷಗಳಿಗೆ ಅಗ್ನಿಪರೀಕ್ಷೆ

12:22 PM Aug 18, 2018 | |

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಪ್ರಬಲ ಪೈಪೋಟಿ ನಡುವೆಯೇ ಹೊಸ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ. 

Advertisement

ಪಾಲಿಕೆ ಚುನಾವಣೆಗೆ ಚುನಾವಣಾ ಆಯೋಗ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ನಾಮಪತ್ರ ಸಲ್ಲಿಕೆಗೆ ಆ.21 ಕಡೆಯ ದಿನ. ಈ ನಡುವೆ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳಲ್ಲಿ ಸ್ಪರ್ಧಾಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಬೆಟ್ಟದಷ್ಟು ದೊಡ್ಡದಿರುವಾಗ ಅರ್ಹ ಅಭ್ಯರ್ಥಿಗೆ ಟಿಕೆಟ್‌ ನೀಡಲು ಮೂರೂ ಪಕ್ಷಗಳಿಗೆ ಸವಾಲಾಗಿ ಪರಿಣಮಿಸಿದೆ. ಅದರ ಬೆನ್ನಲ್ಲೆ ಪಕ್ಷೇತರ ಅಭ್ಯರ್ಥಿಗಳು ಚುನಾವಣಾ ಕಣಕ್ಕಿಳಿಯಲು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ  ಈ ಬಾರಿಯ ಪಾಲಿಕೆ ಚುನಾವಣೆ ಪ್ರಮುಖ ರಾಜಕೀಯ ಪಕ್ಷಗಳಿಗೆ ದೊಡ್ಡ ಅಗ್ನಿಪರೀಕ್ಷೆಯನ್ನೇ ತಂದೊಡ್ಡಿದೆ.

ಟಾಂಗ್‌ ನೀಡಲು ಸಜ್ಜು: ಪಾಲಿಕೆ ಚುನಾವಣೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ಗೆ ಪ್ರತಿಷ್ಠೆಯಾಗಿದೆ. ಈ ಕಾರಣಕ್ಕಾಗಿ ಮೂರು ಪಕ್ಷಗಳು ಸಾಕಷ್ಟು ಲೆಕ್ಕಾಚಾರದೊಂದಿಗೆ ಗೆಲುವಿನ ರಣತಂತ್ರ ರೂಪಿಸಲಾರಂಭಿಸಿವೆ. ಈ ನಡುವೆ ಇತರೆ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಪ್ರಮುಖ ಪಕ್ಷಗಳಿಗೆ ಟಾಂಗ್‌ ನೀಡಲು ಸಜ್ಜಾಗಿವೆ.

ಈಗಾಗಲೇ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಸ್ವರಾಜ್‌ ಇಂಡಿಯಾ, ಕರ್ನಾಟಕ ಜನತಾ ಪಕ್ಷ(ಕೆಜೆಪಿ) ಅರ್ಹ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿವೆ. ಕಳೆದ ಬಾರಿಯ ಪಾಲಿಕೆ ಚುನಾವಣೆಯಲ್ಲಿ ಕೇವಲ ಎರಡು ವಾರ್ಡ್‌ಗಳಲ್ಲಿ ಗೆಲುವು ಕಂಡಿದ್ದ ಸೋಶಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ(ಎಸ್‌ಡಿಪಿಐ) ಈ ಬಾರಿ ಕನಿಷ್ಠ 30 ವಾರ್ಡ್‌ಗಳಲ್ಲಿ ಸ್ಪರ್ಧಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. 

Advertisement

ಬೆಂಬಲಿಗರು ಕಣಕ್ಕೆ: ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಇನ್ನೂ ಬಂಡಾಯದ ಬಿಸಿ ತಪ್ಪಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿಮುಟ್ಟಿಸಿದ್ದ ಕೆ.ಹರೀಶ್‌ಗೌಡ ಜೆಡಿಎಸ್‌ ಅಧಿಕೃತ ಅಭ್ಯರ್ಥಿ ಪ್ರೊ.ಕೆ.ಎಸ್‌. ರಂಗಪ್ಪ ವಿರುದ್ಧ ಸ್ವತಂತ್ರವಾಗಿ ಸ್ಪರ್ಧಿಸಿ ರಂಗಪ್ಪ ಸೋಲಿಗೆ ಕಾರಣರಾಗಿದ್ದರು.

ಇದೀಗ ಇದೇ ಬಂಡಾಯವನ್ನು ಪಾಲಿಕೆ ಚುನಾವಣೆಯಲ್ಲಿಯೂ ಮುಂದುವರಿಸಿರುವ ಹರೀಶ್‌ಗೌಡ, ಪಾಲಿಕೆ ಚುನಾವಣೆಗೆ ತಮ್ಮ ಬೆಂಬಲಿಗರನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹರೀಶ್‌ಗೌಡರ ಈ ನಿರ್ಧಾರ ಜೆಡಿಎಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. 

ಬಂಡಾಯದ ಬಿಸಿ: ಪಾಲಿಕೆಯ 65 ವಾರ್ಡ್‌ಗಳಿಂದ ಚುನಾವಣೆ ನಡೆಯುತ್ತಿದ್ದರೂ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳಲ್ಲಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆಗೇನು ಕಡಿಮೆ ಇಲ್ಲ. ಮೂರು ಪಕ್ಷಗಳಿಂದ ಪ್ರತಿ ವಾರ್ಡ್‌ಗಳಲ್ಲಿ ಕನಿಷ್ಠ 8-10 ಮಂದಿ ಟಿಕೆಟ್‌ಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಅಭ್ಯರ್ಥಿಗಳ ಗೆಲ್ಲುವ ಸಾಮರ್ಥ್ಯದ ಆಧಾರ ಮೇಲೆ ಟಿಕೆಟ್‌ ಹಂಚಿಕೆಗೆ ಮೂರೂ ಪಕ್ಷಗಳು ನಿರ್ಧರಿಸಿವೆ. ವಾರ್ಡ್‌ ವಿಂಗಡಣೆ, ಮೀಸಲಾತಿ ಲೆಕ್ಕಾಚಾರದಲ್ಲಿ ಹಾಲಿ ಅಭ್ಯರ್ಥಿಗಳಿಗೆ ಟಿಕೆಟ್‌ ಕೈತಪ್ಪುವ ಬಹುತೇಕ ಸಾಧ್ಯತೆಗಳಿವೆ. ಈ ಎಲ್ಲಾ ಕಾರಣದಿಂದ ಕೊನೆ ಕ್ಷಣದಲ್ಲಿ ಟಿಕೆಟ್‌ ಸಿಗದವರು ಬಂಡಾಯವಾಗಿ ಸ್ಪರ್ಧಿಸುವ ಸಾಧ್ಯತೆಗಳನ್ನೂ ತಳ್ಳಿ ಹಾಕುವಂತಿಲ್ಲ. 

* ಸಿ.ದಿನೇಶ್‌

Advertisement

Udayavani is now on Telegram. Click here to join our channel and stay updated with the latest news.

Next