Advertisement

ಸುಗ್ರೀವಾಜ್ಞೆ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದಿಲ್ಲ

06:44 AM Jan 29, 2019 | |

ಬೆಂಗಳೂರು: “ಲೋಕಸಭಾ ಚುನಾವಣೆಗೆ ಮೊದಲು ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದಿಲ್ಲ’ ಎಂದು ಕೇಂದ್ರ ಅಹಾರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ತಿಳಿಸಿದರು.

Advertisement

ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ಅಯೋಧ್ಯೆಯಲ್ಲಿ ರಾಮಮಂದಿರ ವಿಚಾರ ಸುಪ್ರೀಂಕೋರ್ಟ್‌ ಮುಂದಿದೆ. ನರೇಂದ್ರ ಮೋದಿ ರಾಮಮಂದಿರ ನಿರ್ಮಿಸುವ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಿಲ್ಲ. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ತೀರ್ಪು ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಪ್ರಧಾನಿಗಳು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸುಗ್ರೀವಾಜ್ಞೆ ಹೊರಡಿಸುವ ಪ್ರಶ್ನೆಯೇ ಬರುವುದಿಲ್ಲ’ ಎಂದರು.

ಬಿಜೆಪಿ, ಆರ್‌ಎಸ್‌ಎಸ್‌, ಭಜರಂಗ ದಳ, ಹಿಂದೂ ಜಾಗೃತಿ ವೇದಿಕೆಗಳ ನಾಯಕರು ಮಂದಿರ ನಿರ್ಮಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಕೆಲವರು ಮಂದಿರ ನಿರ್ಮಿಸಿ ಇನ್ನೂ ಕೆಲವರು ಮಸೀದಿ ನಿರ್ಮಿಸಿ ಎನ್ನುತ್ತಾರೆ. ಇಂತಹ ಸಂದರ್ಭದಲ್ಲಿ ಯಾವುದೇ ನಿರ್ಧಾರ ಕೈಗೊಂಡರೂ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುತ್ತದೆ. ಹೀಗಾಗಿ ಸುಪ್ರೀಂಕೋರ್ಟ್‌ ನೀಡುವ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.

ದೇಶದ ಜನರು ಸದೃಢ ನಾಯಕತ್ವ ಹಾಗೂ ಸಮರ್ಥ ಸರ್ಕಾರವನ್ನು ಬಯಸುತ್ತಿದ್ದು, ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿಯಬೇಕೆಂಬ ಬಯಕೆಯಿರುವವರು 2024ರ ಬಗ್ಗೆ ಯೋಚಿಸಬೇಕಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮೋದಿಯವರೇ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ಈವರೆಗೆ ಪ್ರಬಲವಾದ ವಿರೋಧ ಪಕ್ಷವಿಲ್ಲದಿರುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, 28 ಪಕ್ಷಗಳು ಸೇರಿ ಮಹಾ ಘಟಬಂಧನ್‌ ರಚಿಸಿಕೊಂಡಿವೆ. ಆದರೆ, ಅವರಲ್ಲಿ ಯಾರು ಪ್ರಧಾನಿ ಅಭ್ಯರ್ಥಿ ಎಂಬುದು ಅವರಲ್ಲಿಯೇ ಗೊಂದಲವಿದೆ. ವಿರೋಧ ಪಕ್ಷಗಳಲ್ಲಿ ಅನಿಶ್ಚಿತತೆಯಿದ್ದು, ರಾಹುಲ್‌ ಗಾಂಧಿ ಪ್ರಧಾನಿಯಾಗಬೇಕು ಎಂದರೆ ಎಷ್ಟು ಜನರು ಒಪ್ಪುತ್ತಾರೆ ಎಂದು ಪ್ರಶ್ನಿಸಿದರು.

Advertisement

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಹಲವು ರಾಜ್ಯಗಳ ಮುಖಂಡರು ಭಾಗಿಯಾಗುತ್ತಾರೆ. ಅವರೆಲ್ಲ ಪಶ್ಚಿಮ ಬಂಗಾಳದಲ್ಲಿ ಮತದಾನ ಮಾಡಲು ಸಾಧ್ಯವಾಗುತ್ತದೆಯೇ ಎಂದು ಪ್ರಶ್ನಿಸಿದ ಅವರು, ಸದ್ಯ 2019ಕ್ಕೆ ಕೇಂದ್ರದಲ್ಲಿ ಯಾವುದೇ ಹುದ್ದೆ ಖಾಲಿಯಿಲ್ಲ. ಹೀಗಾಗಿ 2024ರ ಚುನಾವಣೆಯ ಬಗ್ಗೆ ವಿರೋಧ ಪಕ್ಷಗಳು ಯೋಚಿಸುವುದು ಉತ್ತಮ ಎಂದು ವ್ಯಂಗ್ಯವಾಡಿದರು. ಭಾರತ ರತ್ನ ಪ್ರಶಸ್ತಿ ಪ್ರಣಬ್‌ ಮುಖರ್ಜಿ ಅವರಿಗೆ ನೀಡಿರುವುದರಲ್ಲಿ ವಿವಾದವಿಲ್ಲ ಎಂದ‌ರು.

ಪ್ರಿಯಾಂಕ ಪ್ರವೇಶದಿಂದ ಆತಂಕವಿಲ್ಲ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಹೋದರಿ ಪ್ರಿಯಾಂಕ ಗಾಂಧಿ ಅವರು ಅಧಿಕೃತವಾಗಿ ರಾಜಕೀಯಕ್ಕೆ ಕರೆ ತಂದಿರುವುದರಿಂದ ಬಿಜೆಪಿ ವಿಚಲಿತಗೊಂಡಿಲ್ಲ. ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್‌ ಇದೆಲ್ಲವನ್ನೂ ಮಾಡಿದ್ದು, ಪ್ರಿಯಾಂಕ ಬಂದಿರುವುದರಿಂದ ನಮಗೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದರು.

ಪಡಿತರ ಬದಲಿಗೆ ಹಣ ನೀಡಲು ಚಿಂತನೆ – ಪಾಸ್ವಾನ್‌: ಕರ್ನಾಟಕದಲ್ಲೂ ಅಕ್ಕಿ ಬದಲಿಗೆ ಪಡಿತರ ಫ‌ಲಾನುಭವಿಗಳಿಗೆ ಹಣ ಕೊಡುವ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಹೇಳಿದರು.

ಪಾಂಡಿಚೇರಿ, ಛತ್ತೀಸ್‌ಗಢ ಹಾಗೂ ದಾಧರ್‌ನಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ 4.33 ಕೋಟಿ ಜನ ಪಡಿತರ ಫ‌ಲಾನುಭವಿಗಳಿದ್ದಾರೆ. ಅದರಂತೆ ಶೇ.74 ಕುಟುಂಬಗಳಿಗೆ ಸಬ್ಸಿಡಿ ಅಡಿಯಲ್ಲಿ ವಾರ್ಷಿಕ 26 ಲಕ್ಷ ಮೆಟ್ರಿಕ್‌ ಟನ್‌ ಆಹಾರ ಧಾನ್ಯಗಳನ್ನು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೀಡಲಾಗುತ್ತಿದೆ ಎಂದರು.

ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಗ್ರಾಹಕರ ಹಿತರಕ್ಷಣಾ ಕಾಯ್ದೆ ಜಾರಿಗೆ ಮುಂದಾಗಿದ್ದು, ಈಗಾಗಲೇ ಲೋಕಸಭೆಯಲ್ಲಿ ಕಾಯ್ದೆಗೆ ಒಪ್ಪಿಗೆ ದೊರಕಿದೆ. ರಾಜ್ಯ ಸಭೆಯಲ್ಲಿ ಅಂಗೀಕಾರವಾಗಬೇಕಿದೆ. ಮುಂದಿನ ಬಜೆಟ್ ಅಧಿವೇಶನದಲ್ಲಿ ಕಾಯ್ದೆ ಅಂಗೀಕಾರವಾಗುವ ಭರವಸೆಯಿದೆ ಎಂದು ಹೇಳಿದರು.

ಆಂತರಿಕ ಕಚ್ಚಾಟದಿಂದ ಮೈತ್ರಿ ಸರ್ಕಾರ ಪತನ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ‘ರಾಜೀನಾಮೆ ನೀಡಲು ಸಿದ್ಧ’ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪಾಸ್ವಾನ್‌, ಮೈತ್ರಿ ಸರ್ಕಾರ ಹೇಗೆ ನಡೆಯುತ್ತಿದೆ ಎಂಬುದಕ್ಕೆ ಇದೊಂದು ನಿದರ್ಶನ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎಂದೂ ಒಂದಾಗಲು ಸಾಧ್ಯವಿಲ್ಲ. ಮೈತ್ರಿ ಸರ್ಕಾರದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿದ್ದು, ಆಂತರಿಕ ಕಚ್ಚಾಟಗಳಿಂದ ಪತನವಾಗಲಿದೆ ಎಂದರು.

ಬಾಕಿ ಸಬ್ಸಿಡಿ ಹಣ ಶೀಘ್ರ ಬಿಡುಗಡೆ: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ 1,100 ಕೋಟಿ ರೂ. ಸಬ್ಸಿಡಿ ಹಣ ರಾಜ್ಯಕ್ಕೆ ಕೊಡಬೇಕಿದೆ. ಆ ಪೈಕಿ ಈಗಾಗಲೇ 300 ಕೋಟಿ ರೂ. ನೀಡಿದ್ದು, ಉಳಿದ ಹಣವನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ರಾಮ್‌ ವಿಲಾಸ್‌ ಪಾಸ್ವಾನ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next