Advertisement

ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು? ಇಲ್ಲಿದೆ ಮಾಹಿತಿ…

12:47 AM Mar 26, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಝಳ ಭಾರೀ ಹೆಚ್ಚಳವಾಗುತ್ತಿದ್ದು, ಜನ ಸಾಮಾನ್ಯರು ಬೇಗೆಗೆ ತತ್ತರಿಸಿ ಹೋಗಿದ್ದಾರೆ. ತಾಪಮಾನ ವಿಪರೀತ ಏರಿಕೆಯಾಗಿರುವ ನಡುವೆಯೇ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಬಹುತೇಕ ಕಡೆಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಳವಾಗಿದ್ದು, ಬಹುತೇಕ ಕಡೆಗಳಲ್ಲಿ 3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಏರಿಕೆಯಾಗಿದೆ. ಪರಿಣಾಮ ಜನರು ತೀವ್ರ ಸೆಕೆ ಅನುಭವಿಸುತ್ತಿದ್ದಾರೆ. ಏಪ್ರಿಲ್‌ ಪ್ರಾರಂಭದಲ್ಲಿ ಬಿಸಿಲಿನ ಬೇಗೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಒಣ ಹವೆ ಮುಂದುವರಿವೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಉಷ್ಣಾಂಶವು 2 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗಲಿದ್ದು, ಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ ಇನ್ನೂ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಅತ್ಯಧಿಕ ತಾಪಮಾನ
ರಾಜಧಾನಿ ಬೆಂಗಳೂರಿನಲ್ಲಿ 2023ರಲ್ಲಿ ಇದೇ ಮೊದಲ ಬಾರಿಗೆ ಶನಿವಾರ 34.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ. ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಎಷ್ಟೆಷ್ಟು ತಾಪಮಾನ?
ಶನಿವಾರ ಕಲಬುರಗಿಯಲ್ಲಿ ಗರಿಷ್ಠ 38.2 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರು 37.4, ಗದಗ 36.2, ಮೈಸೂರು 36.2, ಬಳ್ಳಾರಿ 36.8, ಚಾಮರಾಜನಗರ 35.6, ಹಾವೇರಿ 35.4, ಚಿತ್ರದುರ್ಗ, ಮಂಗಳೂರು ತಲಾ 35.1 ಶಿವಮೊಗ್ಗ 35, ಕಾರವಾರದಲ್ಲಿ 35 ಗರಿಷ್ಠ ತಾಪಮಾನ ದಾಖಲಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರಿದಿದೆ.

Advertisement

ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು ?
ಅತೀಯಾದ ತಾಪಮಾನದಿಂದ ಜ್ವರ, ತಲೆನೋವು, ಹೀಟ್‌ ಸ್ಟೋಕ್‌ನಂತಹ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ತಜ್ಞ ವೈದ್ಯರು ಸಲಹೆ ನೀಡಿದ್ದಾರೆ.¬ ದಿನಕ್ಕೆ ಕನಿಷ್ಠ 3 ಲೀಟರ್‌ ನೀರು ಸೇವಿಸಿ, ದಿನಕ್ಕೆ 2 ಬಾರಿ ಸ್ನಾನ ಮಾಡಿದರೆ ಚರ್ಮದ ಸಮಸ್ಯೆ ಕಾಡುವುದಿಲ್ಲ, ಮಕ್ಕಳು ಕಲುಷಿತ ನೀರು ಸೇವಿಸದಂತೆ ಎಚ್ಚರಿಕೆ ವಹಿಸಿ, ಕಾಟನ್‌ ಉಡುಪು ಧರಿಸಿ ಮೈ ಹಗುರವಾಗಿರಿಸಿ, ಮಧ್ಯಾಹ್ನ ಕಾಫಿ, ಟೀ ಅತೀಯಾದ ಸೇವನೆ ಬೇಡ ಎಂದೂ ವೈದ್ಯರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next