Advertisement

ಮೂರೂ ಸಮ್ಮಿಶ್ರ ಸರ್ಕಾರಗಳಿಗೆ ಕಾಡಿದ್ದ ಬಂಡಾಯ

12:01 AM Jul 24, 2019 | Team Udayavani |

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಒಂದೂವರೆ ದಶಕದಲ್ಲಿ ಮೂರು ಮೈತ್ರಿ ಸರ್ಕಾರಗಳು ಅಧಿಕಾರ ನಡೆಸಿವೆಯಾದರೂ ಅವುಗಳ ಆಯುಷ್ಯ “ಗಟ್ಟಿ’ಯಾಗಿರಲಿಲ್ಲ. ಜತೆಗೆ, ಆಯಾ ಪಕ್ಷಗಳಿಗೆ ಬಂಡಾಯ ಬೆಂಬಿಡದಂತೆ ಕಾಡಿತ್ತು. 2004ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ, ಆ ನಂತರದ ಬಿಜೆಪಿ-ಜೆಡಿಎಸ್‌ ಸರ್ಕಾರ, ಆದಾದ ನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫ‌ಲಿತಾಂಶದಿಂದ ರಚನೆಗೊಂಡ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರಗಳು ಮೈತ್ರಿ ಸರ್ಕಾರದ ಪ್ರಯೋಗ ಕಷ್ಟ ಎಂಬುದಕ್ಕೆ ಸಾಕ್ಷಿ.

Advertisement

2004ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 65, ಜೆಡಿಎಸ್‌ 58, ಬಿಜೆಪಿ 79 ಸ್ಥಾನ ಗಳಿಸಿತ್ತು. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡು ಕಾಂಗ್ರೆಸ್‌ನ ಧರ್ಮಸಿಂಗ್‌ ಮುಖ್ಯಮಂತ್ರಿ, ಜೆಡಿಎಸ್‌ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾದರು. ಆದರೆ, 2006ರ ವೇಳೆಗೆ ಸಿದ್ದರಾಮಯ್ಯ ಹಾಗೂ ದೇವೇಗೌಡರ ನಡುವೆ ರಾಜಕೀಯ ಭಿನ್ನಾಭಿಪ್ರಾಯ ಉಂಟಾಗಿ ಸಿದ್ದರಾಮಯ್ಯ ಅವರು “ಅಹಿಂದ’ ಹೋರಾಟ ಆರಂಭಿಸಿದ್ದರಿಂದ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

ಆಗ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಎಸ್‌ನ 46 ಶಾಸಕರು ಎಚ್‌.ಡಿ.ಕುಮಾರಸ್ವಾಮಿಯವರ ನೇತೃತ್ವದಲ್ಲಿ ಬಂಡಾಯ ಎದ್ದು ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಿದ್ದರು. ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ, ಬಿಜೆಪಿಯ ಬಿ.ಎಸ್‌.ಯಡಿಯೂರಪ್ಪ ಉಪ ಮುಖ್ಯಮಂತ್ರಿಯಾಗಿದ್ದರು. 20 ತಿಂಗಳ ನಂತರ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಒಪ್ಪಂದವಾಗಿತ್ತು. ಆದರೆ, ಕುಮಾರಸ್ವಾಮಿಯವರು ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಲು ನಿರಾಕರಿಸಿದಾಗ ಬಿಜೆಪಿ ಬೆಂಬಲ ವಾಪಸ್‌ ಪಡೆಯಿತು. ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದರು. ಆಗ ಜೆಡಿಎಸ್‌ ವಿರುದ್ಧ ವಚನಭ್ರಷ್ಟರು ಎಂಬ ಆರೋಪ ಕೇಳಿ ಬಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next