ಬೆಂಗಳೂರು: ಬಿಬಿಎಂಪಿಯಲ್ಲಿ ಈಗ 12 ಸ್ಥಾಯಿ ಸಮಿತಿ ಅಧ್ಯಕ್ಷರ ಮತ್ತು ಸದಸ್ಯರ ಅಧಿಕಾರ ಅವಧಿಗೆ ಸಂಬಂಧಿಸಿದಂತೆ ಮುಸುಕಿನ ಗುದ್ದಾಟ ಪ್ರಾರಂಭವಾಗಿದೆ. ಸೋಮವಾರ ಪಾಲಿಕೆಯ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್ ಅವರ ನೇತೃತ್ವದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ನಗರಾಭಿವೃದ್ಧಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.
ಬಿಬಿಎಂಪಿ ಸ್ಥಾಯಿ ಸಮಿತಿ ಸದಸ್ಯರ ಅಧಿಕಾರ ಅವಧಿ ಒಂದು ವರ್ಷವಿರುತ್ತದೆ. ಇದರ ಪ್ರಕಾರ ಈಗ ಆಯ್ಕೆಯಾಗಿರುವ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರ ಅಧಿಕಾರ ಅವಧಿ ಡಿ.4ಕ್ಕೆ ಮುಕ್ತಾಯವಾಗಲಿದೆ. ಅದಾದ ನಂತರ ಸ್ಥಾಯಿ ಸಮಿತಿಗೆ ಚುನಾವಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಕಳೆದ ವಾರವಷ್ಟೇ ಬಿಬಿಎಂಪಿಯ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಮೇಯರ್ ಚುನಾವಣೆಯ ಜತೆಗೆ 12 ಸ್ಥಾಯಿ ಸಮಿತಿಗಳ ಚುನಾವಣೆಯನ್ನೂ ನಡೆಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಮೈತ್ರಿ ಆಡಳಿತ ಪಕ್ಷದ ಸದಸ್ಯರು ಸ್ಥಾಯಿ ಸಮಿತಿ ಸದಸ್ಯರ ಅಧಿಕಾರ ಅವಧಿಯನ್ನು ಮೊಟಕುಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.
ಮನವಿ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್, 2018 ಡಿ.4 ರಂದು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ವೇಳೆ ಪ್ರಾದೇಶಿಕ ಆಯುಕ್ತರು ಸ್ಪಷ್ಟವಾಗಿ ಸ್ಥಾಯಿ ಸಮಿತಿಯ ಅಧಿಕಾರ ಅವಧಿ ಒಂದು ವರ್ಷ ಎಂದು ಉಲ್ಲೇಖೀಸಿದ್ದಾರೆ. ಆದರೆ, ಈಗ ಬಿಜೆಪಿ ಮೇಯರ್ ಮತ್ತು ಉಪಮೇಯರ್ ಚುನಾವಣೆ ವೇಳೆ ಸ್ಥಾಯಿ ಸಮಿತಿಗೆ ಚುನಾವಣೆ ಮಾಡುವಂತೆ ಮನವಿ ಮಾಡಿದ್ದಾರೆ. ಇದರಿಂದ ಈಗಿರುವ ಸ್ಥಾಯಿ ಸಮಿತಿಯ ಸದಸ್ಯರ ಅಧಿಕಾರವಧಿ ಕಡಿತವಾಗಲಿದೆ. ಹೀಗಾಗಿ, ಡಿ.4ಕ್ಕೆ ಸ್ಥಾಯಿ ಸಮಿತಿಗೆ ಚುನಾವಣೆ ನಡೆಸುವಂತೆ ಮನವಿ ಮಾಡಲಾಗಿದೆ ಎಂದರು.
ಈ ಹಿಂದೆ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯುವ ಸಂದರ್ಭದಲ್ಲೇ 12 ಸ್ಥಾಯಿ ಸಮಿತಿಗಳ ಚುನಾವಣೆಯನ್ನೂ ನಡೆಸಲಾಗುತ್ತಿತ್ತು. ಆದರೆ, 2015-16ರಲ್ಲಿ ಮೈತ್ರಿ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಸ್ಥಾಯಿ ಸಮಿತಿಗಳ ಸದಸ್ಯರ ಚುನಾವಣೆ ನಡೆಸುವುದು ತಡವಾಯಿತು. 2018ರ ಸೆ.28 ರಂದು ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಚುನಾವಣೆ ಹಾಗೂ ಡಿ.4 ಕ್ಕೆ ಸ್ಥಾಯಿ ಸಮಿತಿ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಸಲಾಗಿತ್ತು.
ಸೆ.28ಕ್ಕೆ ಮೇಯರ್ ಗಂಗಾಂಬಿಕೆ ಅವರ ಅಧಿಕಾರವಧಿ ಮುಗಿಯಲಿದ್ದು, ಈ ಬಾರಿ ಬಿಜೆಪಿಗೆ ಸಂಖ್ಯಾಬಲ ಹೆಚ್ಚಿರುವುದರಿಂದ ಬಿಬಿಎಂಪಿಯ ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಹೀಗಾಗಿ, ಬಿಬಿಎಂಪಿಯಲ್ಲಿ ಮುಂದಿನ ದಿನಗಳಲ್ಲಿ ಮೇಯರ್ ಮತ್ತು ಸ್ಥಾಯಿ ಸಮಿತಿಗಳ ನಡುವೆ ಉಂಟಾಗಬಹುದಾದ ಗುದ್ದಾಟವನ್ನು ತಪ್ಪಿಸುವ ಉದ್ದೇಶದಿಂದ ಮೇಯರ್ ಹಾಗೂ ಉಪಮೇಯರ್ ಚುನಾವಣೆ ವೇಳೆಯಲ್ಲಿಯೇ ಸ್ಥಾಯಿ ಸಮಿತಿ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಪ್ರಾದೇಶಿಕ ಚುನಾವಣಾ ಆಯುಕ್ತರಿಗೆ ಹಾಗೂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದಾರೆ.
ಸೆ.11ಕ್ಕೆ ಮೇಯರ್ ಚುನಾವಣೆ ಅಧಿಸೂಚನೆ ಸಾಧ್ಯತೆ: 2019-20ನೇ ಸಾಲಿನ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಸೆ.11 ರಂದು ಅಧಿಸೂಚನೆ ಹೊರ ಬೀಳುವ ಸಾಧ್ಯತೆ ಇದೆ. ಮೇಯರ್ ಗಂಗಾಂಬಿಕೆ ಹಾಗೂ ಉಪಮೇಯರ್ ಭದ್ರೇಗೌಡ ಅವರ ಅಧಿಕಾರವಧಿ ಸೆ.28ಕ್ಕೆ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ, ಚುನಾವಣೆ ನಡೆಸುವಂತೆ ಪ್ರಾದೇಶಿಕ ಚುನಾವಣಾ ಆಯುಕ್ತರಿಗೆ ಪಾಲಿಕೆ ಆಯುಕ್ತರು ಪತ್ರ ಬರೆದಿದ್ದಾರೆ.
ಕಮೇಯರ್ ಹಾಗೂ ಉಪಮೇಯರ್ ಚುನಾವಣೆ ಜತೆಗೆ ಸ್ಥಾಯಿ ಸಮಿತಿಗಳಿಗೆ ಚುನಾವಣೆನ್ನೂ ನಡೆಸಬೇಕು ಎಂದು ಕೆಎಂಸಿ ಕಾಯ್ದೆಯಲ್ಲಿ ತಿಳಿಸಲಾಗಿದೆ. ಕಾನೂನಿನ ಪ್ರಕಾರ ಚುನಾವಣೆ ನಡೆಯಲಿ.
-ಪದ್ಮನಾಭ ರೆಡ್ಡಿ, ಬಿಬಿಎಂಪಿ ವಿರೋಧ ಪಕ್ಷದ ನಾಯಕ