Advertisement

ಟ್ಯಾಂಕರ್‌ ನೀರು ಪೂರೈಕೆಗೆ ನಿರ್ಬಂಧ ತೆರವು

12:32 PM Nov 30, 2018 | |

ವಿಜಯಪುರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲು 90 ದಿನಗಳ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

Advertisement

ಗುರುವಾರ ನಗರದಲ್ಲಿರುವ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ನಿಬಂಧನೆ ತೆರವುಗೊಳಿಸಿದ್ದರೂ ನೈಜವಾಗಿ ಅನುಷ್ಠಾನಕ್ಕೆ ಬಂದಿಲ್ಲ. ಕುಡಿಯುವ ನೀರಿನ ವಿಷಯದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಸಮನ್ವಯದಿಂದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಲು ಕ್ರಮ ಕೈಗೊಳ್ಳಬೇಕು. ಹೊಸ ತಾಲೂಕುಗಳ ರಚನೆ ಸೇರಿದಂತೆ ಅನೇಕ ಗೊಂದಲಗಳು ಎದುರಾಗಿವೆ. ಹೀಗಾಗಿ ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒ ಅವರು
ಸಮನ್ವಯ ಸಭೆ ಕರೆದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಶಾಸಕ ಎಂ.ಬಿ.ಪಾಟೀಲ ತಿಕೋಟಾ ಸೇರಿದಂತೆ ಜಿಲ್ಲೆಯ ಹಲವೆಡೆ 90 ದಿನಗಳ ನಂತರ ಟ್ಯಾಂಕರ್‌ ಪೂರೈಕೆ ನಿಲ್ಲಿಸಲಾಗಿದೆ ಎಂದು ಸಭೆ ಗಮನಕ್ಕೆ ತಂದರು. ಆಗ ಮಧ್ಯ ಪ್ರವೇಶಿಸಿದ ಜಿಲ್ಲಾಧಿಕಾರಿ ಎಸ್‌.ಬಿ.ಶೆಟ್ಟೆಣ್ಣವರ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಸಮಜಾಯಿಸಿ ನೀಡಲು ಮುಂದಾದಾಗ ಶಾಸಕ ಎಂ.ಬಿ.ಪಾಟೀಲ ಸಭೆಗೆ ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ಕಿಡಿಕಾರಿದರು. ಆಗ ಪ್ರತಿಕ್ರಿಯಿಸಿದ ಕೃಷ್ಣ ಭೈರೇಗೌಡ ಈ ನಿಬಂಧನೆ ಅನುಷ್ಠಾನ ಏಕೆ ಮಾಡಿಲ್ಲ ಎಂದು ಸಚಿವರು ಸಹ ಆಕ್ಷೇಪ ವ್ಯಕ್ತಪಡಿಸಿದರು.

ಟ್ಯಾಂಕರ್‌ ನೀರು ಪೂರೈಸುವ ಕೊಳವೆಬಾವಿಯಲ್ಲಿ ನೀರಿನ ಪ್ರಮಾಣ ತಗ್ಗಿದೆ ಎಂಬುದು ಗೊತ್ತಾದರೆ ತಕ್ಷಣವೇ ಅದಕ್ಕೆ
ಪಿಡಿಒಗಳು, ಇಒಗಳು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಪರವಾನಗಿ ಸೇರಿ ಇತರೆ ನೆಪಗಳನ್ನು ಮುಂದಿಟ್ಟುಕೊಂಡು ಅನಗತ್ಯ ವಿಳಂಬ ಮಾಡದೇ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಆಯಾ ತಹಶೀಲ್ದಾರರಿಗೆ ಪ್ರತ್ಯೇಕ ಶೀರ್ಷಿಕೆಯಡಿಯಲ್ಲಿ 25 ಲಕ್ಷ ರೂ. ಅನುದಾನ ನೀಡಿದ್ದು, 15 ದಿನಗಳಲ್ಲಿ ಟ್ಯಾಂಕರ್‌ ಬಿಲ್‌ ಪಾವತಿಸಬೇಕು ಎಂದು ಸೂಚಿಸಿದರು. 

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಸಿಇಒ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಎಂದು ಪದೇ ಪದೇ ಹೇಳುತ್ತಿದ್ದೇನೆ, ಪ್ರಸ್ತುತ ಕೇವಲ “ಟಪಾಲ್‌ ಸಿಸ್ಟ್‌ಂ’ನಲ್ಲಿ ಆಡಳಿತ ನಡೆಸುವುದು ಬೇಡ, ತ್ವರಿತಗತಿಯಲ್ಲಿ ಸಭೆ ನಡೆಸಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ತಾಲೂಕಿನಲ್ಲಿ ಭೀಕರ ಬರ ಆವರಿಸಿದ್ದು, ಕುಡಿಯುವ ನೀರಿನ ಸಮಸ್ಯೆ ಅತ್ಯಂತ ಗಂಭೀರ ಸ್ವರೂಪದಲ್ಲಿದೆ. ಹೀಗಾಗಿ ಕೂಡಲೇ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿ ಭೀಮಾ ನದಿಗೆ ನೀರು
ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆಲಮಟ್ಟಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಕಾರಣದಿಂದಾಗಿ ಇಂಡಿ ಶಾಖಾ ಕಾಲುವೆ ಮುಖಾಂತರ ನೀರು ತರಲು ಸಾಧ್ಯವಿಲ್ಲ. ಹೀಗಾಗಿ ಮಹಾರಾಷ್ಟ್ರದ ಭೀಮಾ ನದಿಯಿಂದ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಸಲಹೆ ನೀಡಿದರು. ಇಂಡಿ ಭಾಗಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಹಾಗೂ ತಾತ್ಕಾಲಿಕ ಯೋಜನೆ ಎರಡೂ ಜಾರಿಗೊಳ್ಳಬೇಕಾಗಿರುವುದು ಅಗತ್ಯ ಎಂದು ಸಭೆಯ ಗಮನಕ್ಕೆ ತಂದರು.

ಆರೋಗ್ಯ ಸಚಿವ ಶಿವಾನಂದ ಪಾಟೀಲ ಮಾತನಾಡಿ, ವಿಜಯಪುರ, ಬಾಗಲಕೋಟೆಗೆ ಸಂಬಂಧಿ ಸಿದಂತೆ ಜಲಧಾರೆ ಎಂಬ ವಿಶೇಷ ಯೋಜನೆ ರೂಪಿಸಲಾಗುತ್ತಿದೆ ಎಂದರು. ಜಿಪಂ ಸಿಇಒ ಕಾರ್ಯವೈಖರಿ ವಿರುದ್ಧ ಅಸಮಾಧಾನ ಹೊರ ಹಾಕಿದ ಶಾಸಕ ಎಂ.ಬಿ. ಪಾಟೀಲ, ಅಧ್ಯಕ್ಷರು ಸೇರಿಂತೆ ಹಲವರು ಜಿಪಂ ಸಿಇಒ ತಮ್ಮ ನಡವಳಿಕೆ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಆಡಳಿತದ ಹಂತದಲ್ಲಿ ಅಧ್ಯಕ್ಷರು ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ದೂರುಗಳಿವೆ. ಹೀಗಾಗಿ ಸಿಇಒ ನಡವಳಿಕೆ ತಿದ್ದಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆಗ ಮಧ್ಯ ಪ್ರವೇಶಿಸಿದ ಸಚಿವ ಕೃಷ್ಣ ಭೈರೇಗೌಡ, ನಿಮ್ಮ ಸಿಇಒ ಆಡಳಿತಾತ್ಮಕ ದಕ್ಷತೆಯಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ. ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ವಿಷಯದಲ್ಲಿ ಅವರು ವಿಫಲರಾಗಿರಬೇಕು. ಈ ನಡವಳಿಕೆಯನ್ನು ಬದಲಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಚಿವ ಶಿವಾನಂದ ಪಾಟೀಲ, ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಜಿ.ಪಂ ಅಧ್ಯಕ್ಷೆ ನೀಲಮ್ಮ ಮೇಟಿ, ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಸಭೆಯಲ್ಲಿ ಉಪಸ್ಥಿತರಿದ್ದರು.

ನರೇಗಾ ವಿಫಲಕ್ಕೆ ಸಚಿವ ಕೃಷ್ಣ ಅಸಮಾಧಾನ
ವಿಜಯಪುರ: ನರೇಗಾ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ನಿಗದಿತ ಗುರಿ ಸಾಧಿಸುವಲ್ಲಿ ವಿಫಲವಾಗಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ
ವ್ಯಕ್ತಪಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ
ಘಟನೆ ಜರುಗಿತು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ನರೇಗಾ ಕುರಿತು ಪ್ರಗತಿಯನ್ನು ಅವಲೋಕಿಸಿದ ಸಚಿವರು, ವಿಜಯಪುರ ಜಿಲ್ಲೆಯಾದ್ಯಂತ ಭೀಕರ ಬರ ಆವರಿಸಿದ್ದು, ಗಂಭೀರ ಸಮಸ್ಯೆ ಇದೆ. ಇಂಥ ಸಂದರ್ಭದಲ್ಲಿ ಜನರಿಗೆ ಸ್ಥಳೀಯವಾಗಿ ದುಡಿಯುವ ಕೈಗಳಿಗೆ ಕೆಲಸ ಕೊಡುವಲ್ಲಿ ನೆರವಾಗುವ ನರೇಗಾ ಯೋಜನೆ ಅನುಷ್ಠಾನ ಮಾಡಬೇಕು. ಮುದ್ದೇಬಿಹಾಳ, ಸಿಂದಗಿ, ಬಸವನ ಬಾಗೇವಾಡಿ ತಾಲೂಕಿನಲ್ಲಿ ಕಡಿಮೆ ಗುರಿ ಇರಿಸಿಕೊಂಡಿದ್ದರೂ ಪ್ರಗತಿ ಸಾಧಿಸುವಲ್ಲಿ ವಿಫಲವಾಗಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು.

ಈ ಹಂತದಲ್ಲಿ ಸಚಿವ ಭೈರೇಗೌಡ ಸಿಇಒ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ, ಅಧಿಕಾರಿಗಳನ್ನು ಬಳಸಿಕೊಳ್ಳುತ್ತೀರೋ ಗೊತ್ತಿಲ್ಲ. ತಕ್ಷಣ ಅಧಿಕಾರಿಗಳ ಕಾರ್ಯವೈಖರಿ ಬದಲಾಗಬೇಕು. ಇಲ್ಲವಾದಲ್ಲಿ ನಾನು ಹೇಗೆ ಹೇಳಬೇಕು ಎಂದು ಯೋಚಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಯೊಂದು ಹಳ್ಳಿ-ಹಳ್ಳಿಯ ಮನೆ-ಮನೆಗೂ ಪೈಪ್‌ ಲೈನ್‌ ಮುಖಾಂತರ ಕುಡಿಯುವ ನೀರು ಪೂರೈಸಲು ಮಹತ್ವಾಕಾಂಕ್ಷೆಯ “ಜಲಧಾರೆ’ ಯೋಜನೆಯನ್ನು ವಿಜಯಪುರ-ಬಾಗಲಕೋಟೆ ಜಿಲ್ಲೆಗಳಲ್ಲಿ ಆದ್ಯತೆ ಮೇರೆಗೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಎಂದರು.

ಶಾಸಕ ಎಂ.ಬಿ. ಪಾಟೀಲ ಮಾತನಾಡಿ, ಈಗಾಗಲೇ ಈ ಯೋಜನೆಗೆ ಅನುಷ್ಠಾನಕ್ಕೆ ಸಂಬಂಧಿ ಸಿದಂತೆ ಪೂರಕವಾದ ಎಂ.ವಿ.ಸಿ ಕಾಮಗಾರಿಗಳು ಕೈಗೊಳ್ಳಲಾಗಿದೆ. ಈ ಹಿಂದೆ ಸಿಇಒ ಆಗಿದ್ದ ಕೆ.ಬಿ. ಶಿವಕುಮಾರ ಈ ಯೋಜನೆಯನ್ನು ಅತ್ಯಂತ ವೈಜ್ಞಾನಿಕವಾಗಿ ಹಾಗೂ ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದಾರೆ. ಹೀಗಾಗಿ ಜಲಧಾರೆ ಯೋಜನೆಗೆ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ, ಧಾರಾಳವಾಗಿ ಜಲಧಾರೆ ಅನುಷ್ಠಾನಗೊಳಿಸಬಹುದು ಎಂದು ಸಲಹೆ ನೀಡಿದರು. ಆಗ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ,
ಜಲಧಾರೆ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವ್ಯವಸ್ಥಿತವಾಗಿ ಮಾಸ್ಟರ್‌ಪ್ಲಾನ್‌ ರೂಪಿಸಿ ಎಂದು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next