Advertisement

ರಾಜ್ಯದ ತಾಪ 50 ಡಿಗ್ರಿ ಮುಟ್ಟುವ ಅಪಾಯ!

12:46 AM Apr 02, 2024 | Team Udayavani |

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳು ಬಿಸಿಲಿನ ಬೇಗೆಯಲ್ಲಿ ಬೆಂದಿದ್ದು ಹವಾಮಾನ ಇಲಾಖೆ ಈಗ ಶಾಖದ ಅಲೆಯ ಎಚ್ಚರಿಕೆ ನೀಡಿದೆ.

Advertisement

ಎ.2ರಿಂದ 5ರವರೆಗೆ ಕರಾವಳಿ ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಶಾಖಾ ಸೂಚ್ಯಂಕ 40ರಿಂದ 50 ಡಿಗ್ರಿ ಸೆಲ್ಸಿಯಸ್‌ ತಲುಪಲಿದೆ. ಉತ್ತರ ಒಳನಾಡಿನ ಪ್ರದೇಶಗಳಾದ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಶಾಖ ಅಲೆಯ ಪರಿಸ್ಥಿತಿ ಹಾಗೆಯೇ ಮುಂದುವರಿಯುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜತೆಗೆ ಸೋಮವಾರ ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 41.2 ಡಿಗ್ರಿ ಸೆಲ್ಸಿಯಸ್‌ ಬಾಗಲಕೋಟೆಯಲ್ಲಿ ದಾಖಲಾಗಿದೆ.

ಮುಂದಿನ ಎರಡು ದಿನಗಳಲ್ಲಿ ಬೆಳಗಾವಿ, ಬೀದರ್‌, ಗದಗ, ಧಾರವಾಡ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ. ಹಾಗೆಯೇ ಬೆಂಗಳೂರು ಗ್ರಾಮಾಂತರ‌, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಟ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ರಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡದ ವಾತಾವರಣ ರಾಜಧಾನಿ ಬೆಂಗಳೂರಿನಲ್ಲಿ 2023ರ ಮಾರ್ಚ್‌ 29ರಂದು 35.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು ಈ ವರ್ಷ ಮಾರ್ಚ್‌ 31ರಂದು 36.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. 2017 ಮಾರ್ಚ್‌ 26ರಂದು ಬೆಂಗಳೂರಿನಲ್ಲಿ 37.2 ತಾಪಮಾನ ದಾಖಲಾಗಿತ್ತು. ಇದಾದ ಬಳಿಕ 2019ರ ಮಾರ್ಚ್‌ 8ರಂದು 37.0 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು ಎಂದು ಹವಾ ಮಾನ ಇಲಾಖೆ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಭಾಗಶಃ ಮೋಡವಿರಲಿದ್ದು ಮಧ್ಯಾಹ್ನ ಮತ್ತು ಸಂಜೆ ನಿರ್ಮಲ ಆಕಾಶವಿರಲಿದೆ.

Advertisement

ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹೇಳಿದೆ.

ವಾರಾಂತ್ಯದಲ್ಲಿ ಕೆಲವೆಡೆ ಮಳೆ ನಿರೀಕ್ಷೆ
ಎಪ್ರಿಲ್‌ 6ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಬೀಳುವ ಸಾಧ್ಯತೆಯೂ ಇದ್ದು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದ ಕೆಲಪ್ರದೇಶಗಳಲ್ಲಿ ಮಳೆ ಬಿದ್ದಿದೆ. ಏ.7ರಂದು ಕರಾವಳಿ ತೀರ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ. ಬೆಳಗಾವಿ, ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಆಗುವ ನೀರಿಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next