Advertisement

ಅಂಗನವಾಡಿ ಕಾರ್ಯಕರ್ತೆಯರನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ

09:09 PM Sep 13, 2022 | Team Udayavani |

ವಿಧಾನ ಪರಿಷತ್ತು: ರಾಜ್ಯದ ಅಂಗನವಾಡಿಗಳಲ್ಲೂ “ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಹಾಗಂತ ಹೆಚ್ಚು ವಿದ್ಯಾರ್ಹತೆ ಹೊಂದಿರದ ಯಾವೊಬ್ಬ ಅಂಗನವಾಡಿ ಕಾರ್ಯಕರ್ತೆಯರನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್‌ ಅಭಯ ನೀಡಿದರು.

Advertisement

ಮಂಗಳವಾರ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ 66,361 ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ 20 ಸಾವಿರಕ್ಕೂ ಅಧಿಕ ಅಂಗನವಾಡಿಗಳಲ್ಲಿನ ಕಾರ್ಯಕರ್ತೆಯರು ಪಿಯುಸಿಗಿಂತ ಹೆಚ್ಚು ವಿದ್ಯಾರ್ಹತೆ ಹೊಂದಿದ್ದಾರೆ. ಮೊದಲ ಹಂತದಲ್ಲಿ ಈ ಅಂಗನವಾಡಿಗಳಲ್ಲಿ ಜಾರಿಗೊಳಿಸಲಾಗುವುದು. ಅದಕ್ಕೂ ಮುನ್ನ ಅಲ್ಲಿ ಕೆಲಸ ಮಾಡುವ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಆರು ತಿಂಗಳ ತರಬೇತಿ ನೀಡಲಾಗುವುದು. ಉಳಿದವರಿಗೆ ಒಂದು ವರ್ಷ ಕೌಶಲ್ಯ ತರಬೇತಿ ಒದಗಿಸಲಾಗುವುದು. ಯಾರೊಬ್ಬರನ್ನೂ ತೆಗೆದುಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನುಮುಂದೆ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ 4,266 ಅಂಗನವಾಡಿ ಕೇಂದ್ರಗಳು ತಲೆಯೆತ್ತಲಿವೆ. ಅಲ್ಲೆಲ್ಲ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಗೆ ಪೂರಕವಾದ ವಿದ್ಯಾರ್ಹತೆ ಹೊಂದಿರುವ ಕಾರ್ಯಕರ್ತೆಯರನ್ನು ತೆಗೆದುಕೊಳ್ಳಲಾಗುವುದು. ಇದರಿಂದ ಅನುಷ್ಠಾನ ಸುಲಭವಾಗಲಿದ್ದು, ಮಕ್ಕಳ ಬೆಳವಣಿಗೆಗೂ ಅನುಕೂಲ ಆಗಲಿದೆ ಎಂದ ಸಚಿವರು, ಎನ್‌ಇಪಿಗೆ ಸಂಬಂಧಿಸಿದಂತೆ ಪಠ್ಯಕ್ರಮ ವಿನ್ಯಾಸ, ಮೌಲ್ಯಮಾಪನ, ಸಮುದಾಯ ಸೇರಿ ಆರು ಸಮಿತಿಗಳನ್ನು ರಚಿಸಲಾಗಿದೆ. ಇದು ವರದಿ ನೀಡಿದ ನಂತರ ಪಠ್ಯಕ್ರಮ ಜಾರಿಗೆ ಬರಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next