Advertisement

ಪ್ಲಾಸ್ಟಿಕ್‌ ಮುಕ್ತ ಸಾಹಿತ್ಯ ಸಮ್ಮೇಳನಕ್ಕೆ ಚಿಂತನೆ

05:05 PM Mar 29, 2022 | Team Udayavani |

ಹಾವೇರಿ: ಜಿಲ್ಲೆಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ 86ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ ಒದಗಿ ಬಂದಿದ್ದು ವೈಶಿಷ್ಯಪೂರ್ಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಸಿಕೊಂಡು ಅರ್ಥಪೂರ್ಣ ಸಮ್ಮೇಳನ ಸಂಘಟಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ ಹೇಳಿದರು.

Advertisement

ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ 86ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಸಿದ್ಧತಾ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆ, ಸಾಹಿತಿಗಳ ಅಭಿಪ್ರಾಯ ಆಲಿಸಿ ಅವರು ಮಾತನಾಡಿದರು.

86ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೇ 20, 21 ಹಾಗೂ 22ರಂದು ಮೂರು ದಿನಗಳ ಕಾಲ ಹಾವೇರಿ ನಗರದಲ್ಲಿ ಆಯೋಜಿಸಲು ತಾತ್ಕಾಲಿಕವಾಗಿ ದಿನಾಂಕ ನಿರ್ಧರಿಸಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದರು.

ಪ್ಲಾಸ್ಟಿಕ್‌ ಮುಕ್ತ ಸಮ್ಮೇಳನ ನಡೆಸಲು ಚಿಂತಿಸಲಾಗಿದೆ. ಸ್ವತ್ಛತೆಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ. ಪ್ರತಿದಿನ ಸರಾಸರಿ ಒಂದುವರೆ ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಯಾವುದೇ ಗೊಂದಲ, ಒತ್ತಡಗಳು ಇಲ್ಲದಂತೆ ನೋಂದಣಿಗಾಗಿ 150ಕ್ಕೂ ಅಧಿಕ ಕೌಂಟರ್‌ ತೆಗೆಯುವುದು, ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು, ಸ್ವತ್ಛತೆ ಮತ್ತಿತರ ಕಾರ್ಯಗಳಿಗಾಗಿ ಎರಡು ಸಾವಿರಕ್ಕೂ ಅಧಿಕ ಜನ ಸ್ವಯಂ ಸೇವಕರನ್ನು ಬಳಸಿಕೊಳ್ಳುವುದು, ಹೆಚ್ಚಿನ ಶೌಚಾಲಯಗಳ ಅಳವಡಿಕೆ, ವಸತಿ ಸಮಸ್ಯೆ ನೀಗಿಸಲು ಹಾವೇರಿ ಒಳಗೊಂಡಂತೆ ವಿವಿಧ ತಾಲೂಕು, ದಾವಣಗೆರೆ ಹಾಗೂ ಹುಬ್ಬಳ್ಳಿ ನಗರಗಳಲ್ಲಿ ವಸತಿ ಸೌಕರ್ಯ ಕಲ್ಪಿಸಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ಮೂಲ ಸೌಕರ್ಯಗಳ ಕೊರತೆ ಇರುವ ಜಿಲ್ಲೆಯಲ್ಲಿ 86ನೇ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜಿಸುವುದು ಒಂದು ಸವಾಲಿನ ಕೆಲಸವಾಗಿದೆ. ಇದನ್ನು ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸಲಿದೆ. ಮುಖ್ಯವಾಗಿ ವಸತಿ ಸಮಸ್ಯೆ ಎದುರಾಗುತ್ತದೆ. ಈ ಕೊರತೆ ನೀಗಿಸಲು ಜಿಲ್ಲೆ ಸೇರಿದಂತೆ ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ವಸತಿ ಸೌಕರ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು.

Advertisement

ಸಮ್ಮೇಳನಕ್ಕೆ ಆಗಮಿಸುವವರಿಗೆ ಸಾರಿಗೆ ಸಂಪರ್ಕ ವ್ಯವಸ್ಥೆ ಮಾಡಲಿದ್ದೇವೆ. ಸಾಹಿತ್ಯ ಸಮ್ಮೇಳನ ಕೇವಲ ಜನಜಾತ್ರೆಯಾಗದೇ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಮಾದರಿ ಸಮ್ಮೇಳನವಾಗಿ ಆಯೋಜಿಸಲಾಗುವುದು. ಈ ಉದ್ದೇಶಕ್ಕಾಗಿ ಈಗಾಗಲೇ 17 ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಗಳಲ್ಲಿ ಕೆಲ ಅಧಿಕಾರಿಗಳು ಬದಲಾಗಿದ್ದಾರೆ. ಹಾಗಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಅಧಿಕಾರೇತರ ಸದಸ್ಯರನ್ನು ಒಳಗೊಂಡಂತೆ ಸಮಿತಿಗಳನ್ನು ಶೀಘ್ರವೇ ಪುನರ್‌ ರಚಿಸಲಾಗುವುದು ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಸಮ್ಮೇಳನದ ಯಶಸ್ವಿಗೆ ನಗರಸಭೆ ವತಿಯಿಂದ ಎಲ್ಲ ನೆರವು ನೀಡಲಾಗುವುದು. ನಗರದ ಸ್ವತ್ಛತೆ, ಬೀದಿದೀಪ ಅಳವಡಿಕೆ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು, ಸಾಹಿತಿಗಳು ಮಾತನಾಡಿ, ಸ್ಥಳೀಯ ಸಾಹಿತಿ ಮತ್ತು ಕಲಾವಿದರಿಗೆ ಅವಕಾಶ ಕಲ್ಪಿಸುವುದು, ಹೊಸ ಸಾಹಿತಿಗಳಿಗೆ, ಯುವ ಬರಹಗಾರರಿಗೆ, ಕಲಾವಿದರಿಗೆ ಅವಕಾಶ ಕಲ್ಪಿಸಬೇಕು. ಸ್ಥಳೀಯ ಸಂಘಟನೆಗಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಜವಾಬ್ದಾರಿಗಳನ್ನು ವಹಿಸಿಕೊಡಬೇಕು, ಸಮಾನಾಂತರ ವೇದಿಕೆ ಬದಲು ಒಂದೇ ವೇದಿಕೆಯಲ್ಲಿ ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಯೋಜಿಸಬೇಕು ಎಂದು ಸಲಹೆ ನೀಡಿದರು.

ಜಿಪಂ ಸಿಇಒ ಮಹಮ್ಮದ ರೋಷನ್‌, ಅಪರ ಜಿಲ್ಲಾಕಾರಿ ಡಾ| ಎನ್‌.ತಿಪ್ಪೇಸ್ವಾಮಿ, ಎಎಸ್‌ಪಿ ವಿಜಯಕುಮಾರ ಸಂತೋಷ, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಸಮ್ಮೇಳನದ ವಿವಿಧ ಉಪಸಮಿತಿಗಳ ಸದಸ್ಯ ಕಾರ್ಯದರ್ಶಿ ಅಧಿ ಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next