ಕನಕಪುರ: ಕಾವೇರಿ ವನ್ಯಜೀವಿ ಧಾಮದ ಸಂಗಮ ವಲಯ ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ಮಕ್ಕಳಂದ ಗ್ರಾಮದ ಸುಬ್ಬಯ್ಯ (48), ಮಂಜು (43), ದೊಡ್ಡಾಲಹಳ್ಳಿ ಗ್ರಾಮದ ಪುಟ್ಟಸ್ವಾಮಿ (50), ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಕೆಂಚೇಗೌಡ (38), ಕೀರ್ತಿ(43)ಇಬ್ಬರು ಆರೋಪಿಗಳಿಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ.
ಇದನ್ನೂ ಓದಿ:- ಗೋವಾ : ಪೆಟ್ರೋಲ್ 12 ರೂ., ಡೀಸೆಲ್ 17 ರೂ.ಇಳಿಕೆ
ಆರೋಪಿಗಳು ಕಾವೇರಿ ವನ್ಯಜೀವಿ ಧಾಮದ ಸಂಗಮ ವಲಯ ಭೂಹಳ್ಳಿ ಶಾಖೆಯ ನಾಯಕನಹಳ್ಳಿ ಗಸ್ತಿನ ಕುರುಬನ ಗುಡ್ಡೆ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ನಾಡ ಬಂದೂಕು ಮತ್ತು ಮದ್ದುಗುಂಡುಗಳಿಂದ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಸಹಾಯಕ ಅರಣ್ಯ ಸಂರಕ್ಷಣಾಧಿ ಕಾರಿ ನಾಗೇಂದ್ರ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ದೇವರಾಜ್ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯ ಅಧಿಕಾರಿ ನಿಹಾಲ್ ಅಹಮ್ಮದ್ ಡಾಂಗೆ, ಉಪವಲಯ ಅರಣ್ಯಾಧಿಕಾರಿ ಸದಾಶಿವ ಉಪ್ಪಾರ, ವೆಂಕಟೇಶ್, ಅರಣ್ಯ ರಕ್ಷಕ ನಿಂಗಪ್ಪ, ರವಿ ಒಳಗೊಂಡ ತಂಡ ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿ ದ್ದಾರೆ.
ಈ ವೇಳೆ ಕೀರ್ತಿ ಮತ್ತು ಕೆಂಚೇಗೌಡ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತರಿಂದ ಒಂದು ನಾಡ ಬಂದೂಕು, ಮದ್ದುಗುಂಡುಗಳನ್ನು ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳ ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.