Advertisement

ಬೀದಿಬದಿ ವ್ಯಾಪಾರ ತೆರವಿಗೆ 2 ದಿನ ಗಡುವು: ಮುರುಗೇಶ್‌

02:32 PM Dec 20, 2019 | Team Udayavani |

ಮದ್ದೂರು: ಪಟ್ಟಣದ ಪೇಟೇಬೀದಿ ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರ ವಹಿವಾಟಿನಿಂದ ಜನ ಮತ್ತು ವಾಹನ ಸಂಚಾರಕ್ಕೆ ಕಿರಿಕಿರಿ ಉಂಟಾಗಿದ್ದು, ಕೂಡಲೇ ತೆರವುಗೊಳಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್‌ ಸೂಚಿಸಿದರು.

Advertisement

ಪಟ್ಟಣದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ ಬೀದಿಬದಿ ವ್ಯಾಪಾರಸ್ಥರು ಸಾರ್ವಜನಿಕ ಸ್ಥಳಗಳಾದ ನ್ಯಾಯಾಲಯ, ಲೋಕೋಪಯೋಗಿ ವಸತಿ ಗೃಹ, ತಾಪಂ ಕಚೇರಿ ರಸ್ತೆ, ಸರ್ಕಾರಿ ಆಸ್ಪತ್ರೆ, ಶಾಲಾ ಆವರಣಗಳ ಬಳಿ ರಸ್ತೆಗಳಲ್ಲಿ ವ್ಯಾಪಾರ ನಡೆಸುತ್ತಿದ್ದು, ಜನ ಮತ್ತು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಜತೆಗೆ ವಾಹನ ದಟ್ಟಣೆ ಮಿತಿ ಮೀರಿದ್ದು, ಕಚೇರಿಗೆ ಪ್ರತಿನಿತ್ಯ ಸಾರ್ವಜನಿಕರಿಂದ ಅನೇಕ ದೂರುಗಳು ಬರುತ್ತಿವೆ ಎಂದು ಹೇಳಿದರು.

ಬೀದಿ ಬದಿ ವ್ಯಾಪಾರಸ್ಥರು ಪಟ್ಟಣದ ಹಳೆ ಬಸ್‌ ನಿಲ್ದಾಣದ ಬಳಿ ಪುರಸಭೆ ವತಿಯಿಂದ ನಿರ್ಮಿಸಿರುವ ಮಾರುಕಟ್ಟೆಯಲ್ಲಿ ಹಣ್ಣು, ಹೂ, ತರಕಾರಿ ಮತ್ತಿತರ ಪದಾರ್ಥಗಳನ್ನು ಮಾರಾಟ ಮಾಡಬೇಕು. ಇದಕ್ಕೆಂದೇ ಎಲ್ಲಾ ವ್ಯವಸ್ಥೆ ಕಲ್ಪಿಸಲಾಗಿದೆ. ಮಾರುಕಟ್ಟೆ ಬಿಟ್ಟು ರಸ್ತೆಗಳಲ್ಲಿ ಮಾರಾಟಕ್ಕೆ ಕುಳಿತರೆ ಕೂಡಲೇ ಕಾನೂನಾತ್ಮಕ ಕ್ರಮ ವಹಿಸುವ ಎಚ್ಚರಿಕೆ ನೀಡಿದರು.

ಮುಂದಿನ ಎರಡು ದಿನದೊಳಗೆ ಬೀದಿ ಬದಿ ಅಂಗಡಿಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ, ಪುರಸಭೆ ಸಿಬ್ಬಂದಿ ಪೊಲೀಸರ ನೆರವಿನೊಂದಿಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಕ್ರಮ ವಹಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next