Advertisement

ಉಡುಪಿ: 10 ದಿನಗಳ ಒಳಗೆ ಹೆದ್ದಾರಿ ಸಮಸ್ಯೆ ಬಗೆ ಹರಿಸಲು ಡಿಸಿ ತಾಕೀತು

03:31 PM Jul 08, 2022 | Team Udayavani |

ಉಡುಪಿ : ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169 ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಎಲ್ಲಾ ಸಮಸ್ಯೆಗಳನ್ನು 10 ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು , ಜಿಲ್ಲಾಡಳಿತ ಸೂಚಿಸುವ ಸಭೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರ ಸಭೆಗಳಿಗೂ ಸಹ ಗೈರು ಹಾಜರಾಗುತ್ತಿರುವ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿರಾಷ್ಟ್ರೀಯ ಹೆದ್ದಾರಿಯಲ್ಲಿ ಸುಗಮವಾಗಿ ಟೋಲ್ ಸಂಗ್ರಹ ಮಾಡಲು ಮತ್ತು ಇತರೆ ಕಾರ್ಯಗಳನ್ನು ಮಾಡಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ , ಜಿಲ್ಲಾಡಳಿತ ನೀಡುವ ಎಲ್ಲಾ ಆದೇಶಗಳನ್ನು ಪಾಲಿಸಬೇಕು ಮತ್ತು ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳ ಕುರಿತು ನೀಡಿರುವ ಎಲ್ಲಾ ಸಮಸ್ಯೆಗಳನ್ನು 10 ದಿನದ ಒಳಗೆ ಸಂಪೂರ್ಣವಾಗಿ ಬಗೆ ಹರಿಸಿ, ಸಮಸ್ಯೆಗಳನ್ನು ಸರಿಪಡಿಸಿದ ದಿನಾಂಕ ಮತ್ತು ಸಮಯವನ್ನು ಒಳಗೊಂಡ ಕುರಿತು ಛಾಯಾಚಿತ್ರಗಳು ಹಾಗೂ ವರದಿಯನ್ನು ಸಲ್ಲಿಸಿ, ಮುಂದಿನ ಸಭೆಗೆ ಹಾಗೂ ಜಿಲ್ಲಾಡಳಿತ ಸೂಚಿಸುವ ಎಲ್ಲಾ ಸಭೆಗಳಿಗೆ ಕಡ್ಡಾಯವಾಗಿ ಹಾಜರಿರುವಂತೆ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ತೊಂದರೆ ಇರುವ ಅಡೆತಡೆಗಳನ್ನು ತಕ್ಷಣವೇ ಸರಿಪಡಿಸಬೇಕು, ತುರ್ತು ಅಗತ್ಯವಿರುವಡೆಗಳಲ್ಲಿ ತಕ್ಷಣವೇ ಬೀದಿದೀಪಗಳನ್ನು ಅಳವಡಿಸಬೇಕು, ಹೆದ್ದಾರಿ ಪಕ್ಕದಲ್ಲಿ ನೀರು ಹರಿಸಲು ಮತ್ತು ಸಂಚಾರಕ್ಕೆ ತಡೆ ಉಂಟು ಮಾಡು ಗಿಡಗಳನ್ನು ಕೂಡಲೇ ತೆರವುಗೊಳಿಸಬೇಕು, ಫ್ಲೈ ಓವರ್ ಗಳ ಮೇಲೆ ನೀರು ನಿಲ್ಲದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯ ಕಾರಣ ಅಪಘಾತಗಳು ಸಂಭವಿಸಿ,ಸಾವು ಸಂಭವಿಸಿದ್ದಲ್ಲಿ ಸಂಬAದಪಟ್ಟ ಹೆದ್ದಾರಿಯ ಅಧಿಕಾರಿಗಳ ಮೇಲೆ ಕೇಸು ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತ ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ದಾಖಲಿಸಿ ಅವುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಬೇಕು, ಇದಕ್ಕಾಗಿ ದೂರು ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡು , ಅದರಲ್ಲಿ ದೂರುಗಲಿಗೆ ಸಂಬಂಧಪಟ್ಟ ಎಲ್ಲಾ ವಿವರಗಳನ್ನು ದಾಖಲಿಸಬೇಕು, ನಿಗಧಿತ ಅವಧಿಯೊಳಗೆ ಸಮಸ್ಯೆಗಳನ್ನು ಬಗೆಹರಿಸಿದ ಸಿಬ್ಬಂದಿಗಳ ವೇತನ ಮತ್ತು ಭತ್ಯೆಗಳನ್ನು ತಡೆ ಹಿಡಿಯುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

Advertisement

ಹೆದ್ದಾರಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಜಿಲ್ಲಾಡಳಿತ ಸೂಚಿಸುವ ಕಾಲಮಿತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು, ಕುಂದಾಪುರದ ಸಂಗಂ ಜಂಕ್ಷನ್ ನಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ನೀರು ಹರಿದುಹೋಗಲು ವ್ಯವಸ್ಥೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಬೀದಿದೀಪದ ವ್ಯವಸ್ಥೆ ಮಾಡಬೇಕು, ಸಾಲಿಗ್ರಾಮ ಬಳಿಯ ಸರ್ವಿಸ್ ರಸ್ತೆ ಕಾಮಗಾರಿ ಸೇರಿದಂತೆ ಬಾಕಿ ಇರುವ ಎಲ್ಲಾ ಅಪೂರ್ಣ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು. ಮಳೆ ನಿಂತ ಕೂಡಲೇ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಎಲ್ಲಾ ರಸ್ತೆಗಳ ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಎಎಸ್ಪಿ ಸಿದ್ದಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರು ನರ್ಮ್ ಯೋಜನಾ ನಿರ್ದೇಶಕ ಲಿಂಗೇಗೌಡ , ನವಯುಗ ಮತ್ತು ಐಆರ್‌ಬಿ ಯ ಇಂಜನಿಯರ್ ಗಳು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next