Advertisement

ಕೈದಿಗಳ ಅಸ್ವಾಭಾವಿಕ ಸಾವು ಪ್ರಕರಣ: ಪರಿಹಾರ ನೀಡಿದ ವರದಿ ಸಲ್ಲಿಸಿ: ಹೈಕೋರ್ಟ್‌

11:24 PM Jan 19, 2022 | Team Udayavani |

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಅಸ್ವಾಭಾವಿಕವಾಗಿ ಸಾವನ್ನಪ್ಪಿದ ವಿಚಾರಣಾಧೀನ ಕೈದಿಗಳ ಅವಲಂಬಿತರಿಗೆ ಪರಿಹಾರ ನೀಡಿರುವ ಕುರಿತು ಸಮಗ್ರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ವಿಚಾರಣಾಧೀನ ಕೈದಿಗಳ ಅಸ್ವಾಭಾವಿಕ ಸಾವುಗಳ ಪ್ರಕರಣಗಳಲ್ಲಿ ಅವರ ಅವಲಂಬಿತರಿಗೆ ಪರಿಹಾರ ನೀಡುವ ಸಂಬಂಧ ಸುಪ್ರೀಂಕೋರ್ಟ್‌ ನಿರ್ದೇಶನದ ಮೇರೆಗೆ 2017ರಲ್ಲಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾ. ಸೂರಜ್‌ ಗೋವಿಂದರಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರಿ ವಕೀಲರು, ವಿಚಾರಣಾಧೀನ ಕೈದಿಗಳು ಅಸ್ವಾಭಾವಿಕ ಸಾವನ್ನಪ್ಪಿದ್ದಲ್ಲಿ ಅವರ ಅವಲಂಬಿತರಿಗೆ ಪರಿಹಾರ ನೀಡಲಾಗುತ್ತಿದೆ. 2020ರ ನಂತರದ ಪ್ರಕರಣಗಳಲ್ಲಿ ಯಾರಿಗೆ ಎಷ್ಟು ಪರಿಹಾರ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಿ ನ್ಯಾಯಾಲಯಕ್ಕೆ ಸಲ್ಲಿಸಲು ಎರಡು ವಾರ ಕಾಲಾವಕಾಶ ಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಸಮಗ್ರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಫೆ.8ಕ್ಕೆ ಮುಂದೂಡಿತು.

ಇದನ್ನೂ ಓದಿ:ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

60 ಪ್ರಕರಣಗಳಲ್ಲಿ ಪರಿಹಾರ:
ವಿಚಾರಣಾಧೀನ ಕೈದಿಗಳ ಅಸ್ವಾಭಾವಿಕ ಸಾವು ಪ್ರಕರಣಗಳಲ್ಲಿ ಅವರ ಅವಲಂಬಿತರಿಗೆ ಪರಿಹಾರ ನೀಡುವ ಸಂಬಂಧ ಜಿಲ್ಲಾಧಿಕಾರಿಗಳನ್ನು ಸಕ್ಷಮ ಪ್ರಾಧಿಕಾರವನ್ನಾಗಿ ನೇಮಿಸುವಂತೆ 2020ರ ಜ.27ರಂದು ಹೈಕೋರ್ಟ್‌ ಆದೇಶ ನೀಡಿತ್ತು. ಅದರಂತೆ, ಜಿಲ್ಲಾಧಿಕಾರಿಗಳನ್ನು ಸಕ್ಷಮ ಪ್ರಾಧಿಕಾರವನ್ನಾಗಿ ನೇಮಕ ಮಾಡಲಾಯಿತು. ಆಯಾ ಜಿಲ್ಲೆಗಳ ಕಾರಾಗೃಹಗಳಲ್ಲಿ ಸಂಭವಿಸಿದ ವಿಚಾರಣಾಧೀನ ಕೈದಿಗಳ ಅಸ್ವಾಭಾವಿಕ ಸಾವು ಪ್ರಕರಣಗಳಲ್ಲಿ ಪರಿಶೀಲಿಸಿ ರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿ 2012ರ ಜ.1ರಿಂದ 2019ರ ಮೇ 31ರವರೆಗೆ 60 ಅಸ್ವಾಭಾವಿಕ ಸಾವು ಪ್ರಕರಣಗಳಲ್ಲಿ ತಂದೆ-ತಾಯಿ, ಹೆಂಡತಿ, ಮಕ್ಕಳು, ಸಹೋದರರು ಈ ರೀತಿ ಮೃತರ ಮೊದಲ ಅವಲಂಬಿತರಿಗೆ 1.61 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು 2020ರ ಮಾ.13ರಂದು ಹೈಕೋರ್ಟ್‌ಗೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಸರ್ಕಾರ ಮಾಹಿತಿ ನೀಡಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next