Advertisement

ಆಕ್ಸಿಜನ್‌-ರೆಮ್‌ಡಿಸಿವರ್‌ ಮಿತವಾಗಿ ಬಳಸಿ  : ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು

06:06 PM May 08, 2021 | Team Udayavani |

ಗದಗ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿಗಳ ಪಾಲನೆ ಕಡ್ಡಾಯ. ಸೋಂಕಿತರಿಗೆ ಅಗತ್ಯವಿದ್ದಲ್ಲಿ ಆಕ್ಸಿಜನ್‌ ಹಾಗೂ ರೆಮ್‌ಡಿಸಿವರ್‌ ಚುಚ್ಚುಮದ್ದನ್ನು ಮಿತವಾಗಿ ಬಳಕೆ ಮಾಡುವಂತೆ ಸಂಬಂಧಿ ಸಿದ ಅ ಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಸೂಚಿಸಿದರು.

Advertisement

ಜಿಲ್ಲಾಡಳಿತ ಭವನದ ಜಿಪಂ ವಿಡಿಯೋ ಸಭಾಂಗಣದಲ್ಲಿ ನಡೆದ ಕೋವಿಡ್‌ ನಿಯಂತ್ರಣ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿ ಸೇರಿದಂತೆ ಪೌರ ಕಾರ್ಮಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಇಲಾಖೆಯಿಂದ ಆರೋಗ್ಯ ಇಲಾಖೆ ಸಿಬ್ಬಂದಿಗೆ ನಿಯಮಿತವಾಗಿ ಸುರಕ್ಷತಾ ಸಾಮಗ್ರಿಗಳನ್ನು ಸರಬರಾಜು ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ದೃಢಪಟ್ಟ ಪ್ರಕರಣಗಳಲ್ಲಿ ಯಾವುದೇ ರೀತಿಯ ಸೋಂಕು ಲಕ್ಷಣಗಳಿರದಿದ್ದಲ್ಲಿ ಅವರನ್ನು ಮನೆಯಲ್ಲಿಯೇ ಗೃಹ ದಿಗ್ಬಂಧನದಲ್ಲಿಟ್ಟು, ಚಿಕಿತ್ಸೆಗೆ ಅಗತ್ಯ ಔಷಧ,  ಮಾತ್ರೆಗಳನ್ನು ನೀಡಿ ನಿಯಮಿತವಾಗಿ ನಿಗಾ ವಹಿಸಬೇಕು. ಗೃಹ ದಿಗ್ಬಂಧನದಲ್ಲಿ ಚಿಕಿತ್ಸೆ ಪಡೆಯಲು ಸ್ಥಳಾವಕಾಶದ ಕೊರತೆಯಿದ್ದಲ್ಲಿ ತಾಲೂಕಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಿ ಚಿಕಿತ್ಸೆ ಒದಗಿಸಬೇಕು. ಆಕ್ಸಿಜನ್‌ ಅಗತ್ಯವಿದ್ದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕು. ಒಂದು ವೇಳೆ ಸೋಂಕಿತರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಮಾತ್ರ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಬೇಕು ಎಂದರು.

ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ನಿಗಾ ವಹಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಸೋಂಕಿತರಿಗೆ ಚಿಕಿತ್ಸೆಯಲ್ಲಿ ವೈದ್ಯಾಧಿ ಕಾರಿಗಳ ಹಾಗೂ ಸಿಬ್ಬಂದಿ ನಿಷ್ಕಾಳಜಿ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಲ್ಲಿ ವರದಿ ನೀಡಲು ನೇಮಿಸಲಾದ ಸಮಿತಿ ತಕ್ಷಣ ಪರಿಶೀಲಿಸಿ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು. ಮೃತರ ಅಂತ್ಯಕ್ರಿಯೆಯನ್ನು ಕೋವಿಡ್‌ ಮಾರ್ಗಸೂಚಿಗಳನ್ವಯ ನೆರವೇರಿಸಬೇಕು. ಸೋಂಕಿತರಿಗೆ ಎಲ್ಲ ಸರ್ಕಾರಿ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಮತ್ತು ಗೃಹ ದಿಗ್ಬಂಧನದಲ್ಲಿರುವವರಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಮರ್ಪಕ ವಾಗಿ ಸೇವೆ ಒದಗಿಸಬೇಕೆಂದು ತಿಳಿಸಿದರು.

ಕೋವಿಡ್‌ ಲಸಿಕೆ ಪಡೆಯಲು ಆಗಮಿಸುವ ಸಾರ್ವಜನಿಕರಿಗೆ ಆಸ್ಪತ್ರೆಯಲ್ಲಿ ಸೂಕ್ತ ಆಸನದ ವ್ಯವಸ್ಥೆ, ನೆರಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಹೋಂ ಗಾರ್ಡ್‌ಗಳನ್ನು ಒದಗಿಸಲಾಗಿದ್ದು, ಜನಸಂದಣಿ ನಿಯಂತ್ರಣಕ್ಕೆ ಅವರನ್ನು ಬಳಸಿಕೊಳ್ಳುವಂತೆ ಸೂಚಿಸಿದರು.

Advertisement

ಜಿಪಂ ಸಿಇಒ ಭರತ್‌ ಎಸ್‌. ಮಾತನಾಡಿ, ಹೊರ ಜಿಲ್ಲೆ, ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರ ಮಾಹಿತಿ ಕಲೆ ಹಾಕಿ ಅವರನ್ನು ತಪಾಸಣೆಗೆ ಒಳಪಡಿಸಬೇಕು. ಸೋಂಕಿತರ ಚಿಕಿತ್ಸೆಗಾಗಿ ನೀಡಲಾಗುವ ಔಷ ಧಗಳ ಕಿಟ್‌ ಸರಬರಾಜು ಸಂಗ್ರಹ ಸರಿಯಾಗಿ ನಿರ್ವಹಿಸಬೇಕು. ಗ್ರಾಮೀಣ ಭಾಗಕ್ಕೆ ಬೇರೆಡೆಯಿಂದ ಆಗಮಿಸುವವರ ಮಾಹಿತಿ ಸ್ಥಳೀಯ ಅಧಿ ಕಾರಿಗಳಲ್ಲಿ ಇರಬೇಕು ಎಂದರು. ಗ್ರಾಮೀಣ ಹಾಗೂ ಸ್ಥಳೀಯ ಸಂಸ್ಥೆಗಳ ಕೇಂದ್ರಗಳಲ್ಲಿ ಕೋವಿಡ್‌ ನಿಯಂತ್ರಣ ಕುರಿತು ಹೇರಲಾದ ಮಾರ್ಗಸೂಚಿಗಳ ಕಡ್ಡಾಯ ಪಾಲನೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಅಧಿಕಾರಿಗಳು ಸರಿಯಾಗಿ ಕ್ರಮ ವಹಿಸಬೇಕೆಂದು ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾ ಧಿಕಾರಿ ಸತೀಶಕುಮಾರ್‌ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಡಿಎಚ್‌ಒ ಡಾ|ಸತೀಶ ಬಸರಿಗಿಡದ, ಆರ್‌ಸಿಎಚ್‌ ಅಧಿ ಕಾರಿ ಡಾ|ಬಿ.ಎಂ.ಗೊಜನೂರ ಸೇರಿದಂತೆ ಆಯಾ ತಾಲೂಕಿನ ತಹಶೀಲ್ದಾರ್‌ರು, ತಾಪಂ ಇಒ, ತಾಲೂಕು ವೈದ್ಯಾಧಿ ಕಾರಿಗಳು, ಎಎಂಒ ಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next