ಚಿತ್ತಾಪುರ: ರಾಜ್ಯ ಸರ್ಕಾರ ಕೃಷಿಕರಿಗಾಗಿ ಅನೇಕ ಯೋಜನೆ ರೂಪಿಸಿ ಅನುಕೂಲ ಮಾಡಿಕೊಡುತ್ತಿದೆ. ಆದ್ದರಿಂದ ರೈತರು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಲ ಜಾಗೃತಿ ವರ್ಷ ಹಾಗೂ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರೈತರು ಆರ್ಥಿಕವಾಗಿ ಸಬಲರಾಗುವ ಉದ್ದೇಶದಿಂದ ಸರ್ಕಾರ ಅನೇಕ ರೀತಿಯ ಸೌಲಭ್ಯ ಜಾರಿಗೆ ತಂದಿದೆ ಎಂದು ಹೇಳಿದರು.
ಸಹಾಯಕ ಕೃಷಿ ನಿರ್ದೇಶಕ ಜಾಲೇಂದ್ರ ಗುಂಡಪ್ಪ ಮಾತನಾಡಿ, ಚಿತ್ತಾಪುರ ಸೇರಿದಂತೆ ತಾಲೂಕಿನ ನಾಲವಾರ, ಶಹಾಬಾದ, ಮಾಡಬೂಳ, ಕಾಳಗಿ ಹೋಬಳಿಗಳಲ್ಲಿ ರೈತರಿಗೆ ಕೃಷಿ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸಲು ಕೃಷಿ ಅಭಿಯಾನ ಕಾರ್ಯಕ್ರಮ ಮೇ 29ರಿಂದ ಜೂ. 3ರವರೆಗೆ ನಡೆಯಲಿದೆ.
ಕೃಷಿ ಚಟುವಟಿಕೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಾಗವುದು. ಜತೆಗೆ ರೈತರ ಹಾಗೂ ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬಿತ್ತನೆ ಬೀಜ, ಗೊಬ್ಬರ, ಕೀಟ ನಾಶಕ ಔಷಧ, ಸಸ್ಯ ಪೋಷಕಗಳ ಲಕ್ಷಣ ಹಾಗೂ ನೀರಾವರಿ ಕುರಿತು ರೈತರಿಗೆ ಸಮಗ್ರ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪೊಲೀಸ್ಪಾಟೀಲ, ಉಪಾಧ್ಯಕ್ಷ ಹರಿನಾಥ ಚವ್ಹಾಣ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಾಜಿ ಅಧ್ಯಕ್ಷ ಭೀಮಣ್ಣ ಸಾಲಿ, ಕೃಷಿ ಸಮಾಜದ ತಾಲೂಕು ಅಧ್ಯಕ್ಷ ಚಂದ್ರಶೇಖರರೆಡ್ಡಿ ಪರಸರೆಡ್ಡಿ, ಜಿಪಂ ಸದಸ್ಯ ಶಿವರುದ್ರ ಭೀಣಿ,
-ಮಾಜಿ ಅಧ್ಯಕ್ಷ ರಮೇಶ ಮರಗೋಳ, ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಮೂದ ಸಾಹೇಬ್ ಮುಖಂಡರಾದ ವೀರಣ್ಣಗೌಡ ಪರಸರೆಡ್ಡಿ, ಸೂರ್ಯಕಾಂತ ಪೂಜಾರಿ, ಮಲ್ಲಣ್ಣ ಸಣಮೋ, ಭಾಗಪ್ಪ ಕೊಲೂÛರು, ನಾಮದೇವ ರಾಠೊಡ, ವಿಜಯಕುಮಾರ ನಿಂಗದೆ ಇದ್ದರು.