Advertisement

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

12:51 PM May 04, 2024 | Nagendra Trasi |

ಲೆಸ್ಟ್‌ರ್‌:ಬೇವಿನಕಹಿ ಬಾಳಿನಲಿ, ಹೂವಿನ ನಸುಗಂಪ ಸೂಸಿ ಜೀವಕಳೆಯ ತರುತಿದೆ. ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ. ನಮ್ಮೆಲ್ಲರ ಜೀವನ ಜಂಜಾಟಗಳ ನಡುವೆ ಸಂಭ್ರಮದ ಕಳೆ ತರಲು, ಯುಗಾದಿ ಸಂಭ್ರಮ ಮತ್ತೆ ಬಂದಿತ್ತು. ಎ.13ರಂದು ಲೆಸ್ಟರ್‌ನಲ್ಲಿ ಲೆಸ್ಟರ್‌ ಕನ್ನಡಿಗರು 2016ನಿಂದ ಸಾಂಪ್ರದಾಯಿಕವಾಗಿ ಯುಗಾದಿಯನ್ನು ಸಂಭ್ರಮದಿಂದ ಆಚರಿಸುತ್ತ ಬಂದಿದ್ದಾ ರೆ. ಆದರೆ ಈ ಬಾರಿ ಕನ್ನಡ ಬಳಗದ ಸಹಯೋಗ ಅದರ ಮೆರಗನ್ನ ಇನ್ನೂ ಹೆಚ್ಚಿಸಿತ್ತು.ದೇಶದ ಹಲವಾರು ಮೂಲೆಗಳಿಂದ 600ಕ್ಕೂ ಹೆಚ್ಚು ಜನರು ಯುಗಾದಿ ಸಂಭ್ರಮವನ್ನು ಆಚರಿಸಲು ನೆರೆದಿದ್ದರು.

Advertisement

ಕಾರ್ಯಕ್ರಮಕ್ಕೆ ವಿಧಿವತ್ತಾಗಿ ವಿಘ್ನ ನಿವಾರಕ ವಿಘ್ನೇಶ್ವರನ ಪೂಜೆಯೊಂದಿಗೆ ಮತ್ತು ಸ್ತುತಿಹಾಡಿನೊಂದಿಗೆ ಓಂಕಾರ ದೊರಕಿತು. ಕಾರ್ಯಕ್ರಮದ ಆಯೋಜಕರು ಭಾರತದಿಂದ ಆಗಮಿಸಿದ ಜನಪ್ರಿಯ ಗಣ್ಯ ಅತಿಥಿಗಳಾದ ಸಿಹಿ ಕಹಿ ಚಂದ್ರು, ಶ್ರೀನಿವಾಸ ಪ್ರಭು ಮತ್ತು¤ ವಿಶ್ವೇಶ್‌ ಭಟ್‌ ಅವರನ್ನು ಮತ್ತೂ ದೇಶದ ಮೂಲೆ ಮೂಲೆಯಿಂದ ಬಂದ ಕನ್ನಡಿಗರನ್ನ ಹೃದಯಪೂರ್ವಕವಾಗಿ ಬೇವು ಬೆಲ್ಲವನ್ನು ಹಂಚುವುದರೊಂದಿಗೆ ಸ್ವಾಗತಿಸಲಾಯಿತು. ಗಣ್ಯರು ದೀಪ ಬೆಳಗಿಸುವುದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶುಭಕೋರಿದರು.

ಸಾಂಪ್ರದಾಯಿಕ ಭರತನಾಟ್ಯ ನೃತ್ಯಗಳಿಂದ ಕಲಾಪ್ರದರ್ಶನ ಪ್ರಾರಂಭವಾಯಿತು. ಬಿಡುವಿಲ್ಲದೆ ಸತತ 5 ಘಂಟೆಗಳ ಕಾಲ ಕಲಾಪ್ರದರ್ಶನ ಯುಕೆಯ ವಿವಿಧ ಪ್ರದೇಶಗಳಿಂದ ಬಂದ ಕಲಾವಿದರಿಂದ ನಡೆಯಿತು. ಚಿಕ್ಕ ಪುಟಾಣಿಗಳು ಸಿಂಡ್ರೆಲ್ಲ ನೃತ್ಯರೂಪಕ, ಧಾರ್ಮಿಕ ಭಾವನೆಯನ್ನು ಪುಟಿಸಿದ, ನಾಟಕೀಯ ಕನ್ನಡ ಭಾಷೆಯಲ್ಲಿ ಮೂಡಿ ಬಂದ “ಸೀತಾ ಅಗ್ನಿಪ್ರವೇಶ’ ದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಕರ್ನಾಟಕದ ಶ್ರೀಮಂತ ನೃತ್ಯ ವೈವಿಧ್ಯತೆಯನ್ನು ಪ್ರದರ್ಶಿಸುವ ಕೋಲಾಟ, ಕಂಸಾಳೆ, ಡೊಳ್ಳು ಕುಣಿತ, ಕೊಡವ ನೃತ್ಯ ಮತ್ತು ಹುಲಿಕುಣಿತವನ್ನೊಳಗೊಂಡ ಕರ್ನಾಟಕ ನೃತ್ಯದರ್ಶನ, ಭಾರತದ ವಿವಿಧ ರಾಜ್ಯಗಳ ಮದುವೆ ಶೃಂಗಾರವನ್ನ ಬಿಂಬಿಸುವ “ಲಗ್ನ ಶೃಂಗಾರ’, “ಹಚ್ಚೇವು ಕನ್ನಡದ ದೀಪ’ ನೃತ್ಯ ರೂಪಕ, ಜನಪ್ರಿಯ ಗೀತೆಗಳನ್ನಾಧರಿಸಿದ ನೃತ್ಯಗಳು, ಹಾಡು, ವೀಣೆ ಹಾಗೂ ಗಿಟಾರ್‌ ವಾದನ ಕಾರ್ಯಕ್ರಮಗಳು ನೆರೆದವರ ಮನಸೆಳೆದವು.

Advertisement

ಈ ಎಲ್ಲ ಕಾರ್ಯಕ್ರಗಳು ಒಂದು ಕಡೆಯಾದರೆ, ಇನ್ನೊಂದೆಡೆ ಬಹು ಪ್ರಸಿದ್ಧಿ ಪಡೆದಿರುವ ಲೆಸ್ಟರ್‌ ಬಾಳೆ ಎಲೆ ಭೋಜನ ಯುಗಾದಿ ಸಂಭ್ರಮಕ್ಕೆ ಸಾಂಪ್ರದಾಯಿಕ ಹೊಳಪನ್ನು ಕೊಟ್ಟಿತು. ವಿವಿಧ ಭಕ್ಷ್ಯಗಳ ಪಟ್ಟಿ ಎಷ್ಟು ದೊಡ್ಡದಿತ್ತೋ, ಊಟ ಮಾಡಿದವರಿಂದ ಊಟದ ಬಗೆಗಿನ ಹೊಗಳಿಕೆ ಪಟ್ಟಿನೂ ಅಷ್ಟೇ ದೊಡ್ಡದಾಗಿತ್ತು! ಲೆಸ್ಟರ್‌ ಆಯೋಜಕರೇ ಟೊಂಕಕಟ್ಟಿ ಈ ಭೂರಿ ಭೋಜನದ ಅಡುಗೆಯನ್ನು ಮಾಡಿ, ಬಡಿಸಿದ್ದು ಇನ್ನೂ ವಿಶೇಷವಾಗಿತ್ತು! ಊಟದ ವ್ಯವಸ್ಥೆ ಯಶಸ್ವಿಯಾಗಲು ಲೆಸ್ಟರ್‌ ಕನ್ನಡ ಕುಟುಂಬದೊಟ್ಟಿಗೆ ಹಲವಾರು ಸ್ವಯಂಸೇವಕರು ಕೆಲಸ ಮಾಡಿದ್ದರು.

ಸಭಾಂಗಣದ ಪಕ್ಕದಲ್ಲಿ ಆಯೋಜಿಸಿದ ಕೆಲವು ಜಾಹೀರಾತುದಾರರ ಅಂಗಡಿಗಗಳು ಜನರ ಆಕರ್ಷಣೆಗೆ ಒಳಗಾದವು . ಇವುಗಳ ಜತೆ ಮ್ಯಾಕ್‌ ಮಿಲನ್‌ ಚಾರಿಟಿಗೋಸ್ಕರ 13 ವರ್ಷದ ಹುಡುಗಿ ಬೇಕ್‌ ಮಾಡಿದ ವಿವಿಧ ರೀತಿಯ ಕೇಕ್‌ಗಳು ಮತ್ತು ಬಿಸ್ಕತYಳನ್ನೊಳಗೊಂಡ ಅಂಗಡಿ ಚಿಕ್ಕ ಮಕ್ಕಳು ತಮ್ಮ ತಂದೆ-ತಾಯಂದಿರನ್ನ ಅಲ್ಲಿಗೆ ಕರೆದೊಯ್ಯುವಂತೆ ಮಾಡಿತ್ತು. ಜತೆಗೆ ಅನನ್ಯ ಪ್ರಸಾದ್‌ ಈ ವರ್ಷಾಂತ್ಯದಲ್ಲಿ ತಾವು ಒಂಟಿಯಾಗಿ ದತ್ತಿ ಕಾರ್ಯಕ್ಕಾಗಿ ಅಟ್ಲಾಂಟಿಕ್‌ ಸಾಗರವನ್ನು ಹುಟ್ಟು ದೋಣಿಯಲ್ಲಿ ದಾಟುವ ಸಾಹಸದ ಮಾಹಿತಿಯನ್ನು ಹಂಚಿಕೊಂಡರು.

ಇದರೊಟ್ಟಿಗೆ ಕನ್ನಡ ಬಳಗ ಯುಕೆ ತಂಡದ ವಾರ್ಷಿಕ ಕೂಟ (AGM) ಮತ್ತು ಅನಿವಾಸಿ ಬಳಗದ ಕಾರ್ಯಕ್ರಮಗಳು ಸರಾಗವಾಗಿ ನಡೆದು ಬಂದವು. ಪ್ರತೀ ಕನ್ನಡ ಬಳಗದ ದೀಪಾವಳಿ-ಯುಗಾದಿ ಕಾರ್ಯಕ್ರಮದಲ್ಲಿ ನಮ್ಮ ಅನಿವಾಸಿ ಬಳಗ ಸಮಾನಾಂತರವಾಗಿ ಸಾಹಿತ್ಯಿಕ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ಕನ್ನಡ ಬಳಗದ ಸಾಹಿತಿಕ ಅಂಗ “ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವಿಚಾರ ವೇದಿಕೆ (ಅನಿವಾಸಿ, KSSV) ಅದೇ ದಿನ ಮಧ್ಯಾಹ್ನ ಒಂದು ಚರ್ಚೆ ಸಂವಾದವನ್ನು ಹಮ್ಮಿಕೊಂಡಿತ್ತು. ಪ್ರಸಿದ್ಧ ರಂಗಭೂಮಿಯ ನಟ, ನಿರ್ದೇಶಕ, ಬರಹಗಾರ ಮತ್ತು ಕಿರುತೆರೆಯ ಪಾತ್ರಗಳಿಗೆ ಹೆಸರು ಮಾಡಿರುವ ಶ್ರೀನಿವಾಸ ಪ್ರಭು ಅವರು ಒಂದೂವರೆ ಘಂಟೆಯ ಕಾಲದವರೆಗೂ ಪರ್ಯಾಯ ಸಭೆಯಲ್ಲಿ ಭಾಗವಹಿಸಿ ತಮ್ಮ ಸಾಹಿತ್ಯದಿಂದ ಎಲ್ಲರನ್ನೂ ಮಂತ್ರಮುಗ್ಧರನ್ನಾಗಿಸಿದರು.

ಮತ್ತೆ ಸಾಯಂಕಾಲ ಸಭಿಕರೆಲ್ಲ ಕಾತುರದಿಂದ ಕಾಯುತ್ತಿದ್ದ ಗಣ್ಯರ ಕಾರ್ಯಕ್ರಮಗಳು ಆರಂಭವಾದವು. ಶ್ರೀನಿವಾಸ ಪ್ರಭು ತಮ್ಮ ವೃತ್ತಿ ಬದುಕಿನ ಅನುಭವಗಳನ್ನ ಹಂಚಿಕೊಂಡು ಜನರನ್ನ ರಂಜಿಸಿದರು. ಸಭಿಕರ ಕೋರಿಕೆಗೆ ಮಣಿದು, ರಣಧೀರ ಚಿತ್ರದಲ್ಲಿ ಅವರು ನಟ ರವಿಚಂದ್ರನ್‌ ಅವರಿಗೆ ಧ್ವನಿ ದಾನ ಮಾಡಿದ ಸಂಭಾಷಣೆಗಳನ್ನು ಸಾದರ ಪಡಿಸಿದರು.

ಸಿಹಿಕಹಿ ಚಂದ್ರು ಅವರಂತೂ ತಮ್ಮ ಮಾತಿನ ಚಾಕಚಕ್ಯತೆಯಿಂದ ಸಭಿಕರನ್ನ ನಗೆಗಡಲಲ್ಲಿ ಮುಳುಗಿಸಿದರು. ಅವರು ಕಲಾಸಾಮ್ರಾಟ್‌ ರಾಜಕುಮಾರ ಅವರೊಂದಿಗೆ ಕಳೆದ ಕ್ಷಣಗಳು ಎಲ್ಲರ ಮನದಲ್ಲಿ ಮರೆಯದೆ ಉಳಿಯುವಂತವು. ಅವರು ನಡೆಸಿ ಕೊಡುವ ಅಡುಗೆ ಕಾರ್ಯಕ್ರಮಗಳು ಕರ್ನಾಟಕದ ಮನೆಮನೆಗಳಲ್ಲಿ ಮಾತಾಗಿವೆ. ಅವರ ಸಲಹೆಯಂತೆ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧಿಗಳು ಮನೆಯಲ್ಲಿ ಮಾಡಿದ ಅಡುಗೆಗಳ ರುಚಿ ನೋಡಿ ಚಂದ್ರು ಅವರು ವಿಜೇತರನ್ನ ಆಯ್ಕೆ ಮಾಡಿದರು ಮತ್ತು ಅವರ ಹೆಸರಾಂತ ಜನುಮದ ಜೋಡಿ ಸ್ಪರ್ಧೆಯನ್ನೂ ನಡೆಸಿಕೊಟ್ಟರು.

ಸಾಯಂಕಾಲದ ಲಘು ಉಪಾಹಾರ ಮತ್ತು ಚಹಾ ಜನರನ್ನ ಕೊನೆಯ ಕಾರ್ಯಕ್ರಮಕ್ಕೆ ಸಜ್ಜುಗೊಳಿಸಿತು. ವಿಶ್ವೇಶ್‌ ಭಟ್‌ ರವರು ಬಹುಮುಖ ಪ್ರತಿಭೆಯ ಅಭಿಯಂತರು. ಇವರು ವ್ಯಂಗಚಿತ್ರ ಮತ್ತು ಸಂಗೀತ ಲೋಕಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಇವರ ತಮ್ಮ ವಿಭಿನ್ನ ರೀತಿಯ ಹಲವಾರು ಸಂಗೀತ ಪ್ರಕಾರಗಳನ್ನೊಳಗೊಂಡ ಪ್ರದರ್ಶನದಿಂದ ಜನರನ್ನ ಮಂತ್ರ ಮುಗ್ಧರನ್ನಾಗಿಸಿದರು. ಇವರ ಹಾಡಿಗೆ ಜನ ಹೆಜ್ಜೆ ಹಾಕಿ ಸಂತೋಷ ವ್ಯಕ್ತ ಪಡಿಸಿದರು.

ಒಟ್ಟಾರೆ ಇದು ಒಂದು ಪರಿಪೂರ್ಣವಾದ , ಪಕ್ವವಾದ, ಯುಗಾದಿ ಹಬ್ಬದ ಸಂಭ್ರಮವನ್ನೊಳಗೊಂಡ ಮತ್ತು ಕರ್ನಾಟಕದ ಸಂಸ್ಕೃತಿಯ ವೈವಿಧ್ಯತೆಯನ್ನು ಎತ್ತಿಹಿಡಿಯುವ ಆಚರಣೆಯಾಗಿತ್ತು. ಹೀಗೆ ಹಲವಾರು ಕಾರ್ಯಕ್ರಮಗಳು ಮುಂಬರುವ ದಿನಗಳಲ್ಲಿ ನಡೆದು ಅನಿವಾಸಿ ಕನ್ನಡಿಗರ ಮನದಲ್ಲಿ ಸದಾ ತಾಯ್ನುಡಿ ಮತ್ತು ತಾಯ್ನೆಲದ ವಾಸನೆಯನ್ನು ತುಡಿಯುತ್ತಿರಲಿ ಎಂದು ಹಾರೈಸೋಣ.

ವರದಿ: ರಾಜಶ್ರೀ, ಇಂಗ್ಲೆಂಡ್‌

Advertisement

Udayavani is now on Telegram. Click here to join our channel and stay updated with the latest news.

Next