Advertisement

ಮೈತ್ರಿ ಅಭ್ಯರ್ಥಿ ಸುನೀತಾ ಶಕ್ತಿ ಪ್ರದರ್ಶನ

04:07 PM Apr 05, 2019 | Naveen |

ವಿಜಯಪುರ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಡಾ| ಸುನೀತಾ ದೇವಾನಂದ ಚವ್ಹಾಣ ಗುರುವಾರ ನಾಮಪತ್ರ ಸಲ್ಲಿಸಿದರು.

Advertisement

ನಗರದ ಶ್ರೀ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ತೆರೆದ ವಾಹನದಲ್ಲಿ ಮಹಾತ್ಮಾ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ, ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದ ಮಾರ್ಗವಾಗಿ ಬೃಹತ್‌ ಮೆರವಣಿಗೆಯಲ್ಲಿ ಜಿಲ್ಲಾ ಧಿಕಾರಿಗಳ ಕಚೇರಿಗೆ ತೆರಳಿ ಸುನಿತಾ ನಾಮಪತ್ರ ಸಲ್ಲಿಸಿದರು.

ಡಾ| ಸುನಿತಾ ಅವರು ನಾಮಪತ್ರ ಸಲ್ಲಿಕೆಯೆ ಮೆರವಣಿಗೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಗೃಹ ಸಚಿವ ಎಂ.ಬಿ. ಪಾಟೀಲ, ಆರೋಗ್ಯ ಸಚಿವ ಶಿವಾನಂದ ಪಾಟೀಲ, ಜೆಡಿಎಸ್‌ ಪಕ್ಷದ ತೋಟಗಾರಿಕಾ ಸಚಿವ ಎಂ.ಸಿ. ಮನಗೂಳಿ, ಸಚಿವ ಬಂಡೆಪ್ಪ ಕಾಶಂಪೂರ, ಉಭಯ ಪಕ್ಷಗಳ ಶಾಸಕರಾದ ಬಸವರಾಜ ಹೊರಟ್ಟಿ, ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ, ಶಿಕ್ಷಣ ಇಲಾಖೆ ಸಂಸದೀಯ ಕಾರ್ಯದರ್ಶಿದ ಜೆಡಿಎಸ್‌ ಅಭ್ಯರ್ಥಿ ಸುನಾತಾ ಅವರ ಪತಿ ಡಾ|ದೇವಾನಂದ ಚವ್ಹಾಣ, ಮೇಲ್ಮನೆ ಸದಸ್ಯರಾದ ಸುನಿಲಗೌಡ ಪಾಟೀಲ, ಪ್ರಕಾಶ ರಾಠೊಡ, ಮಾಜಿ ಸಚಿವ ಸಿ.ಎಸ್‌. ನಾಡಗೌಡ, ವಿಠಲ ಕಟಕಧೋಂಡ, ರಾಜು ಆಲಗೂರ, ಸೋಮನಗೌಡ ಪಾಟೀಲ ಮನವೂಳಿ, ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ, ನಾನಾಗೌಡ ಪಾಟೀಲ, ದಿಲಾವರ ಖಾಜಿ, ಚಂದ್ರಶೇಖರ ಹಿರೇಮಠ, ರಾಜು ಹಿಪ್ಪರಗಿ, ಮಲ್ಲಿಕಾರ್ಜುನ ಯಂಡಿಗೇರಿ ಇವರೆಲ್ಲ ಒಂದೇ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.

ಮೆರವಣಿಗೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳ ಜಂಟಿ ಧ್ವಜಗಳನ್ನು ಹಿಡಿದಿದ್ದ ಕಾರ್ಯಕರ್ತರು ಉಭಯ ಪಕ್ಷಗಳು ಹಾಗೂ ಅವುಗಳ ನಾಯಕರ ಪರವಾಗಿ ಘೋಷಣೆ ಕೂಗಿದರು. ಮೆರವಣಿಗೆಯಲ್ಲಿದ್ದ ಎರಡು ತೆರೆದ ವಾಹನಗಳ ಎಡ-ಬಲದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಜೆಡಿಎಸ್‌ ಅಧ್ಯಕ್ಷ ಎಚ್‌.ಡಿ. ದೇವೇಗೌಡ, ಸಿ.ಎಂ. ಎಚ್‌.ಡಿ. ಕುಮಾರಸ್ವಾಮಿ ಅವರ ಭಾವಚಿತ್ರಗಳಿದ್ದ ಕಟೌಟುಗಳು ರಾರಾಜಿಸುತ್ತಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next