Advertisement

ಮದ್ಯ ಮಾರಾಟ ತಡೆಗಟ್ಟಲು ತಾಕೀತು

03:53 PM Apr 20, 2020 | Naveen |

ವಿಜಯಪುರ: ಕೋವಿಡ್‌-19 ಕೊರೊನಾ ಸೋಂಕು ಹರಡದಂತೆ ಸರ್ಕಾರ ಲಾಕ್‌ಡೌನ್‌ ಮಾಡಿದ್ದರೂ ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಸರಬರಾಜು ನಡೆಯುತ್ತಿದೆ ಎಂದು ಶಾಸಕರೇ ದೂರುತ್ತಿದ್ದಾರೆ. ಕಾರಣ ತಕ್ಷಣ ಇಂಥ ಅಕ್ರಮಕ್ಕೆ ಕಡಿವಾಣ ಹಾಕುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ರವಿವಾರ ನಗರದ ನೂತನ ಪ್ರವಾಸಿ ಮಂದಿರದಲ್ಲಿ ಕೋವಿಡ್‌-19 ಕೊರೊನಾ ರೋಗ ನಿಗ್ರಹಕ್ಕಾಗಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮೇಲ್ಮನೆ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ, ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಅವರು, ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಮತ್ತೂಂದೆಡೆ ಜಿಲ್ಲೆಯ ಸುತ್ತಲೂ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳೇ ಇದ್ದು, ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯೂ ಆಗಿದೆ. ಆದರೆ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ಸಾಗಿರುವುದು ಆತಂಕ ಮೂಡಿಸಿದೆ ಎಂದು ದೂರಿದರು.

ಇದರಿಂದ ಅಬಕಾರಿ ಆಯುಕ್ತರು ತಕ್ಷಣ ಕಾರ್ಯಪ್ರವೃತ್ತರಾಗಿ ಅಕ್ರಮ ಮದ್ಯ ಸಾಗಾಟ- ಮಾರಾಟ ಬಗ್ಗೆ ದೂರುಗಳ ಬರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. ಕೊರೊನಾ ಸೋಂಕು ಪರೀಕ್ಷೆಗಾಗಿ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಲಬುರಗಿ, ಹುಬ್ಬಳ್ಳಿ, ಬಳ್ಳಾರಿ, ಗದಗ ಬೆಳಗಾವಿ ನಗರಗಳಲ್ಲಿ ಪ್ರಯೋಗಾಲಯ ಸ್ಥಾಪಿಸಲಾಗಿದೆ ಎಂದು ಸಚಿವೆ ಶಶಿಕಲಾ ಅವರು ಹೇಳಿದಾಗ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿದೆ. ಕಾರಣ ವಿಜಯಪುರ ಜಿಲ್ಲೆಯಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಆದ್ಯತೆ ನೀಡುವಂತೆ ಸಭೆಯಲ್ಲಿ ಹಾಜರಿದ್ದ ಶಾಸಕರು ಆಗ್ರಹಿಸಿದರು. ಈ ಹಂತದಲ್ಲಿ ಪ್ರಯೋಗಾಲಯ ಸ್ಥಾಪನೆ ಮಾತ್ರವಲ್ಲ ಜಿಲ್ಲೆಗೆ ಅಗತ್ಯ ಔಷ ಧ-ವೈದ್ಯಕೀಯ ಪರಿಕರ ಸೌಲಭ್ಯಗಳನ್ನು ಪಡೆಯಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುವುದಾಗಿ ಭರವಸೆ ನೀಡಿದರು.

ಬಡ ಜನರ ಹಿತಕ್ಕೆ ಆದ್ಯತೆ ನೀಡಬೇಕು ಎಂದು ಮೇಲ್ಮನೆ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎಂ.ಬಿ. ಪಾಟೀಲ ಆಗ್ರಹಿಸಿದರು. ನಗರದಲ್ಲಿ ಸೋಂಕಿತರು ಪತ್ತೆಯಾಗುತ್ತಲೇ ರೈತರು ನಗರಕ್ಕೆ ಆಗಮಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶಾಸಕರು ಆತಂಕ ವ್ಯಕ್ತಪಡಿಸಿದರು. ಈ ಹಂತದಲ್ಲಿ ಉತ್ತರ ನೀಡಿದ ಜಿಲ್ಲಾ ಧಿಕಾರಿ ವೈ. ಎಸ್‌. ಪಾಟೀಲ, ಈ ಕುರಿತು ರೈತರು ನೇರವಾಗಿ ಗ್ರಾಹಕರಿಗೆ ಹಣ್ಣು-ತರಕಾರಿ ಮಾರಾಟಕ್ಕೆ ನಗರದ ಹೊರ ವಲಯದ 5 ಕಡೆಗಳಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ರೈತರು ತಮ್ಮ ಉತ್ಪನ್ನ ಸಾಗಿಸಲು ಪಾಸ್‌ ವಿತರಿಸಲಾಗುತ್ತಿದೆ. ಪೊಲೀಸ್‌ ಇಲಾಖೆ ಕೂಡ ಈ ವಿಷಯದಲ್ಲಿ ಅಗತ್ಯ ಸಹಕಾರ ನೀಡುತ್ತಿದೆ ಎಂದು ವಿವರಿಸಿದರು.

ರೈತರು ತಮ್ಮ ಉತ್ಪನ್ನ ಮಾರಾಟಕ್ಕೆ ನಿರ್ಭಯವಾಗಿ ನಗರಕ್ಕೆ ಆಗಮಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸ್ಥಳೀಯವಾಗಿ ರೈತರಿಗೆ ನೆರವು ನೀಡುವಲ್ಲಿ ಪಿಡಿಒಗಳು ಇನ್ನೂ ಕ್ರಿಯಾಶೀಲವಾಗಿ ಕೆಲಸ ಮಾಡುವಂತೆ ನಿರ್ದೇಶಿಸಬೇಕು ಎಂದು ಶಾಸಕ ಶಿವಾನಂದ ಪಾಟೀಲ ಆಗ್ರಹಿಸಿದಾಗ, ಈ ಕುರಿತು ಕ್ರಮ ಕೈಗೊಳ್ಳುವಂತೆ ಸಚಿವರು ಜಿಪಂ ಸಿಇಒಗೆ ಸೂಚಿಸಿದರು. ಶಾಸಕರಾದ ಎಂ.ಸಿ. ಮನಗೂಳಿ, ಸೋಮನಗೌಡ ಪಾಟೀಲ, ದೇವಾನಂದ ಚವ್ಹಾಣ, ಅರುಣ ಶಹಾಪುರ, ಜಿಪಂ ಅಧ್ಯಕ್ಷ ಶಿವಯೋಗೆಪ್ಪ ನೇದಲಗಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next