Advertisement

ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ಕಲ್ಪಿಸಿ

10:39 AM Jun 16, 2019 | Naveen |

ವಿಜಯಪುರ: ರಾಜ್ಯದಲ್ಲಿ ಇನ್ನೂ ಮಲ ಹೊರುವ ಪದ್ಧತಿ ಜೀವಂತವಾಗಿದೆ. ಹೀಗಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಪೈಲಟ್ ಯೋಜನೆ ರೂಪಿಸಿದೆ. ಹೀಗಾಗಿ ವಿಜಯಪುರ ಜಿಲ್ಲೆಯಲ್ಲೂ ಅಧಿಕಾರಿಗಳು ಸರ್ಕಾರಗಳು ರೂಪಿಸಿರುವ ಯೋಜನೆಗಳನ್ನು ಅರ್ಹ ಫ‌ಲಾನುಭವಿಗಳಿಗೆ ತಲುಪಿಸುವಲ್ಲಿ ಆದ್ಯತೆ ನೀಡಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ ಹಿರೇಮನಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿರುವ ಎಲ್ಲ ಸಫಾಯಿ ಕರ್ಮಚಾರಿಗಳ ಸಮೀಕ್ಷಾ ಕಾರ್ಯವನ್ನು ಯಾವ ಲೋಪವೂ ಇಲ್ಲದಂತೆ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಕಲ್ಪಿಸಲು ಸಮೀಕ್ಷೆ ನೆರವಾಗಲಿದೆ. ಅದರಂತೆ ಕೇಂದ್ರ ಸರ್ಕಾರ ಪೈಲಟ್ ಯೋಜನೆಯಾಗಿ ಕರ್ನಾಟಕ ರಾಜ್ಯದ ಒಟ್ಟು 11 ಜಿಲ್ಲೆಗಳಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತ ಇರುವುದು ಗಮನಕ್ಕೆ ಬಂದಿದೆ. ಈ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಎಲ್ಲ ಸಫಾಯಿ ಕರ್ಮಚಾರಿಗಳ ಅಧಿಕೃತ ದತ್ತಾಂಶದ ಅಗತ್ಯವಿದೆ. ಇದಕ್ಕಾಗಿ ಬರುವ ಜುಲೈ ಅಂತ್ಯದೊಳಗೆ ಈ ಸಮೀಕ್ಷೆ ಕಾರ್ಯ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಫಾಯಿ ಕರ್ಮಚಾರಿಗಳ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸುವ ಜೊತೆಗೆ ಸಮಾಜದ ಮುಖ್ಯವಾಹಿನಿಗೆ ತರುವ ಅವಶ್ಯಕತೆ ಇದೆ. ಸಫಾಯಿ ಕರ್ಮಚಾರಿಗಳ ಕೌಟುಂಬಿಕ ಪರಿಸ್ಥಿತಿ ಸುಧಾರಿಸಲು ಅನುಕೂಲವಾಗುವಂತೆ ಅವರಿಗೆ ಉದ್ಯೋಗಾವಕಾಶ, ಪುನರ್ವಸತಿ, ಆರೋಗ್ಯ ವ್ಯವಸ್ಥೆ ಹಾಗೂ ಕುಟುಂಬದ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ತಲುಪಿಸುವ ಅಗತ್ಯವಿದ್ದು, ಈ ದಿಸೆಯಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿ ಅವರ ಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲೆಯಾದ್ಯಂತ ಮ್ಯಾನುವಲ್ ಸ್ಕ್ಯಾವೆಂಜರ್‌ ಪದ್ಧತಿ 2013ರ ಎಂಎಸ್‌ ಕಾಯ್ದೆ ಅನ್ವಯ ಸಂಪೂರ್ಣ ನಿಷೇಧಿಸಲಾಗಿದೆ. ಹಿಗಾಗಿ ಅಧಿಕಾರಿಗಳು, ಸಾರ್ವಜನಿಕರಾಗಲಿ ಮ್ಯಾನುವೆಲ್ ಸ್ಕ್ಯಾಂವೆಂಜರ್‌ ಬಳಸಬಾರದು. ಒಂದೊಮ್ಮೆ ನಿರ್ಲಕ್ಷಿಸಿದಲ್ಲಿ ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಲಾಗುತ್ತದೆ. ಅದರಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಶೌಚ ಸ್ವಚ್ಛತೆಗೆ ಯಂತ್ರಗಳನ್ನು ಬಳಸುವಂತೆ ತಿಳಿಸಿದ ಅವರು, ಮ್ಯಾನುವೆಲ್ ಸ್ಕ್ಯಾವೆಂಜರ್‌ ಕೆಲಸಕ್ಕೆ ಬಳಸದಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಂತಹ ವೃತ್ತಿಯನ್ನು ಕೈ ಬಿಡಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅನೇಕ ಪ್ರೋತ್ಸಾಹಕ ಯೋಜನೆಗಳನ್ನು ನೇರವಾಗಿ ಸಫಾಯಿ ಕರ್ಮಚಾರಿಗಳಿಗೆ ತಲುಪಿಸಲು ಮುಂದಾಗಬೇಕು. ಸಫಾಯಿ ಕರ್ಮಚಾರಿಗಳಿಗೆ ಪರ್ಯಾಯ ಉದ್ಯೋಗ ಕಲ್ಪಿಸಲು ನೇರವಾಗಿ ಫ‌ಲಾನಭವಿ ಬ್ಯಾಂಕ್‌ ಖಾತೆಗೆ 40 ಸಾವಿರ ರೂ. ಜಮೆ ಮಾಡುವ ಯೋಜನೆ ಜಾರಿಯಲ್ಲಿದೆ. 20 ಸಾವಿರ ರೂ.ಗಳಿಂದ 20 ಲಕ್ಷ ರೂ.ವರೆಗೆ ಹಣಕಾಸು ನೆರವು ಒದಗಿಸಲು ಅವಕಾಶವಿದೆ. ಹೀಗಾಗಿ ಅಧಿಕಾರಿಗಳು ಈ ವಿಷಯದಲ್ಲಿ ಆದ್ಯತೆ ಮೇಲೆ ಕೆಲಸ ಮಾಡುವಂತೆ ಸೂಚಿಸಿದರು.

Advertisement

ದೇಶದಲ್ಲಿ ಮಲ ಹೊರುವ ಪದ್ಧತಿ ಸಂಪೂರ್ಣ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಕೆಲಸದಲ್ಲಿ ತೊಡಗಿರುವವರನ್ನು ಗುರುತಿಸಿ ಪರ್ಯಾಯ ಉದ್ಯೋಗ, ಅವಶ್ಯಕ ಮನೆಗಳ ಸೌಲಭ್ಯ, ಜೀವನ ಭದ್ರತೆಗೆ ರಕ್ಷಣೆ ನೀಡಬೇಕು. ಈ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಫಾಯಿ ಕರ್ಮಚಾರಿಗಳ ವಿಷಯದಲ್ಲಿ ರಾಷ್ಟ್ರೀಯ ಆಯೋಗ ಕೂಡ ಸರ್ಕಾರಿ, ಅರೆ-ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಇಂತಹ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವವರನ್ನು ಗುರುತಿಸುವ ಅಂಗವಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲ ರಾಜ್ಯಗಳ ರಾಜ್ಯ ಸರ್ಕಾರಗಳಿಗೂ ಈ ಕುರಿತು ನಿರ್ದೇಶನ ನೀಡಲಾಗುತ್ತದೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಮಲ ಹೊರುವ ಪದ್ಧತಿ ನಿರ್ಮೂಲನೆಗೆ ಈ ಕೆಲಸದಲ್ಲಿ ತೊಡಗಿರುವವರನ್ನು ಗುರುತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ವಿವಿಧ ಯಂತ್ರಗಳ ಮೂಲಕ ಸ್ವಚ್ಛತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದಾಗಿ ಹೇಳಿದರು.

ಜಿಪಂ ಸಿಇಒ ವಿಕಾಸ ಸುರಳಕರ ಮಾತನಾಡಿ, ಜಿಲ್ಲೆಯಲ್ಲಿರುವ ಪ್ರತಿ ಕುಟುಂಬಗಳ ತಾಲೂಕಾವಾರು ಮಾಹಿತಿ, ಅವರು ಬಳಸುತ್ತಿರುವ ಶೌಚಗಳ ಶೌಚಗುಂಡಿ ಬಗ್ಗೆಯೂ ಪರಿಶೀಲನೆ ನಡೆಸಬೇಕು. ತಾಂತ್ರಿಕವಾಗಿ ಸಮಗ್ರ ಅಧ್ಯಯನ ನಡೆಸಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಇಂಡಿ ನಗರದ ಹೊಟೆಲ್ವೊಂದರ ಶೌಚ ಸ್ವಚ್ಛತೆಗೆ ಇಳಿದು ಸಾವನ್ನಪ್ಪಿದ ಕರ್ಮಚಾರಿಗಳ ವಾರಸುದಾರರಿಗೆ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಹೊಟೇಲ್ ಮಾಲೀಕರಿಂದ ಪರಿಹಾರ ಒದಗಿಸುವ ಕುರಿತು ಹಾಗೂ ತಪ್ಪಿತಸ್ಥರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಎಸ್ಪಿ ಪ್ರಕಾಶ ನಿಕ್ಕಂ ಇದ್ದರು. ಇಂಡಿ ತಾಪಂ ಇಒ ಬಿ.ಜೆ. ಇಂಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು

Advertisement

Udayavani is now on Telegram. Click here to join our channel and stay updated with the latest news.

Next