Advertisement

ನೆರೆ ಪರಿಹಾರದ ಖುದ್ದು ಪರಿಶೀಲನೆ: ನ್ಯಾ|ವಿಶ್ವನಾಥ ಶೆಟ್ಟಿ

11:15 PM Nov 22, 2019 | Team Udayavani |

ಉಡುಪಿ: ಇತ್ತೀಚೆಗೆ ಸುರಿದ ಭಾರೀ ಮಳೆ ಹಾಗೂ ಪ್ರಾಕೃತಿಕ ವಿಕೋಪಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಮನೆ ಹಾನಿಗೀಡಾದ ಸಂತ್ರಸ್ತರಿಗೆ ಸಮರ್ಪಕವಾಗಿ ಪರಿಹಾರ ದೊರೆತಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ಖುದ್ದು ಪರಿಶೀಲನೆ ನಡೆಸಲಾಗುವುದು ಎಂದು ಲೋಕಾಯುಕ್ತ ನ್ಯಾ| ಪಿ. ವಿಶ್ವನಾಥ ಶೆಟ್ಟಿ ತಿಳಿಸಿದರು.

Advertisement

ಶುಕ್ರವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಕಂದಾಯ ಇಲಾಖೆಯಿಂದ ಪ್ರಾಕೃತಿಕ ವಿಕೋಪ ಸಂತ್ರಸ್ತರ ಪಟ್ಟಿ ಪಡೆದು, ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗಳು ಖುದ್ದಾಗಿ ಸಂತ್ರಸ್ತರ ಮನೆಗೆ ಭೇಟಿ ನೀಡಿ, ಪರಿಹಾರ ಮೊತ್ತ ದೊರಕಿರುವ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದರು.

ತಾರತಮ್ಯ ಬೇಡ
ವಸತಿ ಯೋಜನೆಯಲ್ಲಿ ಅರ್ಹ ಫ‌ಲಾನುಭವಿಗಳಿಗೆ ಮನೆ ಮಂಜೂರಾಗುವಂತೆ ಗಮನ ಹರಿಸಬೇಕು. ಹಲವೆಡೆ ಗ್ರಾ.ಪಂ. ಅಧ್ಯಕ್ಷರು, ಅನರ್ಹರಿಗೂ ವಸತಿ ಯೋಜನೆಯಲ್ಲಿ ಮನೆ ಮಂಜೂರಾಗಲು ಪಿಡಿಒಗಳ ಮೇಲೆ ಒತ್ತಡ ಹೇರಿರುವ ಬಗ್ಗೆ ದೂರುಗಳು ಬಂದಿವೆ. ಅಮೆರಿಕ ದೇಶದಲ್ಲಿ ಉದ್ಯೋಗದಲ್ಲಿರುವವರಿಗೂ ವಸತಿ ಯೋಜನೆಯ ಮನೆ ಮಂಜೂರಾಗಿರುವ ಪ್ರಕರಣಗಳು ಇವೆ. ಈ ನಿಟ್ಟಿನಲ್ಲಿ ಬಡವರಿಗೆ ಮಾತ್ರ ಮನೆ ಮಂಜೂರುಗೊಳಿಸುವಲ್ಲಿ ಮುತುವರ್ಜಿ ವಹಿಸಬೇಕು. ತಾರತಮ್ಯ ಇರಬಾರದು ಎಂದರು.

ಮಧ್ಯವರ್ತಿಗಳನ್ನು ದೂರವಿಡಿ
ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ಸಾರ್ವಜನಿಕರ ಸೇವೆಗಳಿಗೆ ಹೆಚ್ಚು ಖರ್ಚು ಮಾಡಬೇಕಾಗುತ್ತಿದೆ ಎಂದು ವ್ಯಾಪಕ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಬ್ರೋಕರ್‌ಗಳನ್ನು ಆರ್‌ಟಿಒ ಕಚೇರಿಯಿಂದ ದೂರವಿಡುವಂತೆ ಆರ್‌ಟಿಒ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿಗಳು ಸೂಚಿಸಿದರು. ಇದಲ್ಲದೇ ಅನುಮತಿ ಪಡೆದಿರುವ ಖಾಸಗಿ ಬಸ್‌ಗಳು ನಿಗದಿತ ಮಾರ್ಗದಲ್ಲಿ ಸಂಚರಿಸುತ್ತಿರುವ ಬಗ್ಗೆ ನಿಗಾ ವಹಿಸಬೇಕು ಎಂದರು.

ಕೃಷಿ ಇಲಾಖೆಗೆ ಸೂಚನೆ
ಕೃಷಿ ಇಲಾಖೆಯ ಕೃಷಿ ಹೊಂಡ ಯೋಜನೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಪ್ರಗತಿಯಾಗಿರುವುದಿಲ್ಲ. ಈ ನಿಟ್ಟಿನಲ್ಲಿ ಕೃಷಿಕರಿಗೆ ಇದರ ಬಗ್ಗೆ ಅರಿವು ಮೂಡಿಸಿ, ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್‌, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹೊÉàಟ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ಕಮಲಾ, ಎಎಸ್‌ಪಿ ಕುಮಾರಚಂದ್ರ ಉಪಸ್ಥಿತರಿದ್ದರು.

ವಸತಿ ನಿಲಯಕ್ಕೆ ಭೇಟಿ
ಉಡುಪಿ: ನ್ಯಾ| ಪಿ. ವಿಶ್ವನಾಥ್‌ ಶೆಟ್ಟಿ ಶುಕ್ರವಾರ ಕುಂಜಿಬೆಟ್ಟುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಸತಿ ನಿಲಯ ಹಳೆಯದಾಗಿದ್ದು, ಹೊಸ ಕಟ್ಟಡ ನಿರ್ಮಿಸುವ ಬಗ್ಗೆ ಅಧಿಕಾರಿಗಳಲ್ಲಿ ವಿಚಾರಿಸಿದರು. ವಸತಿ ನಿಲಯದ ಜಾಗ ಭೂ ವಿವಾದದಲ್ಲಿ ಇರುವುದರಿಂದ ನೂತನ ಕಟ್ಟಡ ನಿರ್ಮಿಸಲು ಅಡ್ಡಿಯಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಉಪ ನಿರ್ದೇಶಕ ರಮೇಶ್‌ ಲೋಕಾಯುಕ್ತರಿಗೆ ವಿವರಿಸಿದರು. ಜಿಲ್ಲಾಧಿಕಾರಿ ಜಿ. ಜಗದೀಶ್‌ ಜತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next