Advertisement

ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯಕ್ಕೆ ಜಿಲ್ಲೆ ಪ್ರಥಮ

10:15 PM Oct 11, 2019 | Lakshmi GovindaRaju |

ಚಿಕ್ಕಬಳ್ಳಾಪುರ: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಂತೆ ಜಿಲ್ಲಾದ್ಯಂತ ಸೆ.1ರಿಂದ ದೋಷ ರಹಿತವಾಗಿ ಮತದಾರರ ಪಟ್ಟಿ ಪರಿಶೀಲನೆಗೆ ಜಿಲ್ಲಾಡಳಿತ ಕೈಗೊಂಡಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿರುವ ನ್ಯಾಯಾಂಗ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಮತದಾರರ ಪರಿಷ್ಕರಣೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಇಲ್ಲಿಯವರೆಗೂ 3,82,107 ಮತದಾರ ಪಟ್ಟಿಗಳ ಪರಿಶೀಲನೆ ಪೂರ್ಣಗೊಳಿಸಲಾಗಿದೆ ಎಂದರು.

Advertisement

ಶೇ.38ರಷ್ಟು ಪರಿಶೀಲನೆ: ಜಿಲ್ಲೆಯಲ್ಲಿ ಒಟ್ಟು 10.17 ಲಕ್ಷ ಮತದಾರರು ಇದ್ದು, ಈಗಾಗಲೇ 3.82 ಲಕ್ಷ ಮತದಾರ ಪಟ್ಟಿಗಳ ಪರಿಶೀಲನೆ ನಡೆಸಿದ್ದು, ಶೇ.38ರಷ್ಟು ಪರಿಶೀಲನೆ ಯಶಸ್ವಿಯಾಗಿ ಪೂರ್ಣಗೊಳಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಒಟ್ಟು 2,16,825 ಮತದಾರರಿದ್ದು ಆ ಪೈಕಿ ಇದುವರೆಗೂ ಒಟ್ಟು 87,916ರಷ್ಟು ಪರಿಶೀಲನೆ ನಡೆಸಲಾಗಿದೆ. ಶಿಡ್ಲಘಟ್ಟ ತಾಲೂಕಿನಲ್ಲಿ ಒಟ್ಟು 1,99,132 ಮತದಾರರಿದ್ದು, ಈಗಾಗಲೇ 80,272 ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ.

ಬಾಗೇಪಲ್ಲಿ ತಾಲೂಕಿನಲ್ಲಿ 1,98,684 ಮತದಾರರಿದ್ದು, 77,126 ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಗೌರಿಬಿದನೂರು ತಾಲೂಕಿನಲಲಿ 2,03,942 ಮತದಾರರಿದ್ದು, ಇದುವರೆಗೂ 74,132 ರಷ್ಟು ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಒಟ್ಟು 1,99,381 ಮತದಾರರಿದ್ದು, ಇದುವರೆಗೂ 62,661 ಮತದಾರರ ಪರಿಶೀಲನೆ ಆಗಿದೆ ಎಂದರು.

ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ 5 ವಿಧಾನಸಭಾ ಕ್ಷೇತ್ರಗಳ 6 ತಾಲೂಕುಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಸಮಯದಲ್ಲಿ ನಾಗರಿಕರು ಮತದಾರರ ಪಟ್ಟಿಗೆ ಅವರ ಹೆಸರನ್ನು ಸೇರ್ಪಡೆ ಮಾಡಲು, ತೆಗೆದು ಹಾಕಲು, ಮತದಾರರ ಪರಿಶೀಲನೆ ಮತ್ತು ದೃಢೀಕರಣ, ಮತದಾರರ ಪಟ್ಟಿಯಲ್ಲಿನ ತಿದ್ದುಪಡಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಆ್ಯಪ್‌ ಬಳಕೆ ಮಾಡಿಕೊಳ್ಳಿ: ಸಾರ್ವಜನಿಕರು ಕೂಡ ಆ್ಯಪ್‌ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಸಾಮಾನ್ಯ ಸೇವಾ ಕೇಂದ್ರ, ಅಟಲ್‌ ಜೀ ಜನಸ್ನೇಹಿ ಕೇಂದ್ರ, ಮತದಾರರ ನೋಂದಣಿ ಕಚೇರಿ, ಗ್ರಾಮ ಪಂಚಾಯಿತಿಯಲ್ಲಿನ ಬಾಪೂಜಿ ಕೆಂದ್ರದಲ್ಲಿ ಸಲ್ಲಿಸಿ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬಹುದು ಎಂದರು.

Advertisement

ಜಿಲ್ಲಾಧಿಕಾರಿಗಳ ಕಚೇಯಲ್ಲಿರುವ 1950 ಸಹಾಯವಾಣಿ ಕೇಂದ್ರದಲ್ಲಿ ವಿಕಲಚೇತನರು ಮತದಾರರ ಪಟ್ಟಿಯಲ್ಲಿರುನ ತಮ್ಮ ವಿವರಗಳ ಸೇರ್ಪಡೆ, ತಿದ್ದುಪಡಿ ಮಾಡಿಸಲು ಅವಕಾಶ ಕಲ್ಪಿಸಲಾಗುತ್ತದೆ. ನಾಗರಿಕರು ತಮ್ಮ ಕುಟುಂಬಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಮತದಾರರ ಸಹಾಯವಾಣಿ ಹಾಗೂ ವೆಬ್‌ಸೈಟ್‌ ಮೂಲಕ ಮಾಹಿತಿ ದಾಖಲಿಸಿ ಪರಿಶೀಲಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಎ.ಎನ್‌.ರಘುನಂದನ್‌, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ತೇಜ ಆನಂದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಲಕ್ಷ್ಮೀದೇವಮ್ಮ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

20 ರಿಂದ ರಾಜ್ಯ ಆಹಾರ ಆಯೋಗ ಜಿಲ್ಲಾ ಪ್ರವಾಸ
ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ-2013ರ ಅನುಷ್ಠಾನದ ಬಗ್ಗೆ ಖುದ್ದು ಪರಿಶೀಲಿಸಲು ರಾಜ್ಯ ಆಹಾರ ಆಯೋಗವು ಅ.20 ರಿಂದ 24 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ರಾಜ್ಯ ಆಹಾರ ಆಯೋಗವು ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ನ್ಯಾಯಾಂಗ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಾಲೇ ಆಯೋಗವು 21 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಿದೆ ಎಂದರು.

ಪರಿಶೀಲನೆಗೆ ಸಹಕರಿಸಿ: ಅ.20 ರಿಂದ 24 ರವರೆಗೆ ರಾಜ್ಯ ಆಹಾರ ಆಯೋಗವು ಚಿಕ್ಕಬಳ್ಳಾಪುರ ಪ್ರವಾಸ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆಯೋಗವು ಕೇಳುವಂತಹ ಸೂಕ್ತ ದಾಖಲೆಗಳನ್ನು ಒದಗಿಸಿ, ಪರಿಶೀಲನೆಗೆ ಸಹಕರಿಸಬೇಕು ಸೂಚಿಸಿದರು.

ಅಪೌಷ್ಟಿಕ ಮಕ್ಕಳ ಘಟಕಗಳಿಗೆ ಭೇಟಿ: ಪ್ರವಾಸದ ವೇಳೆ ಜಿಲ್ಲಾ ವ್ಯಾಪ್ತಿಗೆ ಬರುವ ನ್ಯಾಯಬೆಲೆ ಅಂಗಡಿಗಳು, ಸಗಟು ಆಹಾರ ಧಾನ್ಯಗಳ ಮಳಿಗೆಗಳಿಗೆ, ಅಂಗನವಾಡಿ ಕೇಂದ್ರಗಳು, ಮಧ್ಯಾಹ್ನ ಉಪಾಹಾರ ಯೋಜನೆಯಡಿಯಲ್ಲಿನ ಸರ್ಕಾರಿ ಶಾಲೆಗಳು, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ವಿದ್ಯಾರ್ಥಿ ನಿಲಯಗಳು, ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು ಮತ್ತು ಜಿಲ್ಲಾ ತೀವ್ರ ಅಪೌಷ್ಟಿಕ ಮಕ್ಕಳ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಎಂದರು.

ಸರ್ಕಾರಕ್ಕೆ ವರದಿ ಸಲ್ಲಿಕೆ: ಸಭೆಯಲ್ಲಿ ಭಾಗವಹಿಸಿದ್ದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಲಕ್ಷ್ಮೀ ನಾರಾಯಣ ಮಾತನಾಡಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013, ಸೆಕ್ಷನ್‌ 16 ರ ಅನ್ವಯ ರಾಜ್ಯ ಆಹಾರ ಆಯೋಗವನ್ನು ರಚನೆ ಮಾಡಲಾಗಿದೆ. ಸಾರ್ವಜನಿಕರ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಆಹಾರ ಧಾನ್ಯಗಳ ಗುಣಮಟ್ಟ, ನ್ಯಾಯಬೆಲೆ ಅಂಗಡಿಗಳ ಕಾರ್ಯವೈಖರಿ, ಬಿಸಿಯೂಟ ಯೋಜನೆ, ಅಂಗನವಾಡಿಗಳಿಗೆ ಆಹಾರ ಪೂರೈಕೆ ಸೇರಿದಂತೆ ಜಿಲ್ಲೆಯಲ್ಲಿ ಆಹಾರ ಪೂರೈಕೆ ಸಂಬಂಧ ಮಾಹಿತಿಯನ್ನು ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಎ.ಎನ್‌.ರಘುನಂದನ್‌, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜ್‌ಆನಂದ್‌ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಲಕ್ಷ್ಮೀದೇವಮ್ಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಅಶೋಕ್‌ ಸೇರಿದಂತೆ ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯವು ಶೇ.100 ರಷ್ಟು ಮತದಾರರ ವಿವರಗಳನ್ನು ಸರಿಪಡಿಸಲಿದೆ ಎಂಬ ಫೋಷವಾಕ್ಯದೊಂದಿಗೆ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ಸೆ.1ರಿಂದ ಅ.15 ರವರೆಗೆ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಮತದಾರರ ಪರಿಶೀಲನೆ ಕಾರ್ಯಕ್ರಮ ನಡೆಯುತ್ತಿದ್ದು, ಸದ್ಯಕ್ಕೆ ಜಿಲ್ಲೆ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಮೊದಲ ಸ್ಥಾನದಲ್ಲಿದೆ.
-ಆರ್‌.ಲತಾ, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next