ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ವಿಶೇಷ ಉಪಯೋಜನೆ (ಎಸ್ಸಿಪಿ-ಟಿಎಸ್ಪಿ)ಯ 11 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ಸೇರಿ ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬೃಹತ್ ಪಾದಯಾತ್ರೆ ನಡೆಸಲು ಬಿಜೆಪಿ ಚಿಂತನೆ ನಡೆಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಂಘಟನೆಗೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ ಈ ಬಗ್ಗೆ ಔಪಚಾರಿಕ ಚರ್ಚೆ ನಡೆದಿದೆ. ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹಾಗೂ ಪಕ್ಷದ ಪರಿಶಿಷ್ಟ ಜಾತಿ ಮತ್ತು ಪಂಗಡದ ನಾಯಕರ ಜತೆ ಈ ಬಗ್ಗೆ ಚರ್ಚಿಸಿದ ನಂತರ ಹೋರಾಟದ ರೂಪು-ರೇಷೆ ಸಿದ್ಧಗೊಳ್ಳಲಿದೆ.
ಕೇಂದ್ರ ಸಚಿವ ನಾರಾಯಣಸ್ವಾಮಿ, ಮಾಜಿ ಸಚಿವ ಎನ್.ಮಹೇಶ್, ಅರವಿಂದ ಲಿಂಬಾವಳಿ, ಛಲವಾದಿ ನಾರಾಯಣಸ್ವಾಮಿ ಮೊದಲಾದವರ ಜತೆಗೆ ಚರ್ಚಿಸಿದ ಬಳಿಕ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದರ ಜತೆಗೆ ರಾಜ್ಯಾದ್ಯಂತ ಮಹಿಳೆಯರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣದ ಬಗ್ಗೆಯೂ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ.
ಜಿಲ್ಲಾ ಪ್ರವಾಸ?: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸದ್ಯದಲ್ಲೇ ಜಿಲ್ಲಾ ಪ್ರವಾಸ ನಡೆಸಲು ತೀರ್ಮಾನಿಸಿದ್ದಾರೆಂದು ತಿಳಿದು ಬಂದಿದೆ. ಸಂಸತ್ ಅಧಿವೇಶನದ ಬಳಿಕ ಮತ್ತೂಮ್ಮೆ ದಿಲ್ಲಿಗೆ ತೆರಳಿ ಪದಾಧಿಕಾರಿಗಳ ಪಟ್ಟಿಗೆ ಒಪ್ಪಿಗೆ ಪಡೆದ ಬಳಿಕ ಈ ಪ್ರವಾಸ ನಡೆಯಲಿದೆ.