Advertisement

ರಾಜ್ಯದಲ್ಲಿ ತೀವ್ರ ಬರ, 3067 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ; ಸಿಎಂ

09:08 AM Jul 31, 2019 | Nagendra Trasi |

ಬೆಂಗಳೂರು:ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಮಳೆಹಾನಿ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

 ಮಳೆ ಕೊರತೆ:

ರಾಜ್ಯದಲ್ಲಿ ಸರಾಸರಿ ಶೇ. 18 ರಷ್ಟು ಮಳೆ ಕೊರತೆ ಇದೆ. ಮಲೆನಾಡು ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆ ಕೊರತೆ ತಲೆದೋರಿದೆ. ಜಲಾಶಯಗಳಲ್ಲಿ ನೀರಿನ ಸಂಗ್ರಹ ಶೇ. 47 ರಷ್ಟಿದೆ. ಹಾಗೂ 158 ತಾಲ್ಲೂಕುಗಳಲ್ಲಿ ಅಂತರ್ಜಲ ಕುಸಿತ ಕಂಡಿದೆ. I ವರೆಗೆ ಮುಂಗಾರು ಹಂಗಾಮಿನ ಬಿತ್ತನೆ ಪ್ರಮಾಣ ಶೇಕಡಾ 53ರಷ್ಟಿದೆ.  ಈ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ರಾಜ್ಯದ ರೈತರು ಹಾಗೂ ಜನ ಸಾಮಾನ್ಯರ ನೆರವಿಗೆ ಅಧಿಕಾರಿಗಳು ಧಾವಿಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಜನರಿಗೆ ಧೈರ್ಯತುಂಬಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

 ಅಂತರ್ಜಲ ಮರುಪೂರಣ 

Advertisement

ಈ ಹಿನ್ನೆಲೆಯಲ್ಲಿ ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಹಾಗೂ ರೈತರು ಬೆಳೆವಿಮೆಯನ್ನು ಕಡ್ಡಾಯವಾಗಿ ಮಾಡಿಸುವಂತೆ ಮನವೊಲಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆಗಸ್ಟ್ 2 ರಂದು ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ ರಾಜ್ಯದ ವಸ್ತುಸ್ಥಿತಿ ಮಾಹಿತಿ ಪಡೆದು ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಯನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲಾಗುವುದು. ಈಗಾಗಲೇ ಬಾಕಿ ಇರುವ ಕಳೆದ ಹಿಂಗಾರು ಹಂಗಾಮಿನ ಎನ್ ಡಿ ಆರ್ ಎಫ್ ಪರಿಹಾರ, ಉದ್ಯೋಗ ಖಾತ್ರಿ ಯೋಜನೆಯ ಬಾಕಿ ಅನುದಾನ ಹಾಗೂ ಇತರ ಅಗತ್ಯ ಅನುದಾನಗಳ ಬಿಡುಗಡೆಗೆ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರದ ಸಚಿವರಿಗೆ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನೀರು ಪೂರೈಕೆ

ರಾಜ್ಯದಲ್ಲಿ ಪ್ರಸ್ತುತ 3067 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಅಥವಾ ಖಾಸಗಿ ಬೋರ್‍ವೆಲ್‍ಗಳಿಂದ ನೀರು ಪೂರೈಸಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಸುಮಾರು 12 ವಾರಗಳಿಗಾಗುವಷ್ಟು ಮೇವು ಲಭ್ಯವಿದ್ದು, 27 ಗೋಶಾಲೆಗಳನ್ನು ಸ್ಥಾಪಿಸಲಾಗಿದೆ. 11 ಮೇವು ಬ್ಯಾಂಕ್‍ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿಗಳ ಬಳಿ 547.6 ಕೋಟಿ ರೂ. ಅನುದಾನ ಲಭ್ಯವಿದ್ದು, ಹಣಕಾಸಿನ ಯಾವುದೇ ಕೊರತೆ ಇಲ್ಲ ಎಂದು ಅಧಿಕಾರಿಗಳು ವಿವರಿಸಿದರು.

ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯದಲ್ಲಿ ಈ ವರೆಗೆ ಗುರಿ ಮೀರಿದ ಸಾಧನೆಯಾಗಿದೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್,  ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next