Advertisement

ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?: ಸಿದ್ದರಾಮಯ್ಯ

12:29 PM Apr 10, 2022 | Team Udayavani |

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಮ್ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭಾನುವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ.

Advertisement

ಬಿಜೆಪಿ ಹೇಳಿಕೊಂಡು ಬರುತ್ತಿರುವ ‘ರಾಮ ರಾಜ್ಯ’ದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ಧಾರವಾಡದಲ್ಲಿ ನಡೆದ ಹಲ್ಲೆ ಕೇವಲ ಮುಸ್ಲಿಮ್ ವ್ಯಾಪಾರಿಗಳ ಮೇಲೆ ನಡೆದದ್ದಲ್ಲ, ಅದು ಅವರು ಮಾರಾಟ ನಡೆಸುತ್ತಿದ್ದ ಕಲ್ಲಂಗಡಿ ಬೆಳೆಯುವ ರೈತರ ಮೇಲೆ ಕೂಡಾ ನಡೆದಿರುವ ದೌರ್ಜನ್ಯವೂ ಆಗಿದೆ. ಈ ಗೂಂಡಾಗಳನ್ನು ಹೀಗೆ ಸ್ವತಂತ್ರವಾಗಿ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲು ತಟ್ಟಲಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರವನ್ನೇ ಸಂಘ ಪರಿವಾರಕ್ಕೆ ಔಟ್ ಸೋರ್ಸ್ ಮಾಡಿ ಅಲ್ಲಿನ ಪುಂಡರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡ ಹಾಗೆ ಕಾಣುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇದೊಂದು ಶಾಶ್ವತ ಕಳಂಕ ಎಂದಿದ್ದಾರೆ.

ಬೊಮ್ಮಾಯಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಕನಸುಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎನ್ನುವುದು ಅವರಿಗ ತಿಳಿದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Advertisement

ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ ಎಂದಿದ್ದಾರೆ.

ರಾಜಕೀಯ ದುರುದ್ದೇಶದಿಂದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ನಡೆಸುತ್ತಿರುವ ಪುಂಡಾಟಿಕಗಳಿಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಶಾಂತಿ ಮತ್ತು ಸೌಹಾರ್ದ ಪ್ರಿಯ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಇದನ್ನು ಕನ್ನಡಿಗರು ಎಂದೂ ಕ್ಷಮಿಸರು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದು ಮುಖ್ಯಮಂತ್ರಿಗಳೇ ಮಾಡಿರುವ ಪಾಪದ ಫಲ. ಬೀದಿಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರವೇ ಕೊಲೆ,ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ರಾಜ್ಯದಲ್ಲಿ ಪ್ರಾರಂಭವಾಗಿದ್ದು. ಇದರಿಂದ ಕಾನೂನು ವ್ಯವಸ್ಥೆಯೇ ಕುಸಿದುಬಿದ್ದು ನಾಗರಿಕ ಯುದ್ದಕ್ಕೆ ದಾರಿಮಾಡಿಕೊಟ್ಟಿದೆ. ಸಂಘ ಪರಿವಾರದ ಜೊತೆಗಿನ ಸಹಯೋಗದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹರಡುತ್ತಿರುವ ಕೋಮುದ್ವೇಷದ ವಾತಾವರಣದಿಂದ ರಾಜ್ಯದ ಉದ್ಯಮಿಗಳು ಬೇಸತ್ತುಹೋಗಿ ಹೊರ ರಾಜ್ಯದ ಕಡೆ ಮುಖಮಾಡುತ್ತಿದ್ದಾರೆ. ಕಿರಣ್ ಮಜುಮದಾರ್ ಶಹಾ ಅವರಂತಹ ಖ್ಯಾತನಾಮರು ಕೂಡಾ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವುದ ಕಳವಳಕಾರಿ ಬೆಳವಣಿಗೆ ಎಂದಿದ್ದಾರೆ.

ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ. ಮುಖ್ಯಮಂತ್ರಿಗಳು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next