ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಎರಡು ನೋಟಿಸ್ ಜಾರಿಗೊಳಿಸಿದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜತೆಗೆ ಲುಕ್ಔಟ್ ಮತ್ತು ಬ್ಲೂಕಾರ್ನರ್ ನೋಟಿಸ್ ಹೊರಡಿಸಿದರೂ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಎಸ್ಐಟಿ ರವಿವಾರ ವಾಟ್ಸ್ಆ್ಯಪ್ ಮೂಲಕ ಆರೋಪಿಗೆ 3ನೇ ನೋಟಿಸ್ ಜಾರಿಗೊಳಿಸಿದೆ.
ಈ ಮಧ್ಯೆ ಸಂಸದ ಪ್ರಜ್ವಲ್ ರೇವಣ್ಣ ರವಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಮೇರೆಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬೆಂಗ ಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡುಬಿಟ್ಟಿದ್ದು, ಆರೋಪಿಗಾಗಿ ಕಾದು ಹೈರಾಣಾಗಿದ್ದಾರೆ.
ಕೆಲವು ದಿನಗಳ ಹಿಂದೆ ಜರ್ಮನಿಗೆ ತೆರಳಿದ್ದ ಪ್ರಜ್ವಲ್ ಬಳಿಕ ದುಬಾೖಯಲ್ಲಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಈ ಮಧ್ಯೆ ರವಿವಾರ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಆರೋಪಿಯ ಕುಟುಂಬ ಸದಸ್ಯರು ಹಾಗೂ ಜೆಡಿಎಸ್ ಮುಖಂಡರು ಮಾಹಿತಿ ನೀಡಿದ್ದರು.
ಈ ಮಾಹಿತಿಯಿಂದ ಎಚ್ಚೆತ್ತ ಎಸ್ಐಟಿ ಅಧಿಕಾರಿಗಳು ಶನಿವಾರ ರಾತ್ರಿಯೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಕಾದಿದ್ದರು.
ಎಸ್ಐಟಿಯ 12 ಮಂದಿ ಅಧಿಕಾರಿಗಳು ಹಾಗೂ ಸ್ಥಳೀಯ ಹತ್ತಾರು ಪೊಲೀಸರು ಏರ್ಪೋರ್ಟ್ ನಲ್ಲಿಯೇ ಬೀಡುಬಿಟ್ಟಿದ್ದಾರೆ.