Advertisement

ಜನತೆ ತೆರಿಗೆ ಹಣ ಎಲ್ಲಿ ಹೋಯಿತು?

12:15 PM Oct 21, 2021 | Team Udayavani |

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾರ್ವಜನಿಕ ಸಂಸ್ಥೆ ಮತ್ತು ಸರ್ಕಾರಿ ಸ್ವಾಮ್ಯದ ಆಸ್ತಿಗಳ ಮಾರಾಟ ಮಾಡಲು ಮುಂದಾಗಿದೆ. ಆದರೆ, ದೇಶದ ಜನತೆ ಪ್ರತ್ಯಕ್ಷ ಮತ್ತು ಪರೋಕ್ಷ ತೆರಿಗೆಗಳ ಮೂಲಕ ಕಟ್ಟಿದ ಹಣವೆಲ್ಲ ಎಲ್ಲಿ ಹೋಯಿತು ಎಂದು ಸಿಪಿಐ (ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಪ್ರಶ್ನಿಸಿದರು.

Advertisement

ಹಿರಿಯ ಹೋರಾಟಗಾರರಾಗಿದ್ದ ದಿ.ಮಾರುತಿ ಮಾನ್ಪಡೆ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಬುಧವಾರ ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ “ಜನ ಚಳವಳಿಗಳ ಅಗತ್ಯತೆ, ಸವಾಲು ಮತ್ತು ಸಾಧ್ಯತೆ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಪ್ರಧಾನಿ ಮೋದಿ ಸರ್ಕಾರಿ ವಲಯದ ಸಂಸ್ಥೆಗಳನ್ನು ಮಾರುವ ಮೂಲಕ ಆರು ಲಕ್ಷ ಕೋಟಿ ಹಣ ಪಡೆಯಲು ಮುಂದಾಗಿದ್ದಾರೆ. ಜನರ ದಾರಿ ತಪ್ಪಿಸಲು ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದ್ದೇವೆ ಎಂದು ಹೇಳುವ ಬದಲು ನಗದೀಕರಣ ಮಾಡಲಾಗುತ್ತಿದೆ ಎಂದು ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

ಕಳೆದ ಏಳು ವರ್ಷಗಳಿಂದಲೂ ಮೋದಿ ಸರ್ಕಾರ ದುರಾಡಳಿತದಲ್ಲಿ ತೊಡಗಿದೆ. ದೇಶದ ಆರ್ಥಿಕ ವ್ಯವಸ್ಥೆ ಪಾತಾಳಕ್ಕಿಳಿದಿದೆ. ಇದನ್ನು ಸರಿಪಡಿಸಲು ಯಾವುದೇ ಸೂಕ್ತ ಯೋಜನೆಯನ್ನು ಸರ್ಕಾರ ರೂಪಿಸಿಲ್ಲ. ಈಗ ಜನತೆ ಬೆವರಿನಿಂದ ಕಟ್ಟಿದ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಜನರೇ ತೆರಿಗೆ ಮೂಲಕ ವರ್ಷಕ್ಕೆ 35 ಲಕ್ಷ ಕೋಟಿ ರೂ.ಗಳಷ್ಟು ಮೊತ್ತದ ಹಣ ಕಟ್ಟುತ್ತಿದ್ದಾರೆ. ಈ ಹಣವಾದರೂ ಎಲ್ಲಿ ಹೋಗಿದೆ ಎಂದು ಪ್ರಧಾನಿ ಹೇಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐ (ಎಂ) ರಾಜ್ಯ ಸಮಿತಿ ಸದಸ್ಯ ನಿತ್ಯಾನಂದ ಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ನೂರಾರು ರೈತ ಸಂಘಟನೆಗಳು ದೆಹಲಿ ಗಡಿಗಳಲ್ಲಿ 11 ತಿಂಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೂ, ರೈತರ ಹೋರಾಟಕ್ಕೆ ಸ್ಪಂದಿಸುವ ಮನಸ್ಸು ಮೋದಿ ಸರ್ಕಾರಕ್ಕಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Advertisement

ಇದನ್ನೂ ಓದಿ: ಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಿ ಕಲ್ಯಾಣಪ್ಪ ಮಳಖೇಡ

ಮೋದಿ ಸರ್ಕಾರ ಜನ ವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಇಂತಹ ಕೆಟ್ಟ ಸರ್ಕಾರದಿಂದ ಮುಕ್ತಿ ಹೊಂದಲು ರೈತ ಹೋರಾಟವೊಂದೇ ಆಶಾಕಿರಣವಾಗಿದೆ. ಆದ್ದರಿಂದ ಈ ಹೋರಾಟದಲ್ಲಿ ಕಾರ್ಮಿಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕು. ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ಮಿತಿ ಮೀರಿವೆ. ಇವುಗಳನ್ನು ತಡೆಯಲು ಒಂದಾಗಿ ಹೋರಾಟ ಮಾಡಬೇಕಿದೆ ಎಂದರು.

ಜಿಲ್ಲಾ ಅಖೀಲ ಭಾರತ ಕಿಸಾನ್‌ ಸಭಾದ ಅಧ್ಯಕ್ಷ ಮೌಲಾ ಮುಲ್ಲಾ ಮಾತನಾಡಿ, ಮಾರುತಿ ಮಾನ್ಸಡೆ ಅವರು ಅಂಬಲಗಿ ಎನ್ನುವ ಪುಟ್ಟ ಗ್ರಾಮದಲ್ಲಿ ಜನಿಸಿದವರು. ತಮ್ಮ ಬದ್ಧತೆ ಮತ್ತು ಹೋರಾಟದಿಂದಲೇ ಅವರು ರಾಜ್ಯಾದ್ಯಂತ ಹೆಸರು ಮಾಡಿದ್ದರು. ಅವರ ಅಗಲಿಕೆಯಿಂದ ರಾಜ್ಯದ ರೈತ, ಕಾರ್ಮಿಕ ಚಳವಳಿಗೆ ದೊಡ್ಡ ನಷ್ಟವಾಗಿದೆ ಎಂದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ, ಪ್ರಮುಖರಾದ ಕೆ.ನೀಲಾ, ಶ್ರೀಮಂತ ಬಿರಾದಾರ, ಭೀಮಾಶಂಕರ ಮಾಡಿಯಾಳ, ಗೌರಮ್ಮ ಪಾಟೀಲ, ನಾಗಯ್ಯ ಸ್ವಾಮಿ, ಮೇಘರಾಜ ಕಠಾರೆ ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next