Advertisement

ಯಾರಿಗೆ ಒಲಿಯುತ್ತೆ ಪಟ್ಟ?

09:39 AM Jul 27, 2019 | Suhan S |

ಗದಗ: ಬರೋಬ್ಬರಿ 14 ತಿಂಗಳ ಬಳಿಕ ಬಿ.ಎಸ್‌. ಯಡಿಯೂರಪ್ಪ ಶುಕ್ರವಾರ ಸಂಜೆ ರಾಜಭವನದ ಗಾಜಿನ ಮನೆಯಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲೆಯ ಯಾವ ಶಾಸಕರಿಗೆ ಉಸ್ತುವಾರಿ ಹಾಗೂ ಸಚಿವ ಸ್ಥಾನ ಪಟ್ಟ ದೊರೆಯುತ್ತದೆ ಎಂಬುದು ಚರ್ಚೆಗೆ ಗ್ರಾಸವಾಗಿದೆ.

Advertisement

ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆಯಿಂದ ಅಲ್ಪಮತಕ್ಕೆ ಕುಸಿದು, ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳುವಂತಾಯಿತು. ಇದರ ಬೆನ್ನಲ್ಲೇ ಹೊಸ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿಯ ಬಿ.ಎಸ್‌. ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ 19ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೀಗಾಗಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಗದಗ ಹೊರತುಪಡಿಸಿ ಇನ್ನುಳಿದ ಮೂರರಲ್ಲಿ ಬಿಜೆಪಿ ಶಾಸಕರಿದ್ದು, ಯಾರಿಗೆ ಒಲಿಯಲಿದೆ ಮಂತ್ರಿಗಿರಿ ಎಂಬ ಚರ್ಚೆಗಳು ಜೋರಾಗಿವೆ.

ಸಚಿವ ಸ್ಥಾನದ ರೇಸ್‌ನಲ್ಲಿ ನರಗುಂದ ಶಾಸಕ ಸಿ.ಸಿ. ಪಾಟೀಲ, ರೋಣ ಕ್ಷೇತ್ರದ ಕಳಕಪ್ಪ ಬಂಡಿ ಅವರ ಹೆಸರುಗಳು ಮುಂಚೂಣಿಯಲ್ಲಿವೆ. 2008ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಿ ಉಭಯ ನಾಯಕರು ಸಚಿವರಾಗಿದ್ದರಿಂದ ಸಹಜವಾಗಿಯೇ ಈ ಮಾತುಗಳು ಕೇಳಿ ಬರುತ್ತಿವೆ. ಅದರಲ್ಲೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಪ್ತರಲ್ಲಿ ಒಬ್ಬರಾಗಿರುವ ಸಿ.ಸಿ. ಪಾಟೀಲ್ ಬಿಜೆಪಿ ಹಾಲಿ ಜಿಲ್ಲಾಧ್ಯಕ್ಷರಾಗಿದ್ದಾರೆ. 2004, 2008 ಮತ್ತು 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಂಸದೀಯ ಕಾರ್ಯದರ್ಶಿಯಾಗಿ (2008-2010), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾಗಿ (2010-2012) ಕಾರ್ಯನಿರ್ವಹಿಸಿದ್ದಾರೆ.

ಮಾಜಿ ಸಿಎಂ ಜಗದೀಶ ಶೆಟ್ಟರ್‌ ಅವರ ಆಪ್ತರಾದ ರೋಣ ಶಾಸಕ ಕಳಕಪ್ಪ ಬಂಡಿ, 2004, 2008 ಮತ್ತು 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಗದೀಶ ಶೆಟ್ಟರ್‌ ನೇತೃತ್ವದ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ಮಾಡಿದ್ದ ಅನುಭವವಿದ್ದು, ಅವರೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಈಗಾಗಲೇ ಕೇಂದ್ರ ಸರಕಾರ ಸಂಪುಟದಲ್ಲಿ ಬಿಜೆಪಿ ಹೊಸಬರಿಗೆ ಮಣೆ ಹಾಕುವ ಮೂಲಕ ಇಡೀ ದೇಶವನ್ನೇ ಬೆರಗಾಗಿಸಿತ್ತು. ಅದರಂತೆ ಶಿರಹಟ್ಟಿ (ಮೀಸಲು) ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿರುವ ರಾಮಣ್ಣ ಲಮಾಣಿ ಅವರಿಗೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಸಚಿವ ಸ್ಥಾನದ ಭಾಗ್ಯ ಬಾಗಿಲು ತಟ್ಟಿದರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.

Advertisement

ಮತ್ತೂಂದೆಡೆ ಕಾಂಗ್ರೆಸ್‌-ಜೆಡಿಎಸ್‌ನ ಅತೃಪ್ತ ಶಾಸಕರಿಗೆ ಬಿಜೆಪಿ ಸರಕಾರದಲ್ಲಿ ಮಂತ್ರಿಸ್ಥಾನ ನೀಡಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಒಂದೊಮ್ಮೆ ಅದು ನಿಜವಾದರೆ, ಬಿಜೆಪಿ ಶಾಸಕರಿಗಿಂತ ಹೊರಗಿನವರಿಗೆ ಮೊದಲ ಆದ್ಯತೆ ನೀಡಬೇಕಾಗುತ್ತದೆ. ಅದರಂತೆ 2018ರ ವಿಧಾನಸಭೆ ಚುನಾವಣೆಯಲ್ಲಿ ಗದಗ ಮತಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ಗೆಲುವು ಸಾಧಿಸುವಲ್ಲಿ ಸಫಲವಾಗಿತ್ತು. ಬಳಿಕ ಅಸ್ಥಿತ್ವಕ್ಕೆ ಬಂದ ಕಾಂಗ್ರೆಸ್‌-ಜೆಡಿಎಸ್‌ ಸರಕಾರದಲ್ಲಿ ನಾನಾ ಕಾರಣಗಳಿಂದಾಗಿ ಶಾಸಕ ಎಚ್.ಕೆ.ಪಾಟೀಲ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ. ಬಿಜೆಪಿ ಸರಕಾರದಲ್ಲೂ ಅಂತಹ ಪರಿಸ್ಥಿತಿಯೇ ಎದುರಾಗಿ, ಪ್ರದೇಶ, ಜಾತಿ, ಹಿರಿತನದ ಲೆಕ್ಕಾಚಾರದಲ್ಲಿ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ತಪ್ಪುವ ಸಾಧ್ಯತೆಗಳನ್ನೂ ತಳ್ಳಿಹಾಕಲಾಗದು ಎಂದು ವಿಶ್ಲೇಷಿಸಲಾಗುತ್ತಿದೆ.

ಇನ್ನು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗದಗ ಮತಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಹಾಗೂ ಬಿ. ಶ್ರೀರಾಮುಲು ಅವರ ಶಿಷ್ಯ ಅನಿಲ್ ಮೆಣಸಿನಕಾಯಿಗೆ ನಿಗಮ ಮಂಡಳಿಯೊಂದರ ಅಧ್ಯಕ್ಷ ಸ್ಥಾನ ಒಲಿಯಲಿದೆ ಎನ್ನುತ್ತಿವೆ ಪಕ್ಷದ ಮೂಲಗಳು.

 

•ವಿಶೇಷ ವರದಿ

Advertisement

Udayavani is now on Telegram. Click here to join our channel and stay updated with the latest news.

Next