Advertisement

ಯಾರು ಮಿನಿಸ್ಟರ್‌?

06:00 AM Nov 15, 2018 | |

ಬೆಂಗಳೂರು: ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್‌ ಅಕಾಲಿಕ ಮರಣದಿಂದ ರಾಜ್ಯದಲ್ಲಿ ಬಿಜೆಪಿ ಪ್ರಭಾವ ತಗ್ಗುವ ಆತಂಕದಲ್ಲಿರುವ ಬಿಜೆಪಿ ಹೈಕಮಾಂಡ್‌ ರಾಜ್ಯದ ಪ್ರಭಾವಿ ಸಂಸದರಿಗೆ ಸಚಿವ ಸ್ಥಾನ ನೀಡಲು ಗಂಭೀರ ಚಿಂತನೆ ನಡೆಸಿದೆ. ಸಂಸದರಾದ ಪ್ರಹ್ಲಾದ್‌ ಜೋಷಿ ಇಲ್ಲವೇ ನಳಿನ್‌ ಕುಮಾರ್‌ ಕಟೀಲು ಅವರಿಗೆ ಸಚಿವ ಸ್ಥಾನ ನೀಡುವ ಲೆಕ್ಕಾಚಾರದಲ್ಲಿದೆ.

Advertisement

ಸಿಂಗಾಪುರಕ್ಕೆ ತೆರಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಅನೌಪಚಾರಿಕವಾಗಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ಡಿಸೆಂಬರ್‌ ಎರಡನೇ ವಾರದಲ್ಲಿ ರಾಜ್ಯದ ಮತ್ತೂಬ್ಬ ಬಿಜೆಪಿ ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಹೆಚ್ಚು ಸ್ಥಾನ ಪಡೆಯುವ ಉದ್ದೇಶದಿಂದಲೇ ರಾಜ್ಯದ ಮತ್ತೂಬ್ಬ ಸಂಸದರಿಗೆ ಕೇಂದ್ರ ಸಚಿವ ಸ್ಥಾನ ನೀಡುವ ಲೆಕ್ಕಾಚಾರವನ್ನು ಕಮಲ ಪಾಳೆಯದ ರಾಷ್ಟ್ರೀಯ ನಾಯಕರು ನಡೆಸಿದ್ದಾರೆ.

ಕೇಂದ್ರ ಸಂಪುಟದಲ್ಲಿ ಅನಂತಕುಮಾರ್‌, ಡಿ.ವಿ.ಸದಾನಂದಗೌಡ, ರಮೇಶ್‌ ಜಿಗಜಿಣಗಿ, ಅನಂತ ಕುಮಾರ್‌ ಹೆಗಡೆ ಅವರಿಗೆ ಸಚಿವ ಸ್ಥಾನ ನೀಡಿತ್ತು. ಇದೀಗ ಅನಂತ ಕುಮಾರ್‌ ಅಕಾಲಿಕ ಮರಣದಿಂದಾಗಿ ಅವರು ನಿರ್ವಹಿಸುತ್ತಿದ್ದ ಖಾತೆಗಳ ಪೈಕಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯನ್ನು ಹೆಚ್ಚುವರಿಯಾಗಿ ಕೇಂದ್ರ ಸಾಂಖೀÂಕ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಹಾಗೂ ಸಂಸದೀಯ ವ್ಯವಹಾರ ಖಾತೆಯನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರಿಗೆ ಹೆಚ್ಚುವರಿಯಾಗಿ ಸದ್ಯ ವಹಿಸಲಾಗಿದೆ. ಆದರೆ ರಾಜ್ಯದ ಮತ್ತೂಬ್ಬ ಸಂಸದರಿಗೆ ಸಚಿವ ಸ್ಥಾನ ನೀಡಲು ಬಿಜೆಪಿ ರಾಷ್ಟ್ರೀಯ ನಾಯಕರು ಚಿಂತಿಸಿದ್ದಾರೆ.

ದಕ್ಷಿಣ ಭಾರತ ರಾಜ್ಯಗಳ ಪೈಕಿ ಬಿಜೆಪಿ ಕರ್ನಾಟಕದಲ್ಲಿ ಸದೃಢವಾಗಿದ್ದು, ಕಳೆದ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದಿಂದ 17 ಸಂಸದರು ಆಯ್ಕೆಯಾಗಿದ್ದರು. ಇತ್ತೀಚೆಗೆ ನಡೆದ ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋತಿರುವುದು ಹಾಗೂ ಅನಂತಕುಮಾರ್‌ ನಿಧನದಿಂದ ಬಿಜೆಪಿ ಸಂಸದರ ಸಂಖ್ಯೆ 15ಕ್ಕೆ ಕುಸಿದಿದೆ. ಮುಂದಿನ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ. ಆಂಧ್ರ ಪ್ರದೇಶದಲ್ಲಿ ಟಿಡಿಪಿಯೊಂದಿಗಿನ ಮೈತ್ರಿ ಮುರಿದ ಹಿನ್ನೆಲೆಯಲ್ಲಿ ಕರ್ನಾಟಕದಿಂದಲೇ ಹೆಚ್ಚು ಸ್ಥಾನ ಪಡೆಯುವ ಲೆಕ್ಕಾಚಾರ ನಡೆಸಿದ್ದು, ರಾಜ್ಯದ ಸಂಸದರಿಗೆ ಸಚಿವ ಸ್ಥಾನ ನೀಡುವುದು ಬಿಜೆಪಿಗೆ ಅನಿವಾರ್ಯ ಎನ್ನಲಾಗಿದೆ.

Advertisement

ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರಹ್ಲಾದ್‌ ಜೋಷಿ ಹೈದರಾಬಾದ್‌ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ಪ್ರಭಾವಿ ಎನಿಸಿದ್ದಾರೆ. ರಾಜ್ಯಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ ಅನುಭವವಿದ್ದು, ಬ್ರಾಹ್ಮಣ ಸಮುದಾಯದ ಕೋಟಾದಡಿ ಸಚಿವ ಸ್ಥಾನಕ್ಕೆ ಪರಿಗಣಿಸಬಹುದು. ಜತೆಗೆ ಸಂಘ ಪರಿವಾರದಲ್ಲೂ ಇದಕ್ಕೆ ಸಮ್ಮತಿ ವ್ಯಕ್ತವಾಗಲಿದೆ ಎಂದು ಹೇಳಲಾಗಿದೆ.

ಇನ್ನೊಂದೆಡೆ ರಾಜ್ಯದ ಕರಾವಳಿ ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಲು ಸಂಸದ ನಳಿನ್‌ ಕುಮಾರ್‌ ಕಟೀಲು ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ. ಯುವ ಸಂಸದರಿಗೆ ಅವಕಾಶ ನೀಡುವ ಮೂಲಕ ಯುವಜನತೆಯನ್ನು ಸೆಳೆಯುವ ಲೆಕ್ಕಾಚಾರವೂ ನಡೆದಿದೆ. ಸಿಂಗಾಪುರ ಪ್ರವಾಸ ಕೈಗೊಳ್ಳುವ ಮುನ್ನ ಪ್ರಧಾನಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅನೌಪಚಾರಿಕವಾಗಿ ಈ ಎಲ್ಲ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಲಿಂಗಾಯಿತ ಸಂಸದರ ಪರಿಗಣನೆ ಅಲ್ಲಗಳೆಯುವಂತಿಲ್ಲ!
ರಾಜ್ಯದ ಸಂಸದರೊಬ್ಬರಿಗೆ ಸಚಿವ ಸ್ಥಾನ ನೀಡುವುದಾದರೆ ಬ್ರಾಹ್ಮಣೇತರರನ್ನು ಪರಿಗಣಿಸುವ ಸಾಧ್ಯತೆಯನ್ನು ಅಲ್ಲಗಳಿಯುವಂತಿಲ್ಲ. ಸಂಸದ ಜಿ.ಎಂ.ಸಿದ್ಧೇಶ್ವರ್‌ ಅವರನ್ನು ಕೇಂದ್ರ ಸಂಪುಟದಿಂದ ಕೈಬಿಟ್ಟ ಬಳಿಕ ಲಿಂಗಾಯಿತರಿಗೆ ಆದ್ಯತೆ ಸಿಕ್ಕಂತಾಗಿಲ್ಲ. ಅಲ್ಲದೇ ಈಗಾಗಲೇ ಬ್ರಾಹ್ಮಣ ಸಮುದಾಯದ ಅನಂತ ಕುಮಾರ್‌ ಹೆಗಡೆ ಅವರು ಕೇಂದ್ರ ಸಚಿವರಾಗಿರುವ ಕಾರಣ ಲಿಂಗಾಯಿತ ಸಂಸದರಿಗೆ ಅವಕಾಶ ನೀಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಒಂದೊಮ್ಮೆ ಲಿಂಗಾಯಿತ ಸಂಸದರಿಗೆ ಸಚಿವ ಸ್ಥಾನ ನೀಡುವುದಾದರೆ ಬೆಳಗಾವಿಯಿಂದ ನಾಲ್ಕು ಬಾರಿ ಸಂಸದರಾಗಿರುವ ಸುರೇಶ್‌ ಅಂಗಡಿ ಇಲ್ಲವೇ ಹಾವೇರಿಯಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಶಿವಕುಮಾರ್‌ ಉದಾಸಿ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.

– ಎಂ. ಕೀರ್ತಿಪ್ರಸಾದ್‌

Advertisement

Udayavani is now on Telegram. Click here to join our channel and stay updated with the latest news.

Next