Advertisement

ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ ಮರಾಠಿಗರಿಗೆ ಅಸಡ್ಡೆ ಯಾಕೆ?: ಹೆಚ್ ಡಿಕೆ

02:48 PM Dec 19, 2021 | Team Udayavani |

ಬೆಂಗಳೂರು: ಶಿವಾಜಿ ಮಹಾರಾಜರ ಬಗ್ಗೆ ಗೌರವ ಕೊಡೋಣ. ಹಾಗಂತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ ಮರಾಠಿಗರಿಗೆ ಅಸಡ್ಡೆ ಯಾಕೆ? ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಗಲಿ ಎಂದು ಹೋರಾಟ ನಡೆಸಿದ ರಾಯಣ್ಣ ಅವರ ಪ್ರತಿಮೆ ಹಾಳು ಮಾಡಿದ ಕೆಟ್ಟ ಮನಸ್ಸುಗಳಿಗೆ ಏನು ಹೇಳುವುದು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಭಾನುವಾರ ಪ್ರಶ್ನಿಸಿದ್ದಾರೆ.

Advertisement

ಸರಣಿ ಟ್ವೀಟ್ ಮಾಡಿರುವ ಅವರು, ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ? ಎಂದು ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ ಎಂದು ರಾಜ್ಯ ಸರಕಾರದ ವಿರುದ್ಧವೂ ಅಸಮಾಧಾನ ಹೊರ ಹಾಕಿದ್ದಾರೆ.

ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ? ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.

ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next