Advertisement

ಕೃಷಿ ಕಾಯ್ದೆ ವಿರೋಧಿ ಹೋರಾಟಕ್ಕೆ ಮಹಿಳೆಯರ ಸಾಥ್ : ದೆಹಲಿ ಗಡಿಗೆ ಲಗ್ಗೆಯಿಟ್ಟ ರೈತ ನಾರಿಯರು

02:47 PM Mar 08, 2021 | Team Udayavani |

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಇಂದು ( ಮಾರ್ಚ್ 8) ಮಹಿಳೆಯರ ಬೆಂಬಲ ದೊರೆಯಿತು.

Advertisement

ವಿಶ್ವ ಮಹಿಳಾ ದಿನವಾದ ಇಂದು ಸಾವಿರಾರು ಸಂಖ್ಯೆಯಲ್ಲಿ ನಾರಿಯರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ 100 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ. ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶಗಳಿಂದ ಆಗಮಿಸಿದ ರೈತ ಮಹಿಳೆಯರು ಪ್ರತಿಭಟನೆಯ ಕಿಚ್ಚು ಹೆಚ್ಚಿಸಿದ್ದಾರೆ. ಹಸಿರು ಶಾಲು ಹೊದ್ದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿರುವ ನಾರಿಯರು, ಮೂರು ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.

ರೈತರ ಪ್ರತಿಭಟನೆಗೆ ಮಹಿಳೆಯರು ಪಾಲ್ಗೊಳ್ಳುವಂತೆ ಭಾರತೀಯ ಕಿಸಾನ್ ಒಕ್ಕೂಟ ಕರೆ ನೀಡಿತ್ತು. ಪ್ರತಿಭಟನಾ ಸ್ಥಳಕ್ಕೆ ಕರೆತರಲು 500 ಬಸ್, 600 ಮಿನಿ ಬಸ್ ಹಾಗೂ 115 ಟ್ರಕ್ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ರಾಜ್ಯಗಳಿಂದ ಬಂದಿರುವ ರೈತ ಮಹಿಳೆಯರು ಇಂದಿನ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿದ್ದಾರೆ. ಪ್ರತಿಭಟನಾ ನಿರತರಿಗೆ ಊಟ ಸೇರಿದಂತೆ ಅಗತ್ಯ ಸೇವೆಗಳನ್ನು ಕಲ್ಪಿಸುವ ಜವಾಬ್ದಾರಿಗಳನ್ನೂ ಮಹಿಳೆಯರೇ ನಿಭಾಯಿಸುತ್ತಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕಳೆದ ನವೆಂಬರ್ ತಿಂಗಳಿನಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸರ್ಕಾರ ಹಾಗೂ ರೈತರ ನಡುವೆ ಇದುವರೆಗೆ ನಡೆದ ಹಲವು ಸಂಧಾನಗಳೂ ಫಲ ನೀಡಿಲ್ಲ. ಛಲ ಬಿಡದ ರೈತರೂ ಸಾವಿರ ದಿನಗಳ ವರೆಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next