Advertisement

ಪ್ರಜ್ಞಾಸಿಂಗ್‌ ಹೇಳಿಕೆ ಖಂಡಿಸಿ ಪ್ರತಿಭಟನೆ

05:07 PM May 19, 2019 | Team Udayavani |

ಯಾದಗಿರಿ: ಬಿಜೆಪಿ ನಾಯಕಿ ಸಾದ್ವಿ ಪ್ರಜ್ಞಾಸಿಂಗ್‌ ಅವರು ಮಹಾತ್ಮಾಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ ಗೊಡ್ಸೆ ದೇಶಭಕ್ತ ಎಂದಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ನಗರದ ಸುಭಾಶ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಪಕ್ಷದ ನಾಯಕರ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಮರಿಗೌಡ ಹುಲಕಲ್, ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟ ಗಾಂಧಿ ಹಂತಕನನ್ನು ದೇಶಭಕ್ತ ಎನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಸಂವಿಧಾನ ಬದಲಾಯಿಸುವ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಅವರನ್ನು ಸಂವಿಧಾನದ ಮೇಲೆ ಗೌರವಿದ್ದರೆ ಮೋದಿ ಸಂಪುಟದಿಂದ ವಜಾ ಮಾಡಬೇಕಿತ್ತು ಎಂದು ಸವಾಲ್ ಹಾಕಿದರು.

ಬಿಜೆಪಿಗರು ಪ್ರಜಾಪ್ರಭುತ್ವಕ್ಕೆ ಕಂಟಕ ತರುವ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದರೂ ಪಕ್ಷ ಅವರ ಮೇಲೆ ಯಾವುದೇ ಕ್ರಮಕೈಗೊಳ್ಳದಿರುವುದು ದುರದೃಷ್ಟಕರ ಎಂದರು. ಇದೀಗ ಗೊಡ್ಸೆಯನ್ನು ದೇಶಭಕ್ತ ಎಂದಿದ್ದಕ್ಕೆ ಅನಂತ ಕುಮಾರ ಹೆಗಡೆ ಮತ್ತು ನಳೀನ್‌ ಕಟೀಲ್ ಅವರೂ ಧ್ವನಿಗೂಡಿಸಿದ್ದು, ಪದೇ ಪದೇ ಇಂಥ ಹೇಳಿಕೆಗಳನ್ನು ನೀಡುವುದು ಒಳ್ಳೆಯದಲ್ಲ. ಇಂಥ ಹೇಳಿಕೆಗಳನ್ನು ನೀಡುವುದಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪಾತ್ರವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಯುವ ಕಾಂಗ್ರೆಸ್‌ ಪ್ರ.ಕಾರ್ಯದರ್ಶಿ ರಾಘವೇಂದ್ರ ಮಾನಸಗಲ್, ಮಹಿಳಾ ಜಿಲ್ಲಾಧ್ಯಕ್ಷೆ ಮಂಜುಳಾ ಗೂಳಿ, ಜಿಲ್ಲಾ ಯುವ ಅಧ್ಯಕ್ಷ ರಝಾಕ್‌ ಸೇರಿದಂತೆ ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next