Advertisement

ಹೆಚ್ಚುವರಿ ಪ್ರೌಢಶಾಲೆ ಶಿಕ್ಷಕರ ಬಿಡುಗಡೆ ಬೇಡ

11:13 AM Jul 13, 2019 | Naveen |

ಯಾದಗಿರಿ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್ಸಿ ಫಲಿತಾಂಶ ಕುಂಠಿತವಾಗಿರುವುದರಿಂದ ಶಿಕ್ಷಣದ ಹಿತದೃಷ್ಟಿಯಿಂದ ಪ್ರೌಢ ಶಾಲೆಗಳ 40ಕ್ಕೂ ಹೆಚ್ಚಿನ ಹೆಚ್ಚುವರಿ ಶಿಕ್ಷಕರನ್ನು ಸೇವೆಯಿಂದ ಬಿಡುಗಡೆ ಮಾಡಬಾರದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಅವರಿಗೆ ಸೂಚಿಸಿದರು.

Advertisement

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ)ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಮತ್ತು ಎಸ್‌ಎಸ್‌ಎಲ್ಸಿ ಫಲಿತಾಂಶ ಹೆಚ್ಚಳಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ವಿಶೇಷ ತರಬೇತಿ ನೀಡಬೇಕು. ಅತಿಥಿ ಶಿಕ್ಷಕರನ್ನು ಶೀಘ್ರ ನೇಮಕ ಮಾಡಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಡಿಡಿಪಿಐ ಶ್ರೀಶೈಲ ಬಿರಾದಾರ ಮಾತನಾಡಿ, ಸರ್ಕಾರ 70 ಮಕ್ಕಳಿಗೆ ಒಬ್ಬ ಶಿಕ್ಷಕರಂತೆ ನಿಯಮ ಮಾಡಿದ್ದು, ಜಿಲ್ಲೆಯಲ್ಲಿ ಶಿಕ್ಷಕರು ಹೆಚ್ಚುವರಿಯಾಗಿದ್ದಾರೆ. ಶಿಕ್ಷಕರನ್ನು ಇಲ್ಲಿಯೇ ಉಳಿಸಿಕೊಳ್ಳುವ ಸಂಬಂಧ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಡಿ.ಎಲ್.ಇಡಿ ಮತ್ತು ಬಿ.ಇಡಿ ಪದವಿ ಪಡೆದ ಅಭ್ಯರ್ಥಿಗಳಿಗೆ ಟಿ.ಇ.ಟಿ. ಪೂರ್ವಭಾವಿ 3 ತಿಂಗಳಿನ ತರಬೇತಿಯನ್ನು ತಾಲೂಕುಗಳಲ್ಲಿ ಹಮ್ಮಿಕೊಳ್ಳಲು ಅರ್ಜಿ ಕರೆಯಲಾಗಿದೆ. ಜಿಲ್ಲೆಯಲ್ಲಿ ಅತಿಥಿ ಶಿಕ್ಷಕರ ನೇಮಕ ಪ್ರಗತಿಯಲ್ಲಿದೆ. ಆದ್ಯಾಗ್ಯೂ ಗಣಿತ ಮತ್ತು ಇಂಗ್ಲಿಷ್‌ ವಿಷಯಗಳ ಶಿಕ್ಷಕರ ಕೊರತೆ ಬೀಳುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.

ಸರ್ಕಾರದ ಯೋಜನೆಗಳಿಗೆ ಆಯಾ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಪ್ರಚಾರ ಕೊಡಬೇಕು. ಇದರಿಂದ ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪಲು ಮತ್ತು ಸಫಲವಾಗಲು ಸಾಧ್ಯವಾಗುತ್ತದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಇಲಾಖೆಗಳ ಯೋಜನೆಗಳ ಬಗ್ಗೆ ಅರ್ಧ ಗಂಟೆ ಜಾಗೃತಿ ಮೂಡಿಸಬೇಕು. ಇದರಿಂದ ವಿದ್ಯಾರ್ಥಿಗಳು ತಾವು ತಿಳಿದುಕೊಳ್ಳುವುದಲ್ಲದೇ ಪೋಷಕರು ಮತ್ತು ಅವರ ಗ್ರಾಮಗಳಲ್ಲಿ ಅರಿವು ಮೂಡಿಸಲು ಸಹಕಾರಿಯಾಗುತ್ತದೆ. ಕಾಲೇಜುಗಳಲ್ಲಿ ಪ್ರಚಾರ ನೀಡಿದ ಬಗ್ಗೆ ಮುಂದಿನ ಸಾಮಾನ್ಯ ಸಭೆಯಲ್ಲಿ ಮಾಹಿತಿ ನೀಡಬೇಕು ಎಂದು ಜಿಪಂ ಅಧ್ಯಕ್ಷರು ತಿಳಿಸಿದರು.

Advertisement

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್‌.ಮನ್ನಿಕೇರಿ, ವಿದ್ಯಾರ್ಥಿಗಳಿಗೆ ಯೋಜನೆಗಳ ಮಾಹಿತಿ ನೀಡುವುದು ಉತ್ತಮ ಸಲಹೆಯಾಗಿದೆ. ಮಕ್ಕಳು ಮುಂದಿನ ಭವಿಷ್ಯವಾಗಿರುವುದರಿಂದ ಅವರಲ್ಲಿ ಅರಿವು ಮೂಡಿಸುವುದು ಅವಶ್ಯಕವಾಗಿದೆ. ಹಾಗಾಗಿ, ವಿವಿಧ ಇಲಾಖೆಗಳ ಅಧಿಕಾರಿಗಳು ಕಾಲೇಜಿಗೆ ಬಂದಾಗ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಮಾತನಾಡಿ, ಜಿಲ್ಲೆಯಲ್ಲಿ ಮಳೆ ಕೊರತೆ ಇರುವುದರಿಂದ ಕುಡಿಯುವ ನೀರಿನ ಅಭಾವ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು. ವಿವಿಧ ನಿಗಮಗಳ ಗಂಗಾ ಕಲ್ಯಾಣ ಯೋಜನೆಯಡಿ 2017-18 ರಿಂದ ವಿದ್ಯುತ್‌ ಸಂಪರ್ಕ ಕಲ್ಪಿಸುವುದು ಬಾಕಿ ಇವೆ. ಈ ಬಗ್ಗೆ ಪ್ರತಿದಿನ ಸಾಕಷ್ಟು ಸಾರ್ವಜನಿಕ ದೂರುಗಳು ಬರುತ್ತಿವೆ. ಶೀಘ್ರ ವಿದ್ಯುತ್‌ ಸಂಪರ್ಕ ಕಲ್ಪಿಸಿದಲ್ಲಿ ರೈತರಿಗೆ ಸಹಕಾರಿಯಾಗುತ್ತದೆ. ಸಾವಿರ ಗಿಡ ನೆಟ್ಟರೆ 800 ಗಿಡಗಳು ರಕ್ಷಣೆಯಾಗಬೇಕು. ಆದರೆ, ಇವುಗಳಲ್ಲಿ 800 ಗಿಡಗಳು ಒಣಗಿದರೆ ಮಳೆ ಕೊರತೆ ಜೊತೆಗೆ ಮುಂದಿನ ಪೀಳಿಗೆ ಉಸಿರಾಡುವುದಕ್ಕೂ ತೊಂದರೆ ಅನುಭವಿಸಬೇಕಾಗುತ್ತದೆ. ಹಾಗಾಗಿ, ಸಂಬಂಧಪಟ್ಟ ಅಧಿಕಾರಿಗಳು ಗಿಡ ಬೆಳೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಅಕ್ಷರ ದಾಸೋಹ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಜಿಲ್ಲೆಗೆ 61.42 ಕೋಟಿ ರೂ. ಅನುದಾನ ನಿಗದಿಪಡಿಸಿದ್ದು, ಈ ಪೈಕಿ 15.35 ಕೋಟಿ ರೂ. ಬಿಡುಗಡೆಯಾಗಿದೆ. ಜಿಲ್ಲೆಯ 1.73 ಲಕ್ಷ ಮಕ್ಕಳು ಈ ಯೋಜನೆಗಳ ಲಾಭ ಪಡೆಯಲಿದ್ದಾರೆ ಎಂದು ಅಕ್ಷರ ದಾಸೋಹ ಅಧಿಕಾರಿ ದೊಡ್ಡಪ್ಪ ಹೊಸಮನಿ ತಿಳಿಸಿದರು. ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ ಆರ್‌ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ಬಿತ್ತನೆ ಕ್ಷೇತ್ರದ ಗುರಿ 3.53 ಲಕ್ಷ ಹೆಕ್ಟೇರ್‌ ಇದ್ದು, ಮಳೆ ಕೊರತೆಯಿಂದಾಗಿ 80,637 ಹೆಕ್ಟೇರ್‌ ಪ್ರದೇಶದಲ್ಲಿ ಅಂದರೆ ಶೇ. 22.79ರಷ್ಟು ಮಾತ್ರ ಬಿತ್ತನೆಯಾಗಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆ ಇಲ್ಲ. 2018-19ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿದ 22 ಸಾವಿರ ರೈತರ ಪೈಕಿ 12,527 ರೈತರಿಗೆ 14.42 ಕೋಟಿ ರೂ. ಪರಿಹಾರ ಬಂದಿದೆ. ರೈತರ ಬ್ಯಾಂಕ್‌ ಖಾತೆಗಳಿಗೆ ಈಗಾಗಲೇ ಹಣ ಸಂದಾಯವಾಗಿದ್ದು, ರೈತರ ಪಟ್ಟಿಯನ್ನು ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರದರ್ಶಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 17ರ ವರೆಗೆ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ| ಶರಣಭೂಪಾಲರೆಡ್ಡಿ ಅವರು ಮಾತನಾಡಿ, ಏಪ್ರಿಲ್ನಿಂದ ಜೂನ್‌ ಅಂತ್ಯದವರೆಗೆ ಪ್ರಾಣಿಗಳ ಕೃತಕ ಗರ್ಭಧಾರಣೆಗೆ 5150 ಗುರಿ ಇದ್ದು, 4782 ಸಾಧನೆ ಮಾಡಲಾಗಿದೆ. ಪ್ರಾಣಿಗಳ ಗರ್ಭ ಪರೀಕ್ಷೆಗೆ 4200 ಗುರಿ ಇದ್ದು, 7,344 ಸಾಧನೆ ಮಾಡಲಾಗಿದೆ. ಕೋಳಿಗಳಿಗೆ ಕೊಕ್ಕರೆ ರೋಗಕ್ಕೆ ಲಸಿಕೆ ಹಾಕಲು 67,563 ಗುರಿ ಇದ್ದು, 90,084 ಸಾಧನೆ ಮಾಡಲಾಗಿದೆ ಎಂದು ವರದಿ ನೀಡಿದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣದ 944 ಕಾರ್ಮಿಕರನ್ನು ನೂತನ ಸಾಲಿನಲ್ಲಿ ನೋಂದಣಿ ಮಾಡಲಾಗಿದೆ. 2010ರಿಂದ ಇಲ್ಲಿಯವರೆಗೆ 19,325 ಪುರುಷರು, 10,737 ಮಹಿಳೆಯರು ಸೇರಿ ಒಟ್ಟು 30,062 ಕಾರ್ಮಿಕರು ನೋಂದಣಿಯಾಗಿದ್ದಾರೆ. ಈ ಫಲಾನುಭವಿಗಳು ಹಾಗೂ ಅವರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ, ಹೆರಿಗೆ ಸೌಲಭ್ಯ, ವೈದ್ಯಕೀಯ ಧನಸಹಾಯ, ಅಪಘಾತದಿಂದ ಮರಣ/ಶಾಶ್ವತ ದುರ್ಬಲತೆ ಪರಿಹಾರ, ವಿವಾಹ ಧನಸಹಾಯ ನೀಡಲಾಗುತ್ತಿದೆ ಎಂದು ಕಾರ್ಮಿಕ ನಿರೀಕ್ಷಕ ಶಿವಶಂಕರ ಬಿ.ತಳವಾರ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷೆ ಸರಸ್ವತಿ ಶುಭಾಶ್ಚಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸುನೀಲ್ ಬಿಸ್ವಾಸ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next