Advertisement

ಸರ್ವಾಂಗೀಣ ಅಭಿವೃದ್ಧಿಗೆ ದುಡಿಯೋಣ

12:32 PM Jan 27, 2020 | Naveen |

ಯಾದಗಿರಿ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು, ಅಧಿಕಾರಿಗಳು, ವೈದ್ಯರು, ಸರ್ವರು ಬದ್ಧತೆಯಿಂದ ತನು, ಮನದಿಂದ ದುಡಿಯೋಣ. ಈ ಮೂಲಕ ಯಾದಗಿರಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ರೂಪಿಸೋಣ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಕರೆ ನೀಡಿದರು.

Advertisement

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಭಾವೈಕ್ಯತಾ ಸಮಿತಿ ಸಂಯುಕ್ತಾಶ್ರಯದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ 71ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಗಣರಾಜ್ಯವಾದ ತರುವಾಯ ಜಿಲ್ಲೆ ಅನೇಕ ಬೆಳವಣಿಗೆ ಕಂಡಿದೆ. ನೂತನ ಜಿಲ್ಲೆಯಾದ ಯಾದಗಿರಿಗೆ ಈಗ ದಶಕದ ಸಂಭ್ರಮ. ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಯಾದ ನಂತರ ನಿರೀಕ್ಷೆ ಮೀರಿ ಬೆಳೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ವಸತಿ, ಶಾಲೆ ಕಟ್ಟಡ, ಆಸ್ಪತ್ರೆ, ರಸ್ತೆ, ಕುಡಿಯುವ ನೀರು, ಚರಂಡಿ, ವಿದ್ಯುದ್ದೀಪ ಹೀಗೆ ಮುಂತಾದ ಅಭಿವೃದ್ಧಿ ಕಾರ್ಯಗಳಿಂದ ಜಿಲ್ಲೆ ಪ್ರಗತಿ ಪಥದಲ್ಲಿ ಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜನಪ್ರತಿನಿಧಿಗಳ ಸಲಹೆ-ಸೂಚನೆಯಂತೆ ಪ್ರಮುಖವಾಗಿ ಶಿಕ್ಷಣ, ಆರೋಗ್ಯ, ಕೃಷಿ, ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ಕಳೆದ ನವೆಂಬರ್‌ನಲ್ಲಿ ಆರೋಗ್ಯ ಮತ್ತು ಪೌಷ್ಟಿಕಾಂಶದ ಡೆಲ್ಟಾ ಸ್ಕೋರ್‌ನಲ್ಲಿ ಜಿಲ್ಲೆ ದೇಶಕ್ಕೆ 3ನೇ ರ್‍ಯಾಂಕ್‌ ಪಡೆದಿದೆ ಎಂದು ಹೇಳಿದರು.

ಗಣರಾಜ್ಯೋತ್ಸವ ಸಾರ್ವಭೌಮತ್ವದ ಸಂಕೇತ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆಯುವುದರೊಂದಿಗೆ ಮುನ್ನೂರು ವರ್ಷಗಳ ದಾಸ್ಯದ ಸರಪಳಿ ಕಳಚಿಕೊಂಡ ಭಾರತದಲ್ಲಿ 1950ರ ಜನವರಿ 26 ರಂದು ಸಂವಿಧಾನವನ್ನು ಅಧಿಕೃತವಾಗಿ ಜಾರಿಗೊಳಿಸಿ ವಿಶ್ವದಲ್ಲಿ ತಾನೂ ಒಂದು ಸಾರ್ವಭೌಮ ರಾಷ್ಟ್ರ ಎಂದು ಸಾರಿದ ದಿನವೇ ಗಣರಾಜ್ಯೋತ್ಸವ.

Advertisement

ದಾಸ್ಯದಿಂದ ಬಿಡುಗಡೆಯಾದ ಸಂದರ್ಭವನ್ನು  ಸ್ವಾತಂತ್ರ್ಯೋತ್ಸವ ಎಂದು ಆಚರಿಸಿದರೆ, ರಾಷ್ಟ್ರದ ಸಾರ್ವಭೌಮತ್ವದ ಸಂಕೇತವಾಗಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ, ನೆಹರೂ, ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಹಾಗೂ ನೇತಾಜಿ ಸುಭಾಷಚಂದ್ರ ಬೋಸ್‌ ಅರಂತಹ ನಾಯಕರ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿ ಪಡೆದ ಸ್ವಾತಂತ್ರ್ಯ , ಸತ್ಯ-ಶಾಂತಿ ಹಾಗೂ ಅಹಿಂಸೆಯಿಂದ ಪ್ರೇರಿತಗೊಂಡಿದ್ದಾಗಿದೆ ಎಂದು ವಿವರಿಸಿದರು.

ಗಣರಾಜ್ಯದ ಇಂದಿನ ಅಸ್ತಿತ್ವಕ್ಕೆ ಸಂವಿಧಾನವೇ ತಳಹದಿ. ಸಂವಿಧಾನ ಕರಡು ಸಮಿತಿಯಲ್ಲಿ ಮತ್ತು ರಚನಾ ಸಭೆಯಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಪಾತ್ರ ವಿಶೇಷವಾಗಿತ್ತು. ತಮ್ಮ ಪಾತ್ರವನ್ನು ಸಂಪೂರ್ಣವಾಗಿ ನಿರ್ವಹಿಸುವಲ್ಲಿ ಡಾ|ಅಂಬೇಡ್ಕರ್‌ ಅವರಿಗೆ ಹಲವಾರು ದೇಶಗಳ ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿದ ಅನುಭವ ನೆರವಾಯಿತು. ಅವರ ಸೇವೆಗೆ ಮನ್ನಣೆ ದೊರೆತು ಅವರನ್ನು ಸಂವಿಧಾನದ ಪಿತಾಮಹ ಎಂದು ನಾವು ಸ್ಮರಿಸುವಂತಾಗಿದೆ ಎಂದು ಹೇಳಿದರು.

ಜಿಲ್ಲೆಯ ಜನರು ಗುಳೆ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ನೆರವಾಗುತ್ತಿದೆ. ಈ ಯೋಜನೆಯಡಿ 2019-20ನೇ ಸಾಲಿನಲ್ಲಿ 26.61 ಲಕ್ಷ ಮಾನವ ದಿನಗಳ ಗುರಿಯನ್ನು ನಿಗದಿಪಡಿಸಲಾಗಿದೆ. ಈಗಾಗಲೇ 19.27 ಲಕ್ಷ ಮಾನವ ದಿನಗಳ ಗುರಿ ತಲುಪಿದ್ದು, ಶೇ.72.41 ರಷ್ಟು ಸಾಧಿಸಲಾಗಿದೆ ಎಂದು ವಿವರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ 2013-14ರಿಂದ 2019-20ನೇ ಸಾಲಿನವರೆಗೆ ಒಟ್ಟು 2,506 ಕಾಮಗಾರಿ
ಕೈಗೊಂಡಿದ್ದು, ಇವುಗಳಲ್ಲಿ 1696 ಕಾಮಗಾರಿಗಳು ಪೂರ್ಣಗೊಂಡಿವೆ. 578 ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ. ಸಕಾಲ ಅರ್ಜಿಗಳ ವಿಲೆವಾರಿಯಲ್ಲಿ ನವೆಂಬರ್‌- 2019ರ ಮಾಹೆಯಲ್ಲಿ ಯಾದಗಿರಿ ಜಿಲ್ಲೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವುದಕ್ಕಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸಕಾಲ ಹಾಗೂ ಕಾರ್ಮಿಕ ಸಚಿವ ಎಸ್‌. ಸುರೇಶಕುಮಾರ ಜಿಲ್ಲೆಯ ಭೂಮಿ ಅಧಿಕಾರಿ, ಸಿಬ್ಬಂದಿ ಕಾರ್ಯ ಅಭಿನಂದಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪ ರೊಟ್ನಡಗಿ, ತಾಪಂ ಅಧ್ಯಕ್ಷೆ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್‌ ಭಗವಾನ್‌ ಸೋನವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

ಪಾಲ್ಗೊಂಡಿದ್ದರು. ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಮತ್ತು ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸರಕಾರಿ ಪದವಿ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿ ಡಾ| ಜ್ಯೋತಿಲತಾ ತಡಿಬಿಡಿಮಠ ನಿರೂಪಿಸಿದರು. ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next