Advertisement

ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನ ಕಾರ್ಯಕ್ರಮ

06:26 PM Jan 29, 2020 | Naveen |

ಯಾದಗಿರಿ: ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನ-2020 ರ ಕಾರ್ಯಕ್ರಮ ಜ. 30ರಿಂದ ಫೆಬ್ರವರಿ 13ರ ವರೆಗೆ ಜಿಲ್ಲಾದ್ಯಂತ ನಡೆಯಲಿದೆ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಎಸ್‌.ಸೋಮನಾಳ ಹೇಳಿದರು.

Advertisement

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಮಟ್ಟದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಜ.30ರಂದು ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಉದ್ಘಾಟಿಸಿ ಸಂದೇಶ ನೀಡುವರು ಎಂದು ತಿಳಿಸಿದರು.

ಜಿಲ್ಲೆಯ 123 ಗ್ರಾಪಂಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರಾಮಸಭೆ ನಡೆಸಿ ಆಯಾ ಗ್ರಾಪಂ ಅಧ್ಯಕರು ಕುಷ್ಠರೋಗ ನಿರ್ಮೂಲನೆ ಬಗ್ಗೆ ಸಾರ್ವಜನಿಕರಲ್ಲಿ ಮನವಿ ಮಾಡುವರು. ಮಹಾತ್ಮ ಗಾಂಧೀಜಿ ಕುಷ್ಠ ರೋಗ ವಿರೋಧಿ ಕೊಡುಗೆ ಬಗ್ಗೆ ಪಾತ್ರಾಭಿನಯ ಕಾರ್ಯಕ್ರಮ ಮಾಡಲಾಗುವುದು. ಸಪ್ನಾ-ರೋಲ್‌ ಪ್ಲೇ, ಕುಷ್ಠರೋಗದ ಬಗ್ಗೆ ಪ್ರಶ್ನೋತ್ತರ ಕಾರ್ಯಕ್ರಮ ಜಿಲ್ಲಾದ್ಯಂತ ಐಇಸಿ ಕಾರ್ಯಕ್ರಮ ನಡೆಸಲಾಗುವುದು. ಆಶಾ ಮತ್ತು ಕಿರಿಯ ಆರೋಗ್ಯ ಸಹಾಯಕರು ಸಮೀಕ್ಷೆ ನಡೆಸಿ ಕುಷ್ಠ ರೋಗಿಗಳನ್ನು ಗುರುತಿಸಲಿದ್ದಾರೆ. ಬಳಿಕ ಕುಷ್ಠ
ರೋಗಿಗಳಿಗೆ ಚಿಕಿತ್ಸೆ ಕೊಡಲಾಗುವುದು ಎಂದು ತಿಳಿಸಿದರು.

ಕುಷ್ಠರೋಗ ಮೈಕ್ರೋಬ್ಯಾಕ್ಟೀರಿಯಂ ಲೆಪ್ರಯಿಂದ ಉಂಟಾಗುವ ರೋಗ. ಇದು ಅನುವಂಶಿಕ ರೋಗವಲ್ಲ. ಕುಷ್ಠ ರೋಗ ಶಾಪಗ್ರಸ್ತವೂ ಅಲ್ಲ. ಪಾಪದ ಫಲವೂ ಅಲ್ಲ. ಚರ್ಮದ ಮೇಲೆ ತಿಳಿ-ಬಿಳಿ ತಾಮ್ರವರ್ಣದ ಮಚ್ಚೆಗಳಿಗೆ ಸ್ಪರ್ಶ ಜ್ಞಾನವಿರುವುದಿಲ್ಲ. ಈ ರೋಗದ ಲಕ್ಷಣಗಳು ಕಂಡು ಬಂದಾಗ ಗ್ರಾಮದಲ್ಲಿನ ಆಶಾ ಕಾರ್ಯಕರ್ತೆಯರು, ಎಎನ್‌ಎಂ ಹಾಗೂ ಆರೋಗ್ಯ ಕಾರ್ಯಕರ್ತೆಯರಿಗೆ ತಿಳಿಸಿ ಮಾರ್ಗದರ್ಶನ ಪಡೆಯಬಹುದು ಎಂದರು.

ಜಿಲ್ಲೆಯ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಎಂಡಿಟಿ ಚಿಕಿತ್ಸೆ ಉಚಿತವಾಗಿ ಲಭ್ಯವಿರುತ್ತದೆ. ಈ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಶೀಘ್ರ ರೋಗ ಪತ್ತೆ ಮಾಡಿ ಗುಣಪಡಿಸುವುದರಿಂದ ಅಂಗವಿಕಲತೆ ತಡೆಗಟ್ಟಬಹುದು. ಅಲ್ಲದೆ ಕುಷ್ಠರೋಗ ಮುಕ್ತರನ್ನಾಗಿಸಬಹುದು ಎಂದು ತಿಳಿಸಿದರು.

Advertisement

ಜಿಲ್ಲೆಯಲ್ಲಿ ಏಪ್ರಿಲ್‌-2019ರಿಂದ ಇಲ್ಲಿಯವರೆಗೆ 66 ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗಿದೆ. 2019-20ನೇ ಸಾಲಿನಲ್ಲಿ ಇಬ್ಬರಿಗೆ ಆರ್‌ಸಿಎಸ್‌(ಶಸ್ತ್ರಚಿಕಿತ್ಸೆ) ಮಾಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಒಬ್ಬರಿಗೆ ಆರ್‌ ಸಿಎಸ್‌(ಶಸ್ತ್ರಚಿಕಿತ್ಸೆ) ಮಾಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಭಗವಂತ ಅನವಾರ ಮಾತನಾಡಿ, ಕುಷ್ಠರೋಗದ ನಿರ್ಮೂಲನೆಗೆ ಎರಡು ವಿಧದ ಚಿಕಿತ್ಸೆಗಳಿವೆ. ಒಂದು ಮತ್ತು ಎರಡು ವರ್ಷ ಅವಧಿ ಚಿಕಿತ್ಸೆ ಇರುತ್ತದೆ. 2018-19ನೇ ಸಾಲಿನಲ್ಲಿ 52 ಜನ ಕುಷ್ಠರೋಗ ಹೊಂದಿದವರನ್ನು ಗುರುತಿಸಿ ಅದರಲ್ಲಿ 40ಜನರಿಗೆ ಯಶಸ್ವಿ ಚಿಕಿತ್ಸೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಆಂದೋಲನದಲ್ಲಿ ಕುಷ್ಠರೋಗ ಹೊಂದಿದವರನ್ನು ಸನ್ಮಾನಿಸಲಾಗುವುದು.
ಅಲ್ಲದೆ ಜನಪ್ರಿಯ ವ್ಯಕ್ತಿಯಿಂದ ಕಾರ್ಯಕ್ರಮದ ಕುರಿತು ಪ್ರಚಾರ ಮಾಡಲಾಗುವುದು ಎಂದು ತಿಳಿಸಿದರು.  ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ದೇಹದ ಮೇಲೆ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು, ತ್ವಚೆ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು ಇವುಗಳಲ್ಲಿ ಯಾವುದೇ ಚಿಹ್ನೆಗಳು ಕಂಡುಬಂದಲ್ಲಿ ತಕ್ಷಣವೇ ಸಮೀಪದ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಬೇಕು. ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿ ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಕುಷ್ಠರೋಗ ಜಾಗೃತಿ ಅಭಿಯಾನದ ಮತ್ತು ಪ್ರತಿಜ್ಞಾವಿಧಿ ಒಳಗೊಂಡ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಜಿಲ್ಲಾ ಕಿರಿಯ ಆರೋಗ್ಯ ಸಹಾಯಕ ಶರಣಯ್ಯ ಸ್ವಾಮಿ, ಶರಣಬಸವ ಹೊಸಮನಿ ಪತ್ರಿಕಾಗೋಷ್ಠಿಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next