ಉಡುಪಿ: ನಾಡಿನ ಕಲೆ ಸಂಸ್ಕೃತಿ ಉಳಿಸಲು ಯುವಜನತೆ ಹೆಚ್ಚು ಜವಾಬ್ದಾರಿ ವಹಿಸಬೇಕು. ಜನಪರ ಉತ್ಸವದಂತಹ ಕಾರ್ಯಕ್ರಮಗಳಿಂದ ನಮ್ಮ ಕಲೆ ಸಂಸ್ಕೃತಿಗೆ ಹೆಚ್ಚು ಪ್ರೋತ್ಸಾಹ ದೊರೆಯುತ್ತದೆ ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನವಚೇತನ ಯುವಕ-ಯುವತಿ ಮಂಡಲ ಕಟ್ಟೆಗುಡ್ಡೆ ಇದರ ಆಶ್ರಯದಲ್ಲಿ ಶನಿವಾರದಂದು ನಡೆದ ಜನಪರ ಉತ್ಸವ-2017 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲಾರಾಧನೆಯಿಂದ ಮನುಷ್ಯ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢಗೊಳ್ಳಲು ಸಾಧ್ಯ. ಮಕ್ಕಳಿಗೆ ನಾಡಿನ ಕಲೆ ಸಂಸ್ಕೃತಿಯ ಬಗ್ಗೆ ತಿಳಿಸಬೇಕು ಎಂದರು.
ಕಲಾವಿದ ಪ್ರದೀಪ್ಚಂದ್ರ ಕುತ್ಪಾಡಿ, ಕಡೆಕಾರು ಗ್ರಾ.ಪಂ. ಅಧ್ಯಕ್ಷ ರಘುನಾಥ ಕೋಟ್ಯಾನ್, ಉಪಾಧ್ಯಕ್ಷೆ ಮಾಲತಿ ಶೆಟ್ಟಿ, ತಾ.ಪಂ. ಸದಸ್ಯೆ ಶಿಲ್ಪಾ ರವೀಂದ್ರ ಕೋಟ್ಯಾನ್, ಉದ್ಯಾವರ ಗ್ರಾ.ಪಂ. ಅಧ್ಯಕ್ಷೆ ಸುಗಂಧಿ ಶೇಖರ್, ಉಪಾಧ್ಯಕ್ಷ ರಿಯಾಜ್ ಪಳ್ಳಿ, ನವಚೇತನ ಯುವಕ ಮಂಡಲದ ಅಧ್ಯಕ್ಷ ಗಿರೀಶ್, ಯುವತಿ ಮಂಡಲದ ಅಧ್ಯಕ್ಷೆ ಶಾರದಾ ಉಮೇಶ್, ಸದಸ್ಯ ರಾಘವೇಂದ್ರ ಕುತ್ಪಾಡಿ, ತಾ.ಪಂ. ಸದಸ್ಯೆ ರಜನಿ ಅಂಚನ್ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಹದೇವಪ್ಪ ಸ್ವಾಗತಿಸಿ, ಇಲಾಖೆಯ ತಾಂತ್ರಿಕ ವಿಭಾಗದ ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು. ಗಣೇಶ್ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.
ಅನಂತರ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಪ್ರಾರಂಭಕ್ಕೂ ಮುನ್ನ ಸ್ಥಳೀಯ ಕಲಾ ತಂಡದವರಿಂದ ಚೆಂಡೆ, ಕರಗ, ಸೋಮನ ಕುಣಿತ ವಲ್ಲದೆ, ಚಿತ್ರದುರ್ಗದ ಗಾರುಡಿ ಗೊಂಬೆ, ಕೀಲು ಕುದುರೆ ಕುಣಿತ, ರಾಮನಗರದ ಪೂಜಾ ಕುಣಿತ, ದಾವಣಗೆರೆ ತಂಡದಿಂದ ಡೊಳ್ಳು ಕುಣಿತ ಮೆರವಣಿಗೆ ಆಕರ್ಷಕವಾಗಿತ್ತು.